ETV Bharat / state

ಕಾವೇರಿ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ, ಬೆಂಗಳೂರು ಬಂದ್​ಗೆ ಮಿಶ್ರ ಪ್ರತಿಕ್ರಿಯೆ​

author img

By ETV Bharat Karnataka Team

Published : Sep 26, 2023, 11:01 AM IST

Updated : Sep 26, 2023, 12:27 PM IST

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿದ್ದ ಬೆಂಗಳೂರು ಬಂದ್​ಗೆ‌ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಪೊಲೀಸರು ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

Cauvery issue
ಪ್ರತಿಭಟನಾಕಾರರು ವಶಕ್ಕೆ ಪಡೆದ ಪೊಲೀಸರು, ಬೆಂಗಳೂರು ಬಂದ್​ಗೆ ಮಿಶ್ರ ಪ್ರತಿಕ್ರಿಯೆ​

ಕಾವೇರಿ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ, ಬೆಂಗಳೂರು ಬಂದ್​ಗೆ ಮಿಶ್ರ ಪ್ರತಿಕ್ರಿಯೆ​

ಬೆಂಗಳೂರು: ಕಾವೇರಿ ವಿಚಾರಕ್ಕಾಗಿ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬೆಂಗಳೂರು ಬಂದ್​ಗೆ‌ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.‌ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನಾಕಾರರು ಬೆಳಗ್ಗೆ ಬೀದಿಗಿಳಿದು ಹೋರಾಟ ನಡೆಸಿದರು‌.‌ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್​ವರೆಗೂ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಗೆ ಪೊಲೀಸರು ತಡೆಯೊಡ್ಡಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸಿದಿರುವುದನ್ನು ಖಂಡಿಸಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು. ಬೇಕೇ ಬೇಕು ನ್ಯಾಯಬೇಕು ಎಂದು ಆಗ್ರಹಿಸಿದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಈ ವೇಳೆ ಕೆಲಕಾಲ ಹೈಡ್ರಾಮ ನಡೆಯಿತು. ಅಂತಿಮವಾಗಿ ಬಿಎಂಟಿಸಿ ಬಸ್​ಗಳಲ್ಲಿ ಮೂಲಕ ಪ್ರತಿಭಟನಾಕಾರರನ್ನು ಪೊಲೀಸರು ಕರೆದುಕೊಂಡು ಹೋದರು.

ಇದಕ್ಕೂ ಮುನ್ನ ಪ್ರತಿಭಟನಾಕಾರರೊಬ್ಬರು ಮಾತನಾಡಿ, ''ಕಾವೇರಿ ಹೋರಾಟ ನಿಲ್ಲೋದಿಲ್ಲ. ಸರ್ಕಾರ ಜನರ ಕಿವಿ ಮೇಲೆ ಹೂ ಇಡುತ್ತಿದೆ. ರಾಜ್ಯದಲ್ಲಿ ನಮಗೇ ನೀರಿಲ್ಲ. ಇಂಥ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಲ್ಲ. ಮೈಸೂರು ರಸ್ತೆಯ ಸ್ಯಾಟ್ ಲೈಟ್​ ಬಸ್‌ ನಿಲ್ದಾಣದಿಂದ ಟೌನ್ ಹಾಲ್‌ವರೆಗೆ ಬಂದಿದ್ದೇವೆ. ಇಲ್ಲಿಂದ ಫ್ರೀಡಂ ಪಾರ್ಕ್​ಗೆ ಹೋಗ್ತೀವಿ. ಅದಕ್ಕೆ ನಾವೂ ಹೂ ಇಟ್ಟುಕೊಂಡು ಪ್ರತಿಭಟನೆ ಮಾಡೋಕೆ ಬಂದಿದ್ದೇವೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಹುತೇಕ ಅಂಗಡಿಗಳು ಓಪನ್: ಬೆಂಗಳೂರು ಬಂದ್ ಬಿಸಿ ಜನಸಾಮಾನ್ಯರಿಗೆ ಅಷ್ಟಾಗಿ ತಟ್ಟಿಲ್ಲ. ಬಿಎಂಟಿಸಿ ಸೇರಿ ಖಾಸಗಿ‌ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗಿಲ್ಲ. ಎಂದಿನಂತೆ ಆಟೋ ಸಂಚಾರವಿದೆ. ಬಸ್​ಗಳು ಕಾರ್ಯನಿರ್ವಹಿಸುತ್ತಿವೆ. ಓಲಾ-ಉಬರ್ ಸೇರಿ ಕ್ಯಾಬ್ ಆಧಾರಿತ ಸೇವೆಯಲ್ಲಿ ಯಾವುದೇ ತೊಡಕಾಗಿರುವುದು ಕಂಡುಬಂದಿಲ್ಲ. ಬಂದ್ ಬಗ್ಗೆ ಸಾರ್ವಜನಿಕರಲ್ಲಿ ಉಂಟಾದ ಗೊಂದಲದಿಂದ ಎಂದಿನಂತೆ ತಮ್ಮ ವ್ಯಾಪಾರ ವಹಿವಾಟು ಹಾಗೂ ದೈನಂದಿನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಹಿಂದುಮುಂದು ನೋಡುತ್ತಿದ್ದಾರೆ. ಬಹುತೇಕ ಬಸ್​ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇಲ್ಲದಿರುವುದು ಕಂಡುಬಂತು. ಸಿಟಿ ಮಾರುಕಟ್ಟೆ ಕಾಂಪ್ಲೆಕ್ಸ್​ನಲ್ಲಿ ಬಂದ್ ಬೋರ್ಡ್ ಅಳವಡಿಸಲಾಗಿದ್ದು, ಸಂಜೆ 6 ಗಂಟೆ ತನಕ ಅಂಗಡಿ ಮುಂಗಟ್ಟುಗಳು ಬಂದ್ ಎಂದು ನಮೂದಿಸಲಾಗಿದ್ದು, ಇದಕ್ಕೆ ಕೆ.ಆರ್.ಮಾರುಕಟ್ಟೆ ಸಂಘದಿಂದ ಬೆಂಬಲ ವ್ಯಕ್ತವಾಗಿದೆ.

ಬೆಂಗಳೂರಲ್ಲಿ ಪ್ರತಿಭಟನೆ

ನಗರದಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಬಂದ್‌ನಿಂದ ಸಂಘಟನೆಗಳು ಹಿಂದೆ ಸರಿದಿವೆ. ಕೇವಲ ಪ್ರತಿಭಟನೆಗೆ ಬೆಂಗಳೂರು ಬಂದ್ ಸೀಮಿತವಾದಂತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಸ್‌ಗಳನ್ನು ತಮಿಳುನಾಡು ಸಾರಿಗೆ ಸಂಸ್ಥೆ ಕರೆಯಿಸಿಕೊಂಡಿದೆ. ಹೀಗಾಗಿ ನಗರದತ್ತ ತಮಿಳುನಾಡು ಬಸ್​ಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಯಲಹಂಕ ವಿಧಾನಸಭಾ ಕ್ಷೇತ್ರದ ನಾಲ್ಕು ಬಿಬಿಎಂಪಿ ವಾರ್ಡ್‌ಗಳಲ್ಲಿ ಮತ್ತು ಎಸ್ ಪಿ ರೋಡ್, ಅವೆನ್ಯೂ ರೋಡ್, ಚಿಕ್ಕಪೇಟೆ ಮಾರ್ಕೆಟ್ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲ ಸೂಚಿಸಿದ್ದಾರೆ.

ಏರ್​ಪೋರ್ಟ್​ಗೆ ತಟ್ಟದ ಬಂದ್ ಬಿಸಿ: ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಬಂದ್ ಪರಿಣಾಮ ಬೀರಿಲ್ಲ. ಆತಂಕದಲ್ಲೇ ಏರ್‌ಪೋರ್ಟ್‌ನತ್ತ ಬಂದ ಪ್ರಯಾಣಿಕರು ಎಂದಿನಂತೆ ಕಾರ್ಯನಿರ್ವಹಿಸುತ್ತಿರುವುದನ್ನು ನೋಡಿ ನಿಟ್ಟುಸಿರುಬಿಟ್ಟು ತಮ್ಮ ಪ್ರಯಾಣ ಮುಂದುವರೆಸಿದ್ದಾರೆ. ವಿಮಾನ ನಿಲ್ದಾಣ ಇಂದು ಎಂದಿನಂತೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ಮಧ್ಯಾಹ್ನ ಮತ್ತು ಸಂಜೆ ಇರುವ ವಿಮಾನಗಳಿಗೆ ಮುಂಚಿತವಾಗಿ ಬಂದಿರುವ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿ ಪಡೆಯುತ್ತಿರುವುದು ಸಾಮಾನ್ಯವಾಗಿತ್ತು. ಏರ್ಪೋರ್ಟ್​​ಗೆ ಬರುವ ವಾಹನ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಾಸ ಉಂಟಾಗಿಲ್ಲ. ಎಂದಿನಂತೆ ಓಲಾ, ಉಬರ್, ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರ ಕಂಡುಬಂತು.

ಮೆಟ್ರೋ ಪ್ರಯಾಣಿಕರಲ್ಲಿ ಇಳಿಕೆ: ಬೆಂಗಳೂರು ಬಂದ್ ಪರಿಣಾಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಪ್ರತಿ ದಿನ ಪ್ರಯಾಣಿಕರಿಂದ ತುಂಬಿರುತ್ತಿದ್ದ ನಮ್ಮ ಮೆಟ್ರೋ ರೈಲುಗಳು ಇಂದು ಬಹುಪಾಲು ಖಾಲಿ ಖಾಲಿ ಕಾಣುತ್ತಿದ್ದವು.

ನಾರಾಯಣ ಗೌಡ ಪೊಲೀಸ್ ವಶಕ್ಕೆ: ರಾಜಭವನದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಇದೇ ವೇಳೆ ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಕೆಲವು ಕಾರ್ಯಕರ್ತರು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ಶಾಪಿಂಗ್ ಮಾಲ್ ಬಂದ್: ಬೆಂಗಳೂರು ಬಂದ್​ಗೆ ಕೆಲ ಶಾಪಿಂಗ್ ಮಾಲ್​​ಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಕಾವೇರಿ ಹೋರಾಟಗಾರರನ್ನು ರಾತ್ರೋರಾತ್ರಿ ಬಂಧಿಸಿರುವುದು ಕಾಂಗ್ರೆಸ್ ಸರ್ಕಾರದ ಕಿಡಿಗೇಡಿತನದ ಪರಮಾವಧಿ: ಹೆಚ್​​ಡಿಕೆ ಕಿಡಿ

Last Updated :Sep 26, 2023, 12:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.