ETV Bharat / state

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು.. ಅಮಾಯಕರ ಮೇಲೆ ದಾಖಲಾಗಿದ್ದ ಕೇಸ್​ ವಾಪಸ್: ಕ್ಯಾಬಿನೆಟ್ ತೀರ್ಮಾನ​

author img

By

Published : Feb 21, 2023, 7:09 AM IST

Representative image
ಪ್ರಾತಿನಿಧಿಕ ಚಿತ್ರ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಹಾಗೂ ಪರೇಶ್ ಮೇಸ್ತಾ ಸಾವಿನ‌ ಪ್ರಕರಣದ ಬಳಿಕ‌ ನಡೆದ ಘಟನೆಯಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ಒಪ್ಪಿಗೆ ಹಾಗೂ ಪರೇಶ್ ಮೇಸ್ತಾ ಸಾವಿನ‌ ಪ್ರಕರಣದ ಬಳಿಕ‌ ನಡೆದ ಘಟನೆಯಲ್ಲಿ ಶಿರಸಿಯಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣ ವಾಪಸ್, ಜಲಜೀವನ ಮಿಷನ್ ಯೋಜನೆಯಡಿ 1051.07 ಕೋಟಿ ರೂ. ಅಂದಾಜು ಮೊತ್ತದ ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ ನಿನ್ನೆ(ಸೋಮವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ 48 ಗ್ರಾಮಗಳು ಮತ್ತು ಬೇಲೂರು ತಾಲೂಕಿನ 12 ಗ್ರಾಮಗಳಿಗೆ ಸಂಬಂಧಿಸಿದಂತೆ 38.96 ಕೋಟಿ ರೂ. ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಪುನಶ್ಚೇತನ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿಯ ಬಲಭಾಗದಲ್ಲಿರುವ 28 ಜನವಸತಿಗಳಿಗೆ, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ 240 ಜನವಸತಿಗಳಿಗೆ, ಮದ್ದೂರು ತಾಲೂಕಿನ 156 ಜನವಸತಿಗಳಿಗೆ, ಮಳವಳ್ಳಿ ತಾಲೂಕಿನ 151 ಜನವಸತಿಗಳಿಗೆ ಸೇರಿದಂತೆ ಒಟ್ಟು 885.19 ಕೋಟಿ ರೂ. ಅಂದಾಜು ಮೊತ್ತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮಳಚಾವುರ ಮತ್ತು ಇತರೆ 54 ಜನವಸತಿಗಳಿಗೆ 91.22 ಕೋಟಿ ರೂ. ಅಂದಾಜು ಮೊತ್ತದ ಪುನಶೇತ್ಚನ ಕಾಮಗಾರಿ ಮತ್ತು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಮತ್ತು ಇತರೆ 15 ಗ್ರಾಮಗಳಿಗೆ 36.50 ಕೋಟಿ ರೂ. ಮೊತ್ತದ ಪುನಶ್ಚೇತನ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ಸಿಎಂಗೆ ಅಭಿನಂದನೆ: ಮಂಡ್ಯ ಜಿಲ್ಲೆಯ ಐದು ಪ್ರತ್ಯೇಕ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ಕ್ರೀಡಾ ಸಚಿವ ನಾರಾಯಣಗೌಡ ಅಭಿನಂದಿಸಿದ್ದಾರೆ. ಪ್ರತಿಯೊಬ್ಬರಿಗೂ ಶುದ್ಧ ಕುಡಿಯವ ನೀರು ನೀಡಬೇಕು ಎಂಬುದು ನಮ್ಮ ಸರ್ಕಾರದ ಕನಸು. ಅದೇ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೂ ಶುದ್ಧೀಕರಣ ನೀರು ಪೂರೈಕೆ ಮಾಡುವ ಯೋಜನೆ ಜಾರಿಗೆ ತರಲಾಗಿದೆ.

ಜೆಜೆಎಂ ಯೋಜನೆಯಲ್ಲಿ ಮಂಡ್ಯ ಜಿಲ್ಲೆಗೆ ಸುಮಾರು 2 ಸಾವಿರ ಕೋಟಿ ರೂ.ನಷ್ಟು ಅನುದಾನ ನೀಡಲಾಗಿದೆ. ಮೊದಲ ಹಂತದಲ್ಲಿ ಕೆಆರ್ ಪೇಟೆ, ನಾಗಮಂಗಲ, ಪಾಂಡವಪುರ ತಾಲೂಕುಗಳಲ್ಲಿ 791 ಕೋಟಿ ರೂ. ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಇದೀಗ ಮಂಡ್ಯ ಜಿಲ್ಲೆಯಲ್ಲಿ ಸುಮಾರು 885 ಕೋಟಿ ರೂ. ಮೊತ್ತದ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಶೀಘ್ರವೇ ಕಾಮಗಾರಿ ಆರಂಭಿಸಿ, ಆದಷ್ಟು ಬೇಗ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದಿದ್ದಾರೆ.

ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣ ವಾಪಸ್: ಪರೇಶ್ ಮೇಸ್ತಾ ಸಾವಿನ‌ ಪ್ರಕರಣದ ಬಳಿಕ‌ ನಡೆದ ಘಟನೆಯಲ್ಲಿ ಶಿರಸಿಯಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ಸಂಪುಟ ತೀರ್ಮಾನಿಸಿದೆ. ಈ ಹಿಂದೆ‌ 26 ಪ್ರಕರಣಗಳನ್ನು ವಾಪಸ್ ಪಡೆಯಲಾಗಿತ್ತು. ಈಗ 112 ಜನರ ಮೇಲೆ ಉಳಿದು ಹೋಗಿದ್ದ 3 ಪ್ರಕರಣ ವಾಪಸ್ ಪಡೆಯಲಾಗಿದೆ. ವಾಪಸ್ ಪಡೆದದುಕ್ಕಾಗಿ ಸರ್ಕಾರವನ್ನು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದೇ ತಿಂಗಳು 27 ರಂದು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಮೊದಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡಲು ಚರ್ಚಿಸಲಾಗಿತ್ತು. ಆದರೆ, ಯಡಿಯೂರಪ್ಪ ಅವರು ತಮ್ಮ ಹೆಸರು ಇಡಲು ನಿರಾಕರಿಸಿದ್ದರು. ನಂತರ ಕುವೆಂಪು ಹೆಸರು ಇಡುವ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲು ನಿರ್ಧರಿಸಿದೆ.

ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಸೂಚಿಸಿದ ಬಿ.ಎಸ್.ಯಡಿಯೂರಪ್ಪ

ನೇಕಾರರಿಗೆ ಪ್ಯಾಕೇಜ್: ನೇಕಾರರ ಪ್ಯಾಕೇಜ್ ಯೋಜನೆಯಡಿ ಜವಳಿ ವಲಯಕ್ಕೆ ಸಂಬಂಧಿಸಿದಂತೆ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಹಣಕಾಸಿನ ನೆರವು ನೀಡಲು, ವಿದ್ಯುತ್ ಮಗ್ಗ ನೇಕಾರರಿಗೆ ಮತ್ತು ಮಗ್ಗ ಪೂರ್ವ ಘಟಕಗಳ ಕಾರ್ಮಿಕರಿಗೆ ವಾರ್ಷಿಕ 5000 ರೂ. ನಂತೆ ಆರ್ಥಿಕ ನೆರವು ನೀಡಲು ಹಾಗೂ ನೇಯ್ದೆ ಉದ್ದೇಶಗಳಿಗಾಗಿ ಸಹಕಾರಿ ಬ್ಯಾಂಕುಗಳು ಮತ್ತು ಸಹಕಾರ ಸಂಘಗಳ ಮೂಲಕ 2.00 ಲಕ್ಷ ರೂ.ಗಳ ವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಡಿಸೆಂಬರ್ 2022ರಲ್ಲಿ ಹೊರಡಿಸಿರುವ ಮೂರು ಸರ್ಕಾರಿ ಆದೇಶಗಳಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

'ಕರ್ನಾಟಕ ಸಹಕಾರ ಸೇವೆ (ವೃಂದ ಮತ್ತು ನೇಮಕಾತಿ) ನಿಯಮಗಳು 2023'ಕ್ಕೆ ಅನುಮೋದನೆ, ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನಿವೃತ್ತ ಜಿಲ್ಲಾ ಮತ್ತು ಕಾರ್ಯನಿರ್ವಹಿಸುತ್ತಿರುವ ಮೂವರು ಸೆಷನ್ಸ್ ನ್ಯಾಯಾಧೀಶರುಗಳ ಸೇವೆಗಳನ್ನು ಮತ್ತೊಂದು ವರ್ಷದ ಅವಧಿಗೆ ಮುಂದುವರೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ದಿನಾಂಕ:10.01.2023 ರಂದು ನಡೆದ ಸಚಿವ ಸಂಪುಟದ ಉಪಸಮಿತಿ ಸಭೆಯ ಶಿಫಾರಸ್ಸಿನಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 10 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯುವ ಬಗ್ಗೆ ಮತ್ತು ದಿನಾಂಕ: 20.01.2023 ರಂದು ನಡೆದ ಸಚಿವ ಸಂಪುಟದ ಉಪಸಮಿತಿ ಸಭೆಯ ಶಿಫಾರಸ್ಸಿನಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 11 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯುವ ಬಗ್ಗೆ ಸಂಪುಟ ತೀರ್ಮಾನಿಸಿದೆ.

ಮಹಿಳಾ ಐಎಎಸ್- ಐಪಿಎಸ್ ಕಿತ್ತಾಟದ ಬಗ್ಗೆಯೂ ಚರ್ಚೆ: ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ಗಲಾಟೆ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಹೀಗೆ ಕಿತ್ತಾಡಿದರೆ ಸರ್ಕಾರದ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಅವರ ಮೇಲೆ ಕ್ರಮ ಜರುಗಿಸಬೇಕೆಂದು ಕೆಲ ಸಚಿವರು, ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪರೇಶ್​ ಮೇಸ್ತಾ ಪ್ರಕರಣ : ಬಿಜೆಪಿ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.