ETV Bharat / state

ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸಲು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ: ಶೇಖಾವತ್​ಗೆ ಸಿಎಂ ತಿರುಗೇಟು

author img

By ETV Bharat Karnataka Team

Published : Oct 31, 2023, 9:45 PM IST

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೇಳಿದ ಐದು ಪ್ರಶ್ನೆಗಳ ಪೈಕಿ ಎರಡು ಪ್ರಶ್ನೆಗಳಿಗಷ್ಟೇ ಉತ್ತರಿಸಿದ್ದು, ಉಳಿದಂತೆ ನೀಡಿರುವ ಉತ್ತರಗಳಿಗೂ ನಮ್ಮ ಪ್ರಶ್ನೆಗಳಿಗೂ ಸಂಬಂಧವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಸ್ಪಷ್ಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಗಜೇಂದ್ರ ಸಿಂಗ್ ಶೇಖಾವತ್‌ ಅವರೇ, ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ. ಜನತೆಯ ಬಾಯಾರಿಕೆಯನ್ನು ತಣಿಸಬೇಕಾದ ಕೇಂದ್ರ ಸರ್ಕಾರ ಬದಲಿಗೆ ತನ್ನ ಸುಳ್ಳುಗಳ ದಾಹ ತಣಿಸಿಕೊಳ್ಳಲು ಮುಂದಾಗಿ ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ನಡೆಸಿರುವುದು ಬೇಸರದ ಸಂಗತಿ. ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿರುವುದು ನೀವು ಮತ್ತು ನಿಮ್ಮ ಸರ್ಕಾರ ಎಂದು ಟೀಕಿಸಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕರ್ನಾಟಕದ ವಿರುದ್ಧ ದ್ವೇಷ ಸಾಧಿಸುವಂತೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಉತ್ತರ ಕೊಡಿ. ಮೋದಿ ಎಂಬ ಅಭಿಯಾನವನ್ನು ಪ್ರಾರಂಭಿಸಿ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಐದು ಪ್ರಶ್ನೆಗಳನ್ನು ಕೇಳಿದ್ದೆ. ಅವುಗಳಲ್ಲಿ ಎರಡು ಪ್ರಶ್ನೆಗಳಿಗಷ್ಟೇ ಉತ್ತರಿಸಿರುವ ಸಚಿವರು ಉಳಿದಂತೆ ನೀಡಿರುವ ಉತ್ತರಗಳಿಗೂ ನಮ್ಮ ಪ್ರಶ್ನೆಗಳಿಗೂ ಸಂಬಂಧವೇ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ನೀರಾವರಿ ಯೋಜನೆಗಳು ಹೇಗೆ ಕೇಂದ್ರ ಬಿಜೆಪಿ ಸರ್ಕಾರದ ತಿರಸ್ಕಾರ, ಅವಗಣನೆಯಿಂದಾಗಿ ಧೂಳು ಹಿಡಿಯುತ್ತಿವೆ ಎನ್ನುವುದನ್ನು ಮತ್ತೊಮ್ಮೆ ವಾಸ್ತವಾಂಶಗಳ ಮೂಲಕ ನಿಮ್ಮ ಮುಂದಿರಿಸುತ್ತಿದ್ದೇನೆ. ತಾವು ವಿಷಯವನ್ನು ಸರಿಯಾಗಿ ಗ್ರಹಿಸಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ಧೋರಣೆ ಮತ್ತು ಉದ್ದೇಶಪೂರ್ವಕವಾದ ಅನ್ಯಾಯವನ್ನು ಸರಿಪಡಿಸುತ್ತಿರಿ ಎಂದು ಭಾವಿಸುತ್ತೇನೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

ಕೃಷ್ಣಾ ಮತ್ತು ಕಾವೇರಿ ಎಂಬ ಎರಡು ಜೀವನದಿಗಳು ಕರ್ನಾಟಕದ ಎರಡು ಕಣ್ಣುಗಳು. ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕಾಗಿ ಕರ್ನಾಟಕ ರಾಜ್ಯಕ್ಕೆ 130 ಟಿಎಂಸಿ ನೀರು ಹಂಚಿಕೆಯಾಗಿದೆ. ಈ ಪ್ರಮಾಣದ ನೀರನ್ನು ಬಳಕೆಗೆ ಲಭ್ಯವಾಗಿಸಬೇಕೆಂದರೆ ಆಲಮಟ್ಟಿ ಜಲಾಶಯದ ಎತ್ತರವನ್ನು ಸಮುದ್ರ ಮಟ್ಟದಿಂದ ಪ್ರಸಕ್ತ ಇರುವ 519.60 ಅಡಿಯಿಂದ 524.256 ಅಡಿಗಳಿಗೆ ಏರಿಸಬೇಕಾಗಿದೆ. ಯೋಜನೆಯ ಮೂರನೇ ಹಂತದ ಅನುಷ್ಠಾನದಿಂದ ಬರಪೀಡಿತ ಉತ್ತರ ಕರ್ನಾಟಕದ 5.94 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ.

ವಿಪರ್ಯಾಸವೆಂದರೆ, ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ - 2 ತೀರ್ಪು ಘೋಷಿಸಿ ಒಂದು ದಶಕವೇ ಕಳೆದರೂ ತೀರ್ಪಿನ ಗೆಜೆಟ್‌ ಸೂಚನೆಯನ್ನು ಕೇಂದ್ರ ಸರ್ಕಾರ ಹೊರಡಿಸಿಲ್ಲ. ಇದಕ್ಕಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸೂಕ್ತ ಅರ್ಜಿ ದಾಖಲಿಸುವಂತೆ ರಾಜ್ಯ ಸರ್ಕಾರವು ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದ ಹೊರತಾಗಿಯೂ ಈ ಕುರಿತು ಕೇಂದ್ರ ಮುಂದಾಗಿಲ್ಲ. ಇದು ಯೋಜನೆಯ ಜಾರಿಗೆ ತೊಡಕಾಗಿ ಪರಿಣಮಿಸಿದೆ ಎಂದು ಸಿಎಂ ವಿವರಿಸಿದ್ದಾರೆ.

ಕಳಸಾ ಮತ್ತು ಬಂಡೂರ ಯೋಜನೆ ವಿಚಾರದಲ್ಲಿಯೂ ಕೂಡ ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ವಿವಿಧ ಅನುಮತಿಗಳನ್ನು ದೊರಕಿಸಿಕೊಡುವಲ್ಲಿ ಕೇಂದ್ರ ಸರ್ಕಾರ ಸೋತಿದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ದೊರೆಯಬೇಕಾದ ತಿರುವಳಿ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಅನುಮತಿ, 2006ರ ಇಐಎ ಅಧಿಸೂಚನೆಯಿಂದ ವಿನಾಯಿತಿ, ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಕಳಸಾ ಯೋಜನೆಗೆ ಅಗತ್ಯವಾಗಿರುವ ವನ್ಯಜೀವಿ/ಹುಲಿ ಕಾರಿಡಾರ್ ವಿಚಾರವಾಗಿ ದೊರೆಯಬೇಕಾದ‌ ಅನುಮತಿ, ಭೀಮಗಡ ವನ್ಯಜೀವಿ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತಾದ ವಿಚಾರಗಳು ಕೇಂದ್ರ ಸರ್ಕಾರದ ಕಡೆಯಿಂದ ಬಾಕಿ ಉಳಿದಿವೆ.

ಭದ್ರಾ ಮೇಲ್ದಂಡೆ ಮಧ್ಯ ಕರ್ನಾಟಕದ ಪ್ರಮುಖ ಏತ ನೀರಾವರಿ ಯೋಜನೆಯಾಗಿದ್ದು 29.90 ಟಿಎಂಸಿ ನೀರಿನ ಬಳಕೆಯೊಂದಿಗೆ ಸೂಕ್ಷ್ಮ ನೀರಾವರಿ ಯೋಜನೆ ಮೂಲಕ 2,25,515 ಹೆಕ್ಟೇರ್‌ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಯೋಜನೆಯನ್ನು ‘ರಾಷ್ಟ್ರಿಯ ಯೋಜನೆ’ ಎಂದು ಘೋಷಿಸಲು ಅಗತ್ಯವಾದ ಎಲ್ಲ ಸಕ್ಷಮ ಪ್ರಾಧಿಕಾರಿಗಳ ಅನುಮತಿ, ಅನುಮೋದನೆಗಳ ಹೊರತಾಗಿಯೂ ಕೇಂದ್ರ ಸರ್ಕಾರವು ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ ಎಂದು ಘೋಷಿಸದೆ ವಿಳಂಬ ಧೋರಣೆ ಅನುಸರಿಸುತ್ತಿದೆ. ಸದರಿ ಯೋಜನೆಗಾಗಿ 2023-24ರ ಕೇಂದ್ರ ಆಯವ್ಯಯದಲ್ಲಿ ರೂ.5,300 ಕೋಟಿ ಸಹಾಯಧನ ಘೋಷಿಸಿರುವುದರ ಹೊರತಾಗಿಯೂ ಈವರೆಗೆ ಯೋಜನೆಗೆ ಯಾವುದೇ ಸಹಾಯಧನವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ಬಗೆಗಿನ ನಮ್ಮ ಪ್ರಶ್ನೆಗೆ ಉತ್ತರಿಸಿರುವ ಸಚಿವರು ಆ ಯೋಜನೆಯ ಪ್ರಸ್ತಾವವನ್ನು ಸಭೆಯ ಅಜೆಂಡಾದಲ್ಲಿ ಸೇರಿಸಲಾಗಿತ್ತು ಎಂದು ಉತ್ತರಿಸಿದ್ದಾರೆ. ಸಭೆಯ ಅಜೆಂಡಾದಲ್ಲಿ ಸೇರಿಸುವುದಷ್ಟೇ ಪ್ರಧಾನ ಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರ ಕೆಲಸವೇ? ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವುದು ಕೂಡಾ ಪ್ರಧಾನಿ ಮತ್ತು ಸಚಿವರ ಕರ್ತವ್ಯ ಅಲ್ಲವೇ? ಈ ಕೆಲಸದಲ್ಲಿ ಇಬ್ಬರೂ ವಿಫಲವಾಗಿದ್ದಾರೆ ಎಂದು ಕನ್ನಡಿಗರಿಗೆ ಅನಿಸಿದರೆ ತಪ್ಪಾದೀತೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿನ ಸಂಕಷ್ಟ ಪರಿಸ್ಥಿತಿಯ ನಿವಾರಣೆಗೆ ಮೇಕೆದಾಟು ಯೋಜನೆಯು ದೀರ್ಘಕಾಲೀನ ಶಾಶ್ವತ ಪರಿಹಾರ ಯೋಜನೆಯಾಗಿರುತ್ತದೆ. ಈ ಯೋಜನೆಯನ್ನು CWMA/CWC ಪರಿಗಣಿಸಿ ಅಗತ್ಯ ಅನುಮತಿ ಹಾಗೂ ಸಮ್ಮತಿಗಳನ್ನು ನೀಡುವ ಮೂಲಕ ಬೆಂಗಳೂರು ಮತ್ತು ಸುತ್ತಮುತ್ತಲಿನ ಊರುಗಳ ಕುಡಿಯುವ ನೀರಿನ ಸಮಸ್ಯೆಯನ್ನು ನರೇಂದ್ರ ಮೋದಿ ಸರ್ಕಾರ ಪರಿಹರಿಸುತ್ತದೆ ಎಂದು ನಾನು ನಂಬಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ, ರೈತರ ಹಿತ ಕಾಯುವುದಕ್ಕೆ ಶತಸಿದ್ಧ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.