ETV Bharat / state

ರಾಜ್ಯದಲ್ಲಿ ಈವರೆಗೆ ಮಳೆಗೆ 38 ಮಂದಿ ಸಾವು, ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

author img

By

Published : Jul 26, 2023, 10:38 PM IST

Updated : Jul 27, 2023, 10:24 AM IST

ಸಿಎಂ ಸಿದ್ದರಾಮಯ್ಯ ಘೋಷಣೆ
ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಉಂಟಾದ ಮಳೆ ಹಾನಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅಂಕಿ - ಸಂಖ್ಯೆಗಳ ಸಮೇತ ಮಾಹಿತಿ ನೀಡಿದರು.

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜೀವ, ಆಸ್ತಿ ಹಾನಿ ಉಂಟಾಗಿದೆ. ಮಳೆಗೆ ಸಂಬಂಧಿಸಿದ ಘಟನೆಗಳಲ್ಲಿ ಈವರೆಗೂ 38 ಜನರು ಸಾವನ್ನಪ್ಪಿದ್ದಾರೆ. ಮೃತ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ತಡವಾಗಿ ಮುಂಗಾರು ಕಾಲಿಟ್ಟರು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಪ್ರವಾಹ ಉಂಟಾಗಿ ಹಾನಿ ಕೂಡ ಆಗಿದೆ. ಮಳೆಯಿಂದ 38 ಜನರು ಪ್ರಾಣ ಕಳೆದುಕೊಂಡಿದ್ದಾರೆ. 35 ಜನ ಗಾಯಗೊಂಡಿದ್ದಾರೆ. 57 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 208 ಮನೆಗಳಿಗೆ ತೀವ್ರವಾಗಿ ಹಾನಿಯಾಗಿದೆ. ಜೊತೆಗೆ 2,682 ಮನೆಗಳು ಭಾಗಶಃ ಹಾನಿಗೀಡಾಗಿವೆ ಎಂದು ತಿಳಿಸಿದರು.

ಪ್ರವಾಹ ಸಂಬಂಧಿತ ಘಟನೆಗಳಲ್ಲಿ 105 ಜಾನುವಾರುಗಳು ಕೊಚ್ಚಿ ಹೋಗಿವೆ. 185 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ಹಾನಿಯಾಗಿದೆ. 356 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆ ಹಾಳಾಗಿದೆ. ಒಟ್ಟು 541 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗೆ ನೀರು ನುಗ್ಗಿ ಬೆಳೆ ನಾಶವಾಗಿ ರೈತರು ಭಾರಿ ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.

11,995 ವಿದ್ಯುತ್​ ಕಂಬಗಳು ಬಿದ್ದಿವೆ. 894 ವಿದ್ಯುತ್​ ಪರಿವರ್ತಕಗಳಿಗೆ ಹಾನಿಯಾಗಿವೆ. ಇನ್ನೂರ ಹದಿನೈದು ಕಿಲೋಮೀಟರ್​ನಷ್ಟು ವಿದ್ಯುತ್ ಸರಬರಾಜು ಕಡಿತವಾಗಿದೆ. 189 ಸೇತುವೆಗಳು 859 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಗೀಡಾಗಿವೆ. ನೆರೆ ಸಂತ್ರಸ್ತರಿಗಾಗಿ 2 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. 50 ಜನ ಅದರಲ್ಲಿ ಸದ್ಯ ಆಶ್ರಯ ಪಡೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

ಮೃತ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಇನ್ನು, ಮುಂದುವರಿದು ಮಾತನಾಡಿದ ಅವರು ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಪ್ರಾಣ ಕಳೆದುಕೊಂಡ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಇದೇ ವೇಳೆ, ಘೋಷಿಸಿದರು.

ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ಆರು ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ, ಬಿತ್ತನೆ ಕಾರ್ಯ ಕುಂಟಿತಗೊಂಡಿದೆ ಅಲ್ಲಿ ಕುಡಿಯುವ ನೀರಿನ ಸಮಸ್ಯೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

ಬಲವಂತದ ಸಾಲ ವಸೂಲಿ ಮಾಡುವಂತಿಲ್ಲ: ಬಿತ್ತನೆ ಮಾಡಲು ಅಗತ್ಯ ಬೀಜ ಗೊಬ್ಬರ ಔಷಧಿ ವ್ಯವಸ್ಥೆ ಮಾಡಲಾಗಿದೆ. ಒಂದು ವೇಳೆ ಬಿತ್ತನೆಯಾಗಿ ಬೆಳೆ ನಷ್ಟವಾಗಿದ್ದರೆ ಮತ್ತೊಮ್ಮೆ ಬಿತ್ತನೆ ಬೀಜ ಗೊಬ್ಬರ ಔಷಧಿ ಸರಬರಾಜು ಮಾಡಲು ಸೂಚನೆ ನೀಡಲಾಗಿದೆ. ರೈತರು ಬಿತ್ತನೆ ಬೀಜ ಔಷಧಿ ಗೊಬ್ಬರ ಕೇಳಿದರೆ ಕೂಡಲೇ ವ್ಯವಸ್ಥೆ ಮಾಡಿಕೊಡಬೇಕೆಂದು ಸೂಚನೆ ನೀಡಿದ್ದೇನೆ. ರೈತರಿಂದ ಪ್ರವಾಹದ ಸಂದರ್ಭದಲ್ಲಿ ಬಲವಂತವಾಗಿ ಸಾಲ ವಸೂಲಿ ಮಾಡಬಾರದು. ರೈತರ ಮೇಲೆ ಬಡ್ಡಿ, ಚಕ್ರಬಡ್ಡಿ ಹಾಕುವ ಖಾಸಗಿಯವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ನಾಳೆ ಶಾಸಕಾಂಗ ಪಕ್ಷದ ಸಭೆ.. ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಶಾಸಕರಿಂದ ಪ್ರಶ್ನೆಗಳ ಸುರಿಮಳೆ ಸಾಧ್ಯತೆ!

Last Updated :Jul 27, 2023, 10:24 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.