ETV Bharat / state

ಬಿಬಿಎಂಪಿ ಅಗ್ನಿ ದುರಂತ.. ಮೂವರ ವಿರುದ್ಧ ಎಫ್​ಐಆರ್ ದಾಖಲು

author img

By

Published : Aug 12, 2023, 2:24 PM IST

Updated : Aug 12, 2023, 5:51 PM IST

ಬಿಬಿಎಂಪಿ ಅಗ್ನಿ ದುರಂತ,BBMP fire
ಬಿಬಿಎಂಪಿ ಅಗ್ನಿ ದುರಂತ

Fire accident at BBMP office: ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಡಿಸಿಪಿ ಶ್ರೀನಿವಾಸ್ ಗೌಡ

ಬೆಂಗಳೂರು: ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಬಿಎಂಪಿಯ ಚೀಫ್ ಎಂಜಿನಿಯರ್ ಪ್ರಹ್ಲಾದ್ ನೀಡಿರುವ ದೂರಿನ ಮೇರೆಗೆ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್​ಗಳಾದ ಆನಂದ್, ಸ್ವಾಮಿ ಹಾಗೂ ಡಿ ಗ್ರೂಪ್ ನೌಕರ ಸುರೇಶ್ ವಿರುದ್ಧ ಐಪಿಸಿ ಸೆಕ್ಷನ್ 337, 338 ಅಡಿ ನಿರ್ಲಕ್ಷ್ಯತನ ವಹಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಇಬ್ಬರು ಸಿಬ್ಬಂದಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರನ್ನ ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬಿಟುಮಿನ್​ ಏಕಾಗ್ರತೆ ಹಾಗೂ ಶಕ್ತಿಯ ಮಟ್ಟವನ್ನ ಪರೀಕ್ಷಿಸುವಾಗ ಬೆಂಜಿನ್ ಬಳಕೆ ಮಾಡುತ್ತಾರೆ. ಆ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು ಅವಘಡಕ್ಕೆ ಕಾರಣವಾಗಿರಬಹುದು ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ತಂಡ ಸಹ ಪರಿಶೀಲನೆ ನಡೆಸಿದೆ. ವರದಿ ಬಂದ ನಂತರ ನಿಖರವಾದ ಕಾರಣ ತಿಳಿದು ಬರಲಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಘಟನೆಯಲ್ಲಿ ಕೆಲವರಿಗೆ ಸುಮಾರು ಶೇ.25 ರಿಂದ 30ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಹೇಳಿಕೆಗಳನ್ನ ಪಡೆಯಲಾಗಿದೆ. ಲ್ಯಾಬ್ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯತನದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರೀಕ್ಷೆಗೆ ಅನುಮತಿ ಇತ್ತಾ?, ಪ್ರಮಾಣಿತ ಕಾರ್ಯಾಚರಣೆಯ ವಿಧಾನ ಹಾಗೂ ನಿಯಮಗಳನ್ನ ಅನುಸರಿಸಲಾಗಿತ್ತಾ? ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ: ತಾಂತ್ರಿಕ ವಿಚಾರಣೆಗೆ ಆದೇಶ

ಘಟನೆಯ ಹಿನ್ನೆಲೆ: ಬಿಬಿಎಂಪಿ ಮುಖ್ಯ ಕಚೇರಿಯ ಆವರಣದಲ್ಲಿರುವ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಹಾಗೂ ಕಚೇರಿ ಕಟ್ಟಡದಲ್ಲಿ ನಿನ್ನೆ (ಶುಕ್ರವಾರ) ಬೆಂಕಿ ಅನಾಹುತ ಸಂಭವಿಸಿತ್ತು. ಅವಘಡದಲ್ಲಿ 9 ಮಂದಿ ಪಾಲಿಕೆ ಸಿಬ್ಬಂದಿ ಗಾಯಗೊಂಡಿದ್ದರು. ಘಟನಾ ಸ್ಥಳಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಪ್ರತಿಕ್ರಿಯಿಸಿ, "ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯದಲ್ಲಿ ಘಟನೆ ನಡೆದಿದೆ. ಓವನ್ ಬಾಕ್ಸ್ ಲೀಕ್ ಆಗಿ ಅವಘಡ ಉಂಟಾಯಿತು. ಏಳು ಜನರಿಗೆ ಗಾಯವಾಗಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಈಗಾಗಲೇ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ಮಾಡುತ್ತಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎನ್ನುವುದು ತನಿಖೆಯ ನಂತರ ಗೊತ್ತಾಗಲಿದೆ" ಎಂದಿದ್ದರು.

ರಸ್ತೆ ಡಾಂಬರು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆನ್ಜೆಮಿನ್ ಎಂಬ ಕೆಮಿಕಲ್​​ ಅನ್ನು ಬಿಟುಮಿನ್ ಟೆಸ್ಟ್‌ಗೆ ಬಳಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ್ಪಾರ್ಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೇಲ್ಭಾಗದಲ್ಲಿದ್ದ ಕಚೇರಿಗೂ ಬೆಂಕಿ ಆವರಿಸಿತ್ತು.

ಇದನ್ನೂ ಓದಿ: Fire accident: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ; ಪೊಲೀಸ್ ತನಿಖೆಗೆ ಸಿಎಂ ಸೂಚನೆ- ಡಿಕೆಶಿ

Last Updated :Aug 12, 2023, 5:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.