ETV Bharat / state

ಪತ್ನಿಯನ್ನು ಚೆನ್ನಾಗಿ ನೋಡಿಕೋ ಎಂದಿದ್ದೇ ತಪ್ಪಾಯ್ತು; ಇಬ್ಬರಿಗೆ ಚಾಕು ಇರಿತ, ಓರ್ವ ಸಾವು!

author img

By

Published : Jan 16, 2023, 7:34 AM IST

Knife attack on relatives
ಬೆಂಗಳೂರಿನಲ್ಲಿ ಸಂಬಂಧಿಕರ ಮೇಲೆ ಚಾಕುವಿನಿಂದ ಹಲ್ಲೆ

ಗಂಡ ಹೆಂಡತಿಯನ್ನು ಒಂದು ಮಾಡಲು ಸಂಬಂಧಿಕರು ಹೋಗಿದ್ದಾರೆ. ಈ ಸಂದರ್ಭದಲ್ಲಿ ಬುದ್ಧಿವಾದ ಹೇಳಿದ್ದು, ಕುಪಿತಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಬೆಂಗಳೂರು: ಪತ್ನಿಯನ್ನು ಚೆನ್ನಾಗಿ ನೋಡಿಕೋ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಇಬ್ಬರು ಸಂಬಂಧಿಕರಿಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಓರ್ವ ಮೃತಪಟ್ಟಿದ್ದಾನೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಸೋಲದೇವನಹಳ್ಳಿಯಲ್ಲಿ ಈ ಪ್ರಕರಣ ನಡೆದಿದೆ.

ಪೀಣ್ಯ 2ನೇ ಹಂತದ ತಿಗಳರಪಾಳ್ಯ ಮುಖ್ಯರಸ್ತೆಯ ನಿವಾಸಿ ಕೇಶವಮೂರ್ತಿ ಕೊಲೆಯಾಗಿದ್ದಾರೆ. ಈತನ ಮೈದುನ ಕಲ್ಲೇಶ್(27) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಜ.13 ರ ರಾತ್ರಿ ಈ ಘಟನೆ ನಡೆದಿದೆ. ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಭರತ್(27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಭರತ್ ಹಾಗೂ ಆತನ ಪತ್ನಿ ರಾಧಾ ನಡುವೆ ಆಗಾಗ ಜಗಳವಾಗುತ್ತಿತ್ತು. ಕೆಲವು ದಿನಗಳ ಹಿಂದೆ ಪತ್ನಿಯ ಜೊತೆ ಜಗಳ ಮಾಡಿಕೊಂಡು ಭರತ್ ಮನೆಗೆ ಹೋಗಿರಲಿಲ್ಲ. ಹೀಗಾಗಿ ರಾಧಾ ತಮ್ಮ ಅತ್ತೆಯ ಮಗ ಕೇಶವಮೂರ್ತಿಗೆ ಕರೆ ಮಾಡಿ, ನನ್ನ ಗಂಡ ಮೂರು ದಿನಗಳಿಂದ ಮನೆಗೆ ಬಂದಿಲ್ಲ. ಅಲ್ಲಿ ಎಲ್ಲಾದರೂ ಸಿಕ್ಕರೆ ಬುದ್ಧಿ ಹೇಳಿ ಮನೆಗೆ ಕಳುಹಿಸು ಎಂದು ಹೇಳಿದ್ದಾರೆ.

ಕೇಶವಮೂರ್ತಿ ಹಾಗೂ ಆತನ ಮೈದುನ ಕಲ್ಲೇಶ್ ಜ.13 ರಂದು ರಾತ್ರಿ 8 ಗಂಟೆಗೆ ಆರೋಪಿ ಭರತ್‌ಗೆ ಕರೆ ಮಾಡಿ ಪೀಣ್ಯ ಎರಡನೇ ಹಂತದ ಮಂದಾರ ಬಾರ್‌ಗೆ ಕರೆಸಿಕೊಂಡು, ಮೂವರು ಮದ್ಯ ಸೇವಿಸಿದ್ದಾರೆ. ಈ ವೇಳೆ ಕೇಶವಮೂರ್ತಿ, ಮೂರು ದಿನದಿಂದ ಮನೆಗೆ ಹೋಗದಿರುವ ಬಗ್ಗೆ ಭರತ್‌ನನ್ನು ಪ್ರಶ್ನಿಸಿ, ಹಲ್ಲೆ ಮಾಡಿದ್ದಾನೆ. ಇಬ್ಬರು ಪರಸ್ಪರ ಬೈದಾಡಿಕೊಂಡು ಸಮಾಧಾನವಾಗಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡಿದ್ದ ಭರತ್, ಪತ್ನಿಯ ಊರು ಮತ್ಕೂರಿಗೆ ಹೋಗೋಣವೆಂದು ಕೇಶವಮೂರ್ತಿ ಹಾಗೂ ಕಲ್ಲೇಶ್‌ನನ್ನು ಕರೆಯುತ್ತಾನೆ. ಬಳಿಕ ಮೂವರು ದ್ವಿಚಕ್ರ ವಾಹನದಲ್ಲಿ ಮತ್ಕೂರು ಕಡೆಗೆ ತೆರಳುವಾಗ ಮಾರ್ಗಮಧ್ಯೆ ಹೆಸರಘಟ್ಟ ಮುಖ್ಯರಸ್ತೆ ದ್ವಾರಕನಗರದ ಹಿಮಾಲಯ ಡಾಬಾ ಬಳಿಯ ಚಿಗಾರಿ ವೈನ್ಸ್‌ನಲ್ಲಿ ಮದ್ಯ ಖರೀದಿಸಿ ಅಲ್ಲೇ ಹೊರಗೆ ಕುಳಿತು ಮದ್ಯ ಸೇವಿಸಲು ಆರಂಭಿಸಿದ್ದಾರೆ.

ಮದ್ಯ ಸೇವನೆ ನಡುವೆ ರಾತ್ರಿ 10.55 ರ ಸುಮಾರಿಗೆ ಆರೋಪಿ ಭರತ್ ಏಕಾಏಕಿ ಕೇಶವಮೂರ್ತಿ ಹಾಗೂ ಕಲ್ಲೇಶ್‌ನನ್ನು ನಿಂದಿಸಲು ಆರಂಭಿಸಿದ್ದು, ‘ನನ್ನ ಮಕ್ಕಳ ನನಗೆ ಬುದ್ಧಿ ಹೇಳುತ್ತೀರಾ. ನಿಮ್ಮನ್ನು ಕೊಲೆ ಮಾಡದೆ ಬಿಡುವುದಿಲ್ಲ’ ಎಂದು ಜೇಬಿನಿಂದ ಚಾಕು ತೆಗೆದು ಮೊದಲು ಕಲ್ಲೇಶ್‌ಗೆ ಇರಿದಿದ್ದಾನೆ. ಕೇಶವಮೂರ್ತಿ ತಪ್ಪಿಸಿಕೊಂಡು ಓಡಲು ಪ್ರಯತ್ನಿಸಿದಾಗ, ಅಟ್ಟಾಡಿಸಿ ರಸ್ತೆಗೆ ಕೆಡವಿ ಎದೆ, ಹೊಟ್ಟೆ ಭಾಗಕ್ಕೆ ಹತ್ತಾರು ಬಾರಿ ಇರಿದು ದ್ವಿಚಕ್ರ ವಾಹನ ತೆಗೆದುಕೊಂಡು ಪರಾರಿಯಾಗಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಇಬ್ಬರು ಗಾಯಾಳುಗಳನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಎದೆ ಭಾಗಕ್ಕೆ ತೀವ್ರ ಹಾನಿಯಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೆ ಕೇಶವಮೂರ್ತಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಗಾಯಾಳು ಕಲ್ಲೇಶ್ ನೀಡಿದ ದೂರಿನ ಮೇರೆಗೆ ಕೊಲೆಗೆ ಯತ್ನ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಭರತ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಸ್ಟುಡಿಯೋ ಮಾಲೀಕನ ಭೀಕರ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.