ETV Bharat / state

ಲಭ್ಯತೆ ಆಧಾರದ ಮೇಲೆ ದೇವಸ್ಥಾನಗಳಿಗೆ ಜಮೀನು ಮಂಜೂರು: ಸಚಿವ ಆರ್. ಅಶೋಕ್

author img

By

Published : Feb 13, 2023, 8:53 PM IST

ರಾಜ್ಯದ ದೇವಸ್ಥಾನಗಳ ಸುಪರ್ದಿಯಲ್ಲಿರುವ ಜಮೀನುಗಳನ್ನು ಮಂಜೂರು ಮಾಡಲು ಅರ್ಜಿ ಸಲ್ಲಿಸಿದರೆ ಕಾನೂನು ಪ್ರಕಾರ ಜಮೀನು ಮಂಜೂರಾತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವಿಧಾನಸಭೆಯಲ್ಲಿ ಸಚಿವ ಆರ್​.ಅಶೋಕ್​ ಹೇಳಿದರು.

assembly-question-hour
ಸಚಿವ ಆರ್​. ಅಶೋಕ್​

ಬೆಂಗಳೂರು: ಲಭ್ಯತೆ ಆಧಾರದಲ್ಲಿ ದೇವಸ್ಥಾನಗಳಿಗೆ ಸರ್ಕಾರ ಜಮೀನು ಮಂಜೂರು ಮಾಡಲಿದೆ ಎಂದು ಮುಜರಾಯಿ ಸಚಿವರ ಪರವಾಗಿ ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ದೇವಸ್ಥಾನಗಳಿಗೆ ಜಾಗ ಮಂಜೂರಾತಿ ಕುರಿತಂತೆ ಕಾಂಗ್ರೆಸ್ ಶಾಸಕ ರಾಜೇಗೌಡ ಅವರು ಸರ್ಕಾರದ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ ಅವರು, ರಾಜ್ಯದ ದೇವಸ್ಥಾನಗಳ ಸುಪರ್ದಿಯಲ್ಲಿರುವ ಜಮೀನುಗಳನ್ನು ಮಂಜೂರು ಮಾಡಲು ಅರ್ಜಿ ಸಲ್ಲಿಸಿದರೆ ಕಾನೂನು ಪ್ರಕಾರ ಜಮೀನು ಮಂಜೂರಾತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ರಾಜ್ಯದಲ್ಲಿ ಕೆಲ ಖಾಸಗಿ ದೇವಾಲಯಗಳು ಗೋಮಾಳ, ಅರಣ್ಯ ಭೂಮಿಯಲ್ಲಿದೆ. ಸುಪ್ರೀಂಕೋರ್ಟ್​ನ ತೀರ್ಪನ್ನು ಗಮನದಲ್ಲಿಟ್ಟುಕೊಂಡು ಎಲ್ಲವನ್ನು ಮಾಡಬೇಕಾಗುತ್ತದೆ. ಯಾವುದೇ ಜಮೀನು ಮಂಜೂರಾತಿ ಬಗ್ಗೆ ಸಚಿವ ಸಂಪುಟವೇ ತೀರ್ಮಾನ ಕೈಗೊಳ್ಳುತ್ತದೆ. ದೇವಾಲಯಗಳ ಜಮೀನು ಮಂಜೂರಾತಿ ಬಗ್ಗೆ ಅರ್ಜಿ ಸಲ್ಲಿಸಿದರೆ ಆ ಅರ್ಜಿಗಳನ್ನು ಕಾನೂನು ಪ್ರಕಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಶೃಂಗೇರಿ ವಿಧಾನಸಭಾ ಕ್ಷೇತ್ರದ 5 ದೇವಸ್ಥಾನಗಳಿಗೆ ಜಮೀನುಗಳನ್ನು ಮಂಜೂರು ಮಾಡಿದೆ. ಶೃಂಗೇರಿ ತಾಲ್ಲೂಕಿನಲ್ಲಿ ಜಮೀನು ಮಂಜೂರಾತಿಯ ಪ್ರಕರಣಗಳು ಬಾಕಿ ಇಲ್ಲ ಎಂದು ತಿಳಿಸಿದರು.

ಮತ್ತೊಂದು ಪ್ರಶ್ನೆಗೆ ಮುಜರಾಯಿಯೇತರ ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಕುರಿತಂತೆ ಅಜಯ್ ಧರ್ಮಸಿಂಗ್ ಅವರು ಧಾರ್ಮಿಕ ದತ್ತಿ ಸಚಿವರಿಗೆ ಮನವಿ ಮಾಡಿಕೊಂಡರು. ಸಚಿವ ಜೊಲ್ಲೆ ಪರವಾಗಿ ಉತ್ತರಿಸಿದ ಕಂದಾಯ ಸಚಿವರು, ಕಳೆದ ಸಾಲಿನಲ್ಲಿ ರಾಜ್ಯದ ವಿವಿಧ ದೇವಸ್ಥಾನಗಳಿಗೆ 483.05 ಕೋಟಿ ಅನುದಾನವನ್ನು ಬಿಡುಗಡೆ ಮಾಡಿರುವುದಾಗಿ ಸದನಕ್ಕೆ ಮಾಹಿತಿ ನೀಡಿದರು.

ಪ್ರಕರಣ ಇತ್ಯರ್ಥ ಆದ ಕೂಡಲೇ ನೇಮಕ: ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ಕೂಡಲೇ ಪಶುಸಂಗೋಪನಾ ಇಲಾಖೆಯ 400 ವೈದ್ಯರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ್ ಅವರು ತಿಳಿಸಿದರು. ಮೈಸೂರು ಜಿಲ್ಲೆ ಪಿರಿಯಾ ಪಟ್ಟಣದಲ್ಲಿ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಜೆಡಿಎಸ್ ಶಾಸಕ ಮಹದೇವ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯ ನರೇಂದ್ರ ಮಾತನಾಡಿ, ಹೊಸ ಪಶು ಚಿಕಿತ್ಸಾಲಯಗಳನ್ನು ಆರಂಭಿಸುವುದರಿಂದ ಪ್ರಯೋಜನವಿಲ್ಲ. ಪಶು ಚಿಕಿತ್ಸಾಲಯಗಳಿಗೆ ವೈದ್ಯರನ್ನು ನೇಮಕ ಮಾಡಿ. ಹಲವೆಡೆ ವೈದ್ಯರೇ ಇಲ್ಲ. ನನ್ನ ಕ್ಷೇತ್ರದಲ್ಲಿ 9 ಪಶು ಚಿಕಿತ್ಸಾಲಯಗಳಿಗೆ ಒಬ್ಬ ವೈದ್ಯರಿದ್ದಾರೆ. ಹೀಗಾದರೆ ಹೇಗೆ ಎಂದು ಪ್ರಶ್ನಿಸಿದ್ದರು. ಸದಸ್ಯರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 400 ಪಶು ವೈದ್ಯರ ನೇಮಕವಾಗಿದೆ. ಒಂದಿಬ್ಬರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಹಾಗಾಗಿ ತಡವಾಗಿದೆ. ಆದಷ್ಟು ಬೇಗ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ನೂರು ಪಶು ಚಿಕಿತ್ಸಾ ಕೇಂದ್ರ ಆರಂಭ: ರಾಜ್ಯದಲ್ಲಿ ಹೊಸದಾಗಿ 100 ಪಶು ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 20 ಪಶು ಚಿಕಿತ್ಸಾಲಯಗಳನ್ನು ಆರಂಭಿಸಲು ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ ಎಂದು ಸಚಿವ ಪ್ರಭುಚೌವ್ಹಾಣ್ ಅವರು, ಬಿಜೆಪಿ ಸದಸ್ಯ ದೊಡ್ಡಗೌಡರ ಮಹಂತೇಶ ಬಸವಂತರಾಯ ಅವರ ಪ್ರಶ್ನೆಗೆ ಉತ್ತರಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಅನುದಾನ ನೀಡಿಲ್ಲ: ಲೋಕೋಪಯೋಗಿ ಇಲಾಖೆಯಲ್ಲಿ ರಸ್ತೆ ಅಭಿವೃದ್ಧಿಗೆ ಮೀಸಲಾದ ಎಸ್ಟಿಪಿ, ಟಿಎಸ್ಪಿ ಹಣವನ್ನು ವಸತಿ ಶಾಲೆ ಮತ್ತು ವಿದ್ಯಾರ್ಥಿನಿಲಯ ಕಾಮಗಾರಿಗಳಿಗೆ ಬಳಸಿಕೊಳ್ಳುವ ತೀರ್ಮಾನವನ್ನು ರಾಜ್ಯ ಅನುಸೂಚಿತ ಜಾತಿ ಪಂಗಡಗಳ ಅಭಿವೃದ್ಧಿ ಪರಿಷತ್ ಕೈಗೊಂಡಿದೆ. ಹಾಗಾಗಿ ಲೋಕೋಪಯೋಗಿ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಅನುದಾನ ಒದಗಿಸಿಲ್ಲ. ಸ್ವಲ್ಪ ಪ್ರಮಾಣದ ಹಣವನ್ನು ರಸ್ತೆ ಅಭಿವೃದ್ಧಿಗೆ ಒದಗಿಸುವಂತೆ ಪರಿಷತ್ ಸಭೆಯಲ್ಲಿ ಪ್ರತಿಪಾದನೆ ಮಾಡುವುದಾಗಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರವಾಗಿ ಉತ್ತರಿಸಿದರು.

ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯ ಪ್ರಿಯಾಂಕ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೇ ತಿಂಗಳಲ್ಲಿ ನಡೆದ ಸಭೆಯಲ್ಲಿ ಎಸ್ಟಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಲೋಕೋಪಯೋಗಿ ಇಲಾಖೆಗೆ ಒದಗಿಸಲಾದ ಅನುದಾನದಲ್ಲಿ ಮುಂದುವರೆದ ಕಾಮಗಾರಿಗಳಿಗೆ ಅನುದಾನ ಒದಗಿಸಿಕೊಂಡು ಉಳಿದ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ/ವಸತಿನಿಲಯ ಕಟ್ಟಡ ನಿರ್ಮಾಣಕ್ಕೆ ಉಪಯೋಗಿಸಿಕೊಳ್ಳಲು ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆ ಸೂಚಿಸಿ ಅನುಮೋದನೆ ನೀಡಲಾಗಿರುತ್ತದೆ. ಅದರಂತೆ ಈ ಅನುದಾನವನ್ನು 100 ಡಾ. ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯ ಹಾಗೂ 11 ಕ್ರೈಸ್ತ ವಸತಿ ಶಾಲೆಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಹೊಸ ರಸ್ತೆ ಕಾಮಗಾರಿಗಳಿಗೆ ಮಂಜೂರಾತಿ ನೀಡಿರುವುದಿಲ್ಲ ಎಂದರು.

ಹಲವೆಡೆ ಮೂಲ ಸೌಕರ್ಯಗಳು ಶೇ.80 ರಷ್ಟು ಆಗಿರುವುದರಿಂದ ಶಿಕ್ಷಣಕ್ಕೆ ಉತ್ತೇಜನ ನೀಡಲು ಪರಿಷತ್ ಈ ತೀರ್ಮಾನ ಕೈಗೊಂಡಿದೆ. ಇದರಿಂದ ಕೆಲ ಭಾಗಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂಬ ಬಗ್ಗೆ ಪರಿಷತ್ ಸಭೆಯಲ್ಲಿ ಪ್ರತಿಪಾದಿಸುತ್ತೇನೆ ಎಂದು ಅವರು ಹೇಳಿದರು. ಇದಕ್ಕೂ ಮೊದಲು ಪ್ರಶ್ನೆ ಕೇಳಿದ್ದ ಪ್ರಿಯಾಂಕ ಖರ್ಗೆ ಅವರು ಹಳೇ ಮೈಸೂರು ಭಾಗದಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿಯಾಗಿರಬಹುದು.

ಆದರೆ ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕುಗಳ ರಸ್ತೆ ಅಭಿವೃದ್ಧಿಗೆ ಹಣ ಬೇಕಾಗಿದೆ. ಹಾಗಾಗಿ ರಸ್ತೆ ಅಭಿವೃದ್ಧಿಗೆ ಹಣ ಒದಗಿಸಿ. ಈ ಬಗ್ಗೆ ಪರಿಷತ್ ಸಭೆಯಲ್ಲಿ ಪ್ರಸ್ತಾಪಿಸಿ ಎಂದು ಸರ್ಕಾರವನ್ನು ಕೋರಿದ್ದರು.

ಇದನ್ನೂ ಓದಿ: ಶಿವಲಿಂಗೇಗೌಡರು ಡಬಲ್ ಮೂಡ್​​ನಲ್ಲಿದ್ದಾರೆ ಎಂದ ಸಿ.ಟಿ.ರವಿ: ನಾನು ಅಭಿಮನ್ಯು ಆಗಲ್ಲ, ಅರ್ಜುನ ಆಗುತ್ತೇನೆಂದ ಶಿವಲಿಂಗೇಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.