ETV Bharat / state

ರಾಜ್ಯಪಾಲ ಹುದ್ದೆಗೆ ಲಂಚ ಕೊಟ್ಟ ಆರೋಪ ಪ್ರಕರಣ : ನಿವೃತ್ತ ನ್ಯಾಯಮೂರ್ತಿಗೆ ಹೈಕೋರ್ಟ್ ನೋಟಿಸ್

author img

By

Published : Oct 1, 2021, 9:14 PM IST

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು, ಸಿಸಿಬಿ ಮಹಿಳಾ ಘಟಕದ ಎಸಿಪಿ, ನಗರ ಪೊಲೀಸ್ ಆಯುಕ್ತರು ಹಾಗೂ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಇಂದ್ರಕಲಾ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು..

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಇಂದ್ರಕಲಾ ಅವರು ರಾಜ್ಯಪಾಲ ಹುದ್ದೆಗಾಗಿ ಯುವರಾಜ್ ಸ್ವಾಮಿಗೆ 8.8 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಎಲ್ಲ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.

ದೂರು ನೀಡಿದ್ದರೂ ಪೊಲೀಸರು ತನಿಖೆ ನಡೆಸಿಲ್ಲ. ಹೀಗಾಗಿ, ತನಿಖೆಗೆ ನಿರ್ದೇಶಿಸಬೇಕು ಎಂದು ಕೋರಿ ವಕೀಲ ಎನ್ ಪಿ ಅಮೃತೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು, ಸಿಸಿಬಿ ಮಹಿಳಾ ಘಟಕದ ಎಸಿಪಿ, ನಗರ ಪೊಲೀಸ್ ಆಯುಕ್ತರು ಹಾಗೂ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಇಂದ್ರಕಲಾ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಆರೋಪ : ಬಿಜೆಪಿ ನಾಯಕರಿಗೆ ಆಪ್ತನಾಗಿದ್ದು, ಕೆಲಸಗಳನ್ನು ಮಾಡಿಸಿ ಕೊಡುವುದಾಗಿ ನಂಬಿಸಿ ಹಲವು ಗಣ್ಯರು ಹಾಗೂ ಉದ್ಯಮಿಗಳಿಂದ ಹಣ ಪಡೆದು ವಂಚಿಸಿದ ಆರೋಪಕ್ಕೆ ಸಿಲುಕಿರುವ ಯುವರಾಜ್ ಸ್ವಾಮಿಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಇಂದ್ರಕಲಾ ಅವರು 8.8 ಕೋಟಿ ರೂಪಾಯಿ ನೀಡಿದ್ದಾರೆ. ರಾಜ್ಯಪಾಲ ಹುದ್ದೆಗಾಗಿ ಹಣ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಮೂಲಕ ಭ್ರಷ್ಟಾಚಾರಕ್ಕೆ ಬೆಂಬಲ ನೀಡಿರುವ ನಿವೃತ್ತ ನ್ಯಾಯಮೂರ್ತಿ ವಿರುದ್ಧ ತನಿಖೆ ಕೋರಿ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರೂ ಅದನ್ನು ಪರಿಗಣಿಸಿಲ್ಲ ಎಂದು ಅರ್ಜಿದಾರರ ಪರ ವಕೀಲ ಅಮೃತೇಶ್ ಆರೋಪಿಸಿದ್ದಾರೆ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶಿಸಿಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.