ETV Bharat / state

ಮತದಾರ ಮಾಹಿತಿ ಹಗರಣ: ಕೇಂದ್ರ ಚು.ಆಯೋಗಕ್ಕೆ ದೂರು ನೀಡಲಿರುವ ಕಾಂಗ್ರೆಸ್‌

author img

By

Published : Nov 22, 2022, 9:28 AM IST

Updated : Nov 22, 2022, 9:53 AM IST

ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹ ಪ್ರಕರಣ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ.

ಡಿಕೆಶಿ
ಡಿಕೆಶಿ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಕೆ ಮತ್ತು ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಇಂದು ಬೆಳಿಗ್ಗೆ 7:30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಡಿಕೆಶಿ ಹಾಗೂ ಹಲವು ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಚಿಲುಮೆ ಹೆಸರಿನ ಖಾಸಗಿ ಸಂಸ್ಥೆ ಮೂಲಕ ಮತದಾರರ ಖಾಸಗಿ ಮಾಹಿತಿಯನ್ನು ರಾಜ್ಯ ಸರ್ಕಾರ ಅಕ್ರಮವಾಗಿ ಸಂಗ್ರಹಿಸುವ ಕಾರ್ಯ ಮಾಡಿದೆ. ಚುನಾವಣಾ ಆಯೋಗದ ಗಮನಕ್ಕೆ ತರದೆ ರಾಜ್ಯ ಸರ್ಕಾರ ಕೈಗೊಂಡಿರುವ ಈ ಕ್ರಮ ಕಾನೂನು ಪ್ರಕಾರ ಅಪರಾಧವಾಗಿದ್ದು ಇದರಲ್ಲಿ ಪ್ರಮುಖವಾಗಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಅವರ ಸಂಪುಟದ ಕೆಲ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಮನವಿ ಮಾಡಲಿದ್ದಾರೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಕೆ ಮಾಡಿರುವ ಕಾಂಗ್ರೆಸ್ ನಾಯಕರು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಕೋರಿದ್ದಾರೆ. ಪೊಲೀಸರಿಗೂ ದೂರು ಸಲ್ಲಿಕೆಯಾಗಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಮುಂದಿನ ಹಂತವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ನ.23 ಸಂಜೆ 4:30ಕ್ಕೆ ದೂರು ಕೊಡಲಿದೆ.

ಇಡಿ ವಿಚಾರಣೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನವೆಂಬರ್ 23 ರಂದು ಬೆಳಿಗ್ಗೆ 10.30 ಕ್ಕೆ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ನ.24 ರಂದು ಬೆಳಿಕ್ಕೆ 8:30 ಕ್ಕೆ ದೆಹಲಿಯಿಂದ ಗೋವಾಕ್ಕೆ ಪ್ರಯಾಣ ಬೆಳೆಸುವ ಡಿಕೆಶಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಹೊರಟು ಬೆಳಗ್ಗೆ 11 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿಗೆ ಆಗಮಿಸಲಿದ್ದಾರೆ. ಅಂದು ಕುಮಟಾದಲ್ಲಿ ಜನಜಾಗೃತಿ ಸಮಾವೇಶದಲ್ಲಿ ಭಾಗಿಯಾಗಿ ಸಂಜೆ 4:30 ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಈ ಮೊದಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಇತ್ತು. ಆದರೆ ಸದ್ಯ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂಓದಿ: ಬಿಜೆಪಿಯವರು ಮಾಡ್ತಿರೋ ಷಡ್ಯಂತ್ರ ಇಡೀ ದೇಶಕ್ಕೆ ಗೊತ್ತಾಗಿದೆ: ಸಿದ್ದರಾಮಯ್ಯ

Last Updated : Nov 22, 2022, 9:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.