ETV Bharat / state

ಸಿಎಂ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್ ಹಿಂದೇಟು; ಸಾರಥಿ ಇಲ್ಲದೇ ಚುನಾವಣೆ ಪ್ರಚಾರ

author img

By

Published : Apr 3, 2023, 11:31 AM IST

ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪಕ್ಷವನ್ನು ಅಧಿಕಾರಕ್ಕೆ ತರಲು​ ಕಸರತ್ತು ನಡೆಸಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಆದರೆ ಈ ಎರಡು ರಾಷ್ಟೀಯ ಪಕ್ಷಗಳು ಈವರೆಗೂ ಸಿಎಂ ಅಭ್ಯರ್ಥಿಯ ಹೆಸರನ್ನು ಮಾತ್ರ ಘೋಷಣೆ ಮಾಡಿಲ್ಲ.

Etv Bharat
Etv Bharat

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಅಬ್ಬರದ ಪ್ರಚಾರ ನಡೆಸುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಗೆ ಸಾರಥಿ ಯಾರು ಎನ್ನುವುದನ್ನು ಇದುವರೆಗೂ ಘೋಷಣೆ ಮಾಡಲು ಸಾಧ್ಯವಾಗಿಲ್ಲ. ಚುನಾವಣೆ ಪೂರ್ವದಲ್ಲಿ ಸಿಎಂ ಅಭ್ಯರ್ಥಿ ಪ್ರಕಟಿಸುವ ದಿಟ್ಟತನ ಪ್ರದರ್ಶಿಸಲು ಎರಡೂ ಪಕ್ಷಗಳು ಹಿಂದೇಟು ಹಾಕತೊಡಗಿವೆ.

ಬಿಜೆಪಿ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿಯೂ ಕಾಂಗ್ರೆಸ್ ಪಕ್ಷವು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾರಥ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿವೆ. ಆದರೆ ಈ ರಾಷ್ಟ್ರೀಯ ಪಕ್ಷಗಳು ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಸಭೆ ಚುನಾವಣೆಗೆ ಸಿಎಂ ಅಭ್ಯರ್ಥಿ ಘೋಷಣೆ ಮಾಡದಂತಹ ಪರಿಸ್ಥಿತಿ ತಲುಪಿವೆ. ಸಾಮಾನ್ಯವಾಗಿ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯನ್ನು ಯಾವ ನಾಯಕರ ಸಾರಥ್ಯದಲ್ಲಿ ಎದುರಿಸಲಾಗುತ್ತದೆ. ಚುನಾವಣೆಯಲ್ಲಿ ಗೆದ್ದು ಬಂದರೆ ಯಾರು ಪ್ರಧಾನಿಯಾಗುತ್ತಾರೆ? ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವವರ ಹೆಸರನ್ನು ರಾಜಕೀಯ ಪಕ್ಷಗಳು ಚುನಾವಣೆಗೆ ಮೊದಲೇ ಘೋಷಣೆ ಮಾಡಿ ಅದರ ರಾಜಕೀಯ ಲಾಭ ಪಡೆಯುತ್ತವೆ. ಆದರೆ ರಾಜ್ಯ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಹೆಸರು ಹೇಳುವ ಧೈರ್ಯವನ್ನು ಬಿಜೆಪಿ ಮತ್ತು ಕಾಂಗ್ರೆಸ್ ತೋರಿಸುತ್ತಿಲ್ಲ.

ಬಿಜೆಪಿ ನಾಯಕರು
ಬಿಜೆಪಿ ನಾಯಕರು

ಯಡಿಯೂರಪ್ಪನವರ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಾಗುತ್ತದೆ ಎಂದು 2008ರಲ್ಲಿ ಹೆಸರು ಪ್ರಕಟಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಸಾರ್ವಜನಿಕವಾಗಿ ಹೇಳುತ್ತಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುತ್ತದೆ ಎಂದಷ್ಟೇ ತಿಳಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹಿಂದೊಮ್ಮೆ ಸಾರ್ವಜನಿಕ ಸಮಾರಂಭದ ವೇದಿಕೆಯಲ್ಲಿ ಹೇಳಿದ್ದ ಬಿಜೆಪಿಯ ಚಾಣಕ್ಯ ಕೇಂದ್ರ ಸಚಿವ ಅಮಿತ್ ಶಾ, ಚುನಾವಣೆ ಹತ್ತಿರವಾಗಿರುವಾಗ ಬಿಜೆಪಿ ನಾಯಕತ್ವದ ಬಗ್ಗೆ ಸ್ಪಷ್ಟವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹೆಸರು ಹೇಳದೇ ಮೌನಕ್ಕೆ ಮೊರೆಹೋಗಿದ್ದಾರೆ.

ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆಗೆ ಹೋದರೆ ಹೆಚ್ಚಿನ ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಬರಲು ಸಾಧ್ಯವೇ ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿಯೇ ಸ್ಪಷ್ಟ ಉತ್ತರವಿಲ್ಲ. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಗಳಾಗಲು ಆಕಾಂಕ್ಷಿತರು ಹಲವರಿದ್ದಾರೆ. ಆದರೆ ಯಾರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದರೆ ಅತ್ಯಧಿಕ ಕ್ಷೇತ್ರಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವೆನ್ನುವ ಉತ್ತರ ಪಕ್ಷದ ಮುಖಂಡರ ಬಳಿ ಇಲ್ಲ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಶಾಸಕ ಬಸನಗೌಡ ಯತ್ನಾಳ್, ಲೋಕಸಭೆ ಸದಸ್ಯ ಶಿವಕುಮಾರ ಉದಾಸಿ, ಮಾಜಿ ಸಚಿವ ಸುರೇಶ ಕುಮಾರ್, ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಕಣ್ಣಿಟ್ಟಿದ್ದಾರೆ. ಆದರೆ ಇವರ ಮುಖಂಡತ್ವದಲ್ಲಿ ಚುನಾವಣೆಗೆ ಹೋದರೆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸ ಬಿಜೆಪಿ ಹೈಕಮಾಂಡ್​ಗೆ ಇಲ್ಲವೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.

ರಾಜ್ಯದಲ್ಲಿ ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪನವರನ್ನು ಹೊರತುಪಡಿಸಿದರೆ ಜನ ಸಮೂಹದ ನಾಯಕರ ಕೊರತೆ ಇದ್ದಿದ್ದರಿಂದ ಸಾಮೂಹಿಕ ನಾಯಕತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಪ್ರಧಾನಿ ಮೋದಿ ಅವರ ಹೆಸರನ್ನೇ ಪ್ರಧಾನವಾಗಿ ಬಳಸಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನು ಆಕರ್ಷಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಇರಾದೆ ಬಿಜೆಪಿಯದ್ದಾಗಿದೆ.

ಕಾಂಗ್ರೆಸ್​ ನಾಯಕರು
ಕಾಂಗ್ರೆಸ್​ ನಾಯಕರು

ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಗೊಂದಲ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲ ಬಿಜೆಪಿಗಿಂತ ಭಿನ್ನವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಸಿಎಂ ಆಗಲು ಭಾರಿ ಪೈಪೋಟಿ ಏರ್ಪಟ್ಟಿದ್ದು ಕಾಂಗ್ರೆಸ್ ಹೈಕಮಾಂಡ್ ಸಹ ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ವಿಫಲವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸದ್ಯದ ಪರಿಸ್ಥಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇವರಿಬ್ಬರಲ್ಲಿ ಯಾರೊಬ್ಬರ ವಿರೋಧವನ್ನೂ ಕಟ್ಟಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ಸಾಮೂಹಿಕ ನಾಯಕತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಶಾಸಕರ ಅಭಿಪ್ರಾಯ ಆಧರಿಸಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿದೆ.

ವಿಧಾನಸಭೆ ಚುನಾವಣೆಗೆ ಮುನ್ನವೇ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರೂ ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬ್ರೇಕ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಇವರ ಜೊತೆಗೆ ತೆರೆಮರೆಯಲ್ಲಿ ವಿಧಾನ ಪರಿಷತ್​ನ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ಶಾಮನೂರು ಶಿವಶಂಕರಪ್ಪ, ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಹಲವರು ಮುಖ್ಯಮಂತ್ರಿ ಪದವಿ ಮೇಲೆ ಆಸೆ ಇಟ್ಟುಕೊಂಡು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೀಸಲಾತಿ ವಿರೋಧಿ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.