ETV Bharat / state

ಬಿಡುಗಡೆಯಾದ ಕ್ರಿಯಾ ಯೋಜನೆಗೆ ತಡೆ: ಸದನದಲ್ಲಿ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಧರಣಿ

author img

By

Published : Sep 16, 2022, 5:02 PM IST

congress-mla-bhimanayak-protest-in-session
ಸದನದಲ್ಲಿ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಧರಣಿ

ಹಗರಿಬೊಮ್ಮನಹಳ್ಳಿ ಪಟ್ಟಣ ಪಂಚಾಯಿತಿಗೆ ನಗರೋತ್ಥಾನ ಯೋಜನೆಯಡಿ 8 ಕೋಟಿ ಕ್ರಿಯಾ ಯೋಜನೆಯನ್ನು ಕಳುಹಿಸಲಾಗಿತ್ತು. ಆದರೆ, ಈ ಕ್ರಿಯಾ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ತಡೆ ಹಿಡಿದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಭೀಮಾನಾಯಕ್ ಸದನದ ಬಾವಿಗಿಳಿದು ಧರಣಿ ನಡೆಸಿದರು.

ಬೆಂಗಳೂರು: ನಗರೋತ್ಥಾನ ಯೋಜನೆಯಡಿ ಬಿಡುಗಡೆಯಾದ ಕ್ರಿಯಾ ಯೋಜನೆಗೆ ಸಚಿವರೊಬ್ಬರ ಆಪ್ತ ಕಾರ್ಯದರ್ಶಿ ತಡೆ ಹಿಡಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಸದನದ ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ವಿಧಾನಸಭೆಯಲ್ಲಿ ಇಂದು ನಡೆಯಿತು.

ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಅವರ ಉತ್ತರಕ್ಕೆ ತೃಪ್ತರಾಗದ ಅವರು, ಸಚಿವ ಆಪ್ತ ಕಾರ್ಯದರ್ಶಿ ಕ್ರಿಯಾಯೋಜನೆ ಪತ್ರಕ್ಕೆ ತಡೆ ಹಿಡಿದಿದ್ದಾರೆ ಎಂದರೆ ಶಾಸಕರ ಹಕ್ಕಿಗೆ ಬೆಲೆ ಇಲ್ಲವೇ? ಇದು ಸರಿಪಡಿಸಬೇಕೆಂದು ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದರು.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣ ಪಂಚಾಯಿತಿಗೆ ನಗರೋತ್ಥಾನ ಯೋಜನೆಯಡಿ 8 ಕೋಟಿ ಕ್ರಿಯಾ ಯೋಜನೆಯನ್ನು ಕಳುಹಿಸಲಾಗಿತ್ತು. ಆದರೆ, ಈ ಕ್ರಿಯಾ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ತಡೆ ಹಿಡಿದಿದ್ದಾರೆ. ಇದು ಶಾಸಕರ ಹಕ್ಕು ಮೊಟಕುಗೊಳಿಸಿದಂತೆ. ರಾಜ್ಯದ 224 ಕ್ಷೇತ್ರಗಳಿಗೂ ಈ ರೀತಿ ಮಾಡಿದ್ದೀರಾ.. ನಮಗೆ ನ್ಯಾಯ ಕೊಡಿ ಎಂದು ಸಭಾಧ್ಯಕ್ಷರ ಬಳಿ ಮನವಿ ಮಾಡಿದರು.

ಆಗ ಮಧ್ಯಪ್ರವೇಶಿಸಿದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು, ಹಗರಿಬೊಮ್ಮನಹಳ್ಳಿಯ ಪಟ್ಟಣ ಪಂಚಾಯಿತಿಯ ಎಲ್ಲ ವಾರ್ಡ್‍ಗಳಿಗೆ ನ್ಯಾಯಬದ್ಧವಾಗಿ ಅನುದಾನ ಹಂಚಿಕೆ ಮಾಡದೇ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಇದನ್ನು ತಡೆ ಹಿಡಿಯಲಾಗಿದೆ ಎಂದು ಸಮರ್ಥಿಸಿಕೊಂಡರು.

ಎಲ್ಲ ವಾರ್ಡ್‍ಗಳಿಗೂ ನಿಯಮ ಬದ್ಧವಾಗಿ ಅನುದಾನ ಹಂಚಿಕೆಯಾಗಬೇಕು. ಒಂದೊಂದು ವಾರ್ಡ್‍ಗಳಿಗೆ ಒಂದೊಂದು ರೀತಿ ಮಾಡಲು ಬರುವುದಿಲ್ಲ. ಒಂದು ವೇಳೆ ಇದರಲ್ಲಿ ಲೋಪದೋಷಗಳಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.

ಇದಕ್ಕೆ ಸಿಡಿಮಿಡಿಗೊಂಡ ಭೀಮನಾಯಕ್, ಇದು ಶಾಸಕರ ಹಕ್ಕು ಚ್ಯುತಿ ಪ್ರಶ್ನೆ. ಎಲ್ಲ ಕ್ಷೇತ್ರಗಳಿಗೂ ಇದೇ ರೀತಿ ಮಾಡಿದ್ದರೆ ನಾನು ಮಾತನಾಡುತ್ತಿರಲಿಲ್ಲ. ಇಂದು ನನಗಾಗಿರಬಹುದು. ನಾಳೆ ಇಡೀ ಸದನಕ್ಕೂ ಅನ್ವಯಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿ ಧರಣಿಗೆ ಮುಂದಾದರು.

ಇದಕ್ಕೆ ಸಿಟ್ಟಾದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ನಿಮ್ಮ ನಿಮ್ಮಲ್ಲಿ ಕುಳಿತು ಪರಿಹರಿಸಿಕೊಳ್ಳಬಹುದು. ಅದಕ್ಕೂ ಕೂಡ ಸದನದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸಬೇಕಾದ ಅಗತ್ಯವಿದೆಯೇ ? ಸಂಬಂಧಪಟ್ಟ ಸಚಿವರು ಉತ್ತರ ಕೊಟ್ಟರೂ ಈ ರೀತಿ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಆಗ ಸದಸ್ಯರಾದ ದೇಶಪಾಂಡೆ, ಜಮೀರ್ ಅಹಮ್ಮದ್, ವೆಂಕಟರಮಣಪ್ಪ ಮತ್ತಿತರರು ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.

ಸ್ಥಳಕ್ಕೆ ಭೇಟಿ: ಶಾಸಕ ಶರಣು ಸಲಗಾರ್ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಎಂಟಿಬಿ ನಾಗರಾಜ್, ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಛತ್ರಪತಿ ಶಿವಾಜಿ ಮಹಾರಾಜ್ ಅವರ ಉದ್ಯಾನದ ಕಾಮಗಾರಿ ಸ್ಥಳಕ್ಕೆ ಖುದ್ದು ನಾನೇ ಭೇಟಿ ನೀಡಿ ಪರಿಶಿಲೀಸುತ್ತೇನೆ ಎಂದು ಭರವಸೆ ನೀಡಿದರು.

ಇಲ್ಲಿನ ಯರ್ರಂಡಿ ಸರ್ವೆ ನಂ.36ರಲ್ಲಿ 8 ಎಕರೆ ಜಮೀನ ಗುರುತಿಸಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಉದ್ಯಾನ ನಿರ್ಮಿಸಲು 10 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದೇವೆ. ಶಾಸಕರ ಮನವಿಯಂತೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ನಾನೇ ಪರಿಶೀಲಿಸುತ್ತೇನೆ. ರಾಷ್ಟ್ರೀಯ ಹೆದ್ದಾರಿಗೆ ಇದು ಹೊಂದಿಕೊಂಡಿದ್ದು, ರಸ್ತೆ ಅಗತ್ಯವಿದೆ ಎಂದು ಕೇಳಿ ಬಂದಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಡಿಸೆಂಬರ್ ಅಂತ್ಯದೊಳಗೆ ಬೆಳೆ ವಿಮಾ ಹಣ ಪಾವತಿ: ಬಿ ಸಿ ಪಾಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.