ETV Bharat / state

ಗುತ್ತಿಗೆದಾರ ಆತ್ಮಹತ್ಯೆ ಕೇಸ್​... ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಅಹೋರಾತ್ರಿ​ ಧರಣಿಗೆ ಕಾಂಗ್ರೆಸ್ ನಿರ್ಧಾರ

author img

By

Published : Apr 14, 2022, 1:58 PM IST

Updated : Apr 14, 2022, 3:36 PM IST

ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಆಕ್ರೋಶ ಮುಂದುವರೆದಿದೆ.

Congress protest to demanding resignation of minister Eshwarappa
ಗುತ್ತಿಗೆದಾರ ಆತ್ಮಹತ್ಯೆ ಕೇಸ್​.. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಬಳಿ ಕಾಂಗ್ರೆಸ್​ ಧರಣಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಮುಂದುವರೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಸಮೀಪ ಧರಣಿ ಕುಳಿತಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ವಿಧಾನಸೌಧದ ಪೂರ್ವ ಗೇಟ್​​ನ ಬ್ಯಾಂಕ್ವೆಟ್ ಹಾಲ್ ಹೊರೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಧರಣಿ

ಈ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸೌಧದಲ್ಲಿ ಆಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ. ಈಗಾಗಲೇ ಕಾಂಗ್ರೆಸ್ ಮುಖಂಡರು ಧರಣಿ ಆರಂಭ ಮಾಡಿದ್ದು, ರಾತ್ರಿ ಇಲ್ಲೇ ಮಲಗುವ ಮೂಲಕ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸುತ್ತೇವೆ. ಅಂಬೇಡ್ಕರ್ ಅನುಯಾಯಿಗಳು ನಾವು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಂತೋಷ್ ಪಾಟೀಲ ಪ್ರಕರಣ ಮುಚ್ಚಿಹಾಕಲು ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ನಮ್ಮನ್ನು ಅರೆಸ್ಟ್ ಮಾಡಿದರು. ಮುಖ್ಯಮಂತ್ರಿಗಳು ಭ್ರಷ್ಟರನ್ನು ರಕ್ಷಣೆ ಮಾಡುತ್ತಿದ್ದಾರೆ. ಇದು ನಿಮ್ಮ ಕುರ್ಚಿಗೆ ಗೌರವ ತರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇವತ್ತು 24 ಗಂಟೆಗಳ ಕಾಲ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದೇವೆ. ನಾವು ನ್ಯಾಯಾಂಗದ ಮುಂಭಾಗದ ಶಾಸಕಾಂಗದ ಬಾಗಿಲಿನಲ್ಲಿ ಕೂತು ನ್ಯಾಯ ಕೇಳುತ್ತಿದ್ದೇವೆ. ಇದು ಭ್ರಷ್ಟ ಸರ್ಕಾರ. ಸಂತೋಷ್ ಪಾಟೀಲ ಬಿಜೆಪಿ ಕಾರ್ಯಕರ್ತ ಅವರಿಗೆ 40% ಬೇಡಿಕೆ ಇಟ್ಟಿದ್ದಾರೆ. ಅವರ ಕುಟುಂಬದ ಸದಸ್ಯರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ದೂರಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

Last Updated : Apr 14, 2022, 3:36 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.