ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನಡೆಸಿದ ಪ್ರಶ್ನೆ ಪತ್ರಿಕೆಯಲ್ಲಿ ಹಲವಾರು ತಪ್ಪುಗಳಿವೆ. ಪ್ರಶ್ನೆ ಪತ್ರಿಕೆ ತಯಾರಿಸಿದ ತಂಡವನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಮಾರ್ಚ್ 12-16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಯಿತು. ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ 15 ಪುಟಗಳ ಪಠ್ಯಕ್ರಮವನ್ನು ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿತ್ತು.
ಆದರೆ, ಪ್ರಶ್ನೆ ಪತ್ರಿಕೆಗಳಲ್ಲಿ ಅಕ್ಷರದೋಷ ಸೇರಿದಂತೆ ಹಲವಾರು ಲೋಪದೋಷಗಳಿದ್ದವು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಲವಾರು ಲಿಖಿತ ಮತ್ತು ಮೌಖಿಕ ದೂರಗಳು ಬಂದಿವೆ ಎಂದರು. ಕೃತಿಯ ಹೆಸರು, ಲೇಖಕರ ಹೆಸರು, ವಚನಕಾರರ ವಚನಗಳನ್ನು ಸರಿಯಾಗಿ ಬಳಸದೇ ಸಾಹಿತ್ಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ರೀತಿ ಮಾಡಿರುವುದು ಕನ್ನಡ, ಕನ್ನಡಿಗರಿಗೆ, ಕರ್ನಾಟಕಕ್ಕೆ ಮಾಡಿರುವು ಅಪಮಾನ. ಈ ಬಗ್ಗೆ ಪ್ರಾಧಿಕಾರಕ್ಕೆ 3 ದಿನಗಳೊಳಗಾಗಿ ಸಮಗ್ರ ಮಾಹಿತಿ ಕಳುಹಿಸಬೇಕು. ಸಂಬಂಧಪಟ್ಟವರ ಮೇಲೆ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಬೇಕು ಮತ್ತು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಅಧಿವೇಶನಕ್ಕೆ ಸಚಿವರು ಗೈರು: ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಗರಂ