ಬೆಂಗಳೂರು: ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ಆರಂಭವಾಗಿದೆ. ರೈತರಿಗೆ ಬರ ನಿರೋಧಕ ತಳಿಗಳು ಹಾಗೂ ಸಿರಿಧಾನ್ಯಗಳ ಮಹತ್ವ ಕುರಿತು ಮಾಹಿತಿ ನೀಡಲಾಗುತ್ತದೆ.
ಕೃಷಿ ಮೇಳ- 2023 ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾದರಿ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಶಾಸಕ ಶರತ್ ಬಚ್ಚೇಗೌಡ, ಕುಲಪತಿ ಡಾ. ಎಸ್.ವಿ. ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
![ಕೃಷಿ ಮೇಳ](https://etvbharatimages.akamaized.net/etvbharat/prod-images/17-11-2023/kn-bng-01-agricultural-fair-script-7208083_17112023134820_1711f_1700209100_70.jpg)
625 ಮಳಿಗೆಗಳ ಸ್ಥಾಪನೆ: ಕೃಷಿ ಮೇಳದಲ್ಲಿ ಸುಮಾರು 625 ಮಳಿಗೆಗಳನ್ನು ತೆರೆಯಲಾಗಿದ್ದು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡುವ ಸಾಧ್ಯತೆ ಇದೆ. ಈ ಮೇಳದಲ್ಲಿ ರೈತರಿಗೆ ಕ್ಷೇತ್ರ ಸಂದರ್ಶನ, ಕೃಷಿ ವಿಜ್ಞಾನಿ, ತಜ್ಞರೊಂದಿಗೆ ಸಮಾಲೋಚನೆ, ಮಾರ್ಗದರ್ಶನ, ತಾಕುಗಳಲ್ಲಿ ಪ್ರಾತ್ಯಕ್ಷಿಕೆ, ಹೊಸ ತಳಿಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ.
ಕೃಷಿಗೆ ಸಂಬಂಧಿಸಿದ ವಿವಿಧ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು ಹಾಗೂ ವಿವಿಗಳ ಎಲ್ಲ ವಿಭಾಗಗಳಲ್ಲಿ ನಡೆದಿರುವ ಸಂಶೋಧನೆ, ಆವಿಷ್ಕಾರದ ಮಾಹಿತಿಯನ್ನು ವಸ್ತುಪ್ರದರ್ಶನದಲ್ಲಿ ತಿಳಿಸಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಾರಿಯ ಕೃಷಿ ಮೇಳವನ್ನು ಆಹಾರ-ಆರೋಗ್ಯ- ಆದಾಯಕ್ಕಾಗಿ ಸಿರಿಧಾನ್ಯಗಳು ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದೆ ಎಂದು ಕುಲಪತಿ ಡಾ. ಎಸ್.ವಿ.ಸುರೇಶ್ ತಿಳಿಸಿದ್ದಾರೆ.
![Krushi Mela](https://etvbharatimages.akamaized.net/etvbharat/prod-images/17-11-2023/kn-bng-01-agricultural-fair-script-7208083_17112023134820_1711f_1700209100_394.jpg)
ಬರ ನಿರ್ವಹಣೆ ಕುರಿತು ರೈತರಿಗೆ ವಿವರವಾದ ಮಾಹಿತಿ ನೀಡಲಾಗುವುದು. ಕೃಷಿ ಹಾಗೂ ಅದರ ಪೂರಕ ಕಸುಬುಗಳಲ್ಲಿ ತೊಡಗಿಸಿಕೊಳ್ಳುವ ಸಮಗ್ರ ಮಾಹಿತಿಯನ್ನು ರೈತರಿಗೆ ನೀಡಲು ವಿವಿ ವಿಜ್ಞಾನಿಗಳು, ಸಂಶೋಧನಾ ವಿದ್ಯಾರ್ಥಿಗಳು ಸೇರಿ 500ಕ್ಕೂ ಹೆಚ್ಚು ಮಂದಿಯನ್ನು ಬಳಸಿಕೊಳ್ಳಲಾಗುತ್ತಿದೆ.
ಕೃಷಿ ಮೇಳದ ಆಕರ್ಷಣೆ ಏನು?: ರೈತರ ಆವಿಷ್ಕಾರ ಹಾಗೂ ಕೃಷಿ ನವೋದ್ಯಮ, ಕೃಷಿಯಲ್ಲಿ ನೂತನ ತಂತ್ರಜ್ಞಾನಗಳ ಬಗ್ಗೆ ಮಾಹಿತಿ, ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಹನಿ ಹಾಗೂ ತುಂತುರು ನೀರಾವರಿ ಪದ್ಧತಿ, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿ, ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ, ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ, ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಣ್ಣು ಪರೀಕ್ಷೆಗೆ ಅನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ.
ಇದನ್ನೂ ಓದಿ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಬೆಂಗಳೂರಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್, ದುಶ್ಯಂತ್ ಗೌತಮ್ ಕುಮಾರ್