ETV Bharat / state

ದೇಶದಲ್ಲಿ ದ್ವೇಷ ಹರಡುವ ಪಿತೂರಿ ರಾಜಕಾರಣ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

author img

By

Published : Jul 26, 2023, 4:04 PM IST

Updated : Jul 26, 2023, 9:06 PM IST

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಆಯೋಜಿಸಿದ್ದ "ಉತ್ತಮ ಭಾರತದ ಅಡಿಪಾಯ" ರಾಷ್ಟ್ರೀಯ ಯುವ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

CM Siddaramaiah inaugurated the youth conference.
ಕಾಂಗ್ರೆಸ್​ನ ರಾಷ್ಟ್ರೀಯ ಯುವ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ರಾಷ್ಟ್ರೀಯ ಯುವ ಕಾಂಗ್ರೆಸ್​ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬೆಂಗಳೂರು:ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ, ಬೆಲೆ ಏರಿಕೆ ಕಾರಣದಿಂದ ಬಡವರು - ಮಧ್ಯಮ ವರ್ಗದವರು ಹೈರಾಣಾಗಿರುವ ಹೊತ್ತಲ್ಲೇ ಬಿಜೆಪಿಯ ದ್ವೇಷ ರಾಜಕಾರಣ ಇಡೀ ದೇಶವನ್ನು ಆವರಿಸುತ್ತಿದೆ. ನಾವು ದ್ವೇಷ ಅಳಿಸಿ ಪ್ರೀತಿಯ ಭಾರತ ಪುನರ್ ನಿರ್ಮಿಸಲು 'ಉತ್ತಮ‌ ಭಾರತಕ್ಕೆ ಅಡಿಪಾಯ' ಸಮಾವೇಶ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿರುದ್ಯೋಗ ಬಡತನ ಹೆಚ್ಚಳ: ಅರಮನೆ ಮೈದಾನದಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಆಯೋಜಿಸಿದ್ದ "ಉತ್ತಮ ಭಾರತದ ಅಡಿಪಾಯ" ರಾಷ್ಟ್ರೀಯ ಯುವ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿರುದ್ಯೋಗ ಬಡತನ ಹೆಚ್ಚುತ್ತಿರುವಾಗ ದೇಶದಲ್ಲಿ ದ್ವೇಷ ಹರಡುವ ಪಿತೂರಿ ರಾಜಕಾರಣ ನಡೆಯುತ್ತಿದೆ. ನೆಹರೂ ಅವರ ಕಾಲದಿಂದ ಭಾರತಕ್ಕೆ ಹಾಕಲಾಗಿರುವ ಮಾನವೀಯತೆ, ಜಾತ್ಯತೀತತೆ ಮತ್ತು ವೈಜ್ಞಾನಿಕ‌ ಪ್ರಗತಿ ಮತ್ತು ಅಭಿವೃದ್ಧಿಯ ಅಡಿಪಾಯವನ್ನು ಮೋದಿ ಅವರು ಪ್ರಧಾನಿ ಆದ ನಂತರ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ.

ಆದರೆ, ಈ ಸಮಾವೇಶ ಮತ್ತೆ ನಮ್ಮ ಭಾರತವನ್ನು ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದಲ್ಲಿ ಮತ್ತೆ ಎತ್ತಿ ನಿಲ್ಲಿಸಲು ನೆರವಾಗುತ್ತದೆ. ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು ಮೋದಿ ಅವರು ಪ್ರಧಾನಿ ಆದ ಬಳಿಕ ಬಿಜೆಪಿ ಆರ್​​​ಎಸ್​​​ಎಸ್ ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ ಎಂದು ಆರೋಪಿಸಿದರು.

ಈ ದೇಶದ ಆಧಾರಸ್ಥಂಭ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆ ಬಗ್ಗೆ ಯಾವತ್ತೂ ಮಾತನಾಡದ ಬಿಜೆಪಿ ಪರಿವಾರ ಈ ರೈತ - ಕಾರ್ಮಿಕ - ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನು ದ್ವೇಷದ ಕುಲುಮೆಗೆ ತಳ್ಳಿ ದೇಶವನ್ನು ಮತ್ತೆ ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಈ ದೇಶದ ಯುವಕರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು.

ಕಾಂಗ್ರೆಸ್ ಸಂವಿಧಾನದ ಆಶಯಗಳಿಗೆ ಬದ್ದವಾಗಿದೆ. ಕಾರ್ಮಿಕರು, ಮಹಿಳೆಯರು, ದಲಿತ, ಶೂದ್ರರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರ ಬದುಕನ್ನು ಉನ್ನತೀಕರಿಸುವ ಮತ್ತು ಈ ಎಲ್ಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸುವ ಅಭಿಯಾನವನ್ನು ಕಾಂಗ್ರೆಸ್ ನಿರಂತರವಾಗಿ ನಡೆಸುತ್ತಾ, ಹೋರಾಟ ನಡೆಸುತ್ತಿದೆ. ಸಾಮಾಜಿಕ ನ್ಯಾಯದ ಪರಂಪರೆಯನ್ನು ಮುನ್ನಡೆಸುವ ರಥ ಕಾಂಗ್ರೆಸ್ ಪಕ್ಷ. ಬಿಜೆಪಿ ಪರಿವಾರ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿ ಆದ ಬಳಿಕ ದೇಶದ ಆರ್ಥಿಕತೆಯನ್ನು ಹಾಳುಗೆಡವಿದ್ದಾರೆ ಎಂದು ಆಪಾದಿಸಿದರು.

ಬೆಲೆ ಏರಿಕೆ ಹಣದುಬ್ಬರ ಬಿಜೆಪಿ ಪರಿವಾರದ ಸಾಧನೆ:ಕೇವಲ 9 ವರ್ಷದಲ್ಲಿ 118 ಲಕ್ಷ ಕೋಟಿ ಸಾಲ ಮಾಡಿ ದೇಶದ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ್ದಾರೆ. ಕಳೆದ 75 ವರ್ಷಗಳಿಂದ ಇದ್ದ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ. ಈ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ ಕೀರ್ತಿ ಪ್ರಧಾನಿ ಮೋದಿ ಮತ್ತು ಬಿಜೆಪಿ - ಆರ್​ಎಸ್​ಎಸ್ ಪರಿವಾರದ್ದು. ಈ ಮಟ್ಟದ ಬೆಲೆ ಏರಿಕೆ ಮತ್ತು ಹಣದುಬ್ಬರ ಬಿಜೆಪಿ ಪರಿವಾರದ ಸಾಧನೆ. ಕಚ್ಚಾ ತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಕೆ ಆಗಲು ಮೋದಿ ಅವರ ತಲೆಕೆಳಗಾದ ಕೆಟ್ಟ ಆರ್ಥಿಕ ನೀತಿಗಳೇ ಕಾರಣ ಎಂದು ಟೀಕಿಸಿದರು.

ಮೋದಿ ಸರ್ಕಾರ ಶ್ರೀಮಂತ ಕಾರ್ಪೋರೇಟ್​ಗಳ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿ, ಬಡವರು ತಿನ್ನುವ ಮಂಡಕ್ಕಿ, ಮೊಸರಿನ ಮೇಲೆ ತೆರಿಗೆ ವಿಧಿಸಿದೆ. ಇದನ್ನು ಯುವ ಸಮೂಹ ಬೀದಿ ಬೀದಿಯಲ್ಲಿ ಪ್ರಶ್ನಿಸಬೇಕು. ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ದುರಾಡಳಿತ, ಜನ ವಿರೋಧಿ ನೀತಿ, ಬೆಲೆ ಏರಿಕೆ, ಹಣದುಬ್ಬರವನ್ನು ತಂದಿತು.

ಇದರಿಂದ ರೊಚ್ಚಿಗೆದ್ದ ನಾಡಿನ ಜನತೆ ಬಿಜೆಪಿ ಕಿತ್ತೆಸೆದು ಕಾಂಗ್ರೆಸ್ ಅಧಿಕಾರಕ್ಕೆ ತಂದರು. ನಾವು ಐದು ಗ್ಯಾರಂಟಿಗಳ ಮೂಲಕ ನಾಡಿನ ಜನರ ಸಂಕಷ್ಟ ಕಡಿಮೆ ಮಾಡಿದೆ. ಬಿಜೆಪಿಯನ್ನು ದೇಶದಾದ್ಯಂತ ಕಿತ್ತೊಗೆಯುವ ಕೆಲಸವನ್ನು ದೇಶದ ಯುವಕರು ಮಾಡುವುದರಲ್ಲಿ ಅನುಮಾನವಿಲ್ಲ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವ ಕೆ ಜೆ ಜಾರ್ಜ್ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್, ರಾಜ್ಯ ಯುವ ಅಧ್ಯಕ್ಷ ನಲಪಾಡ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಸೇರಿ ಎಲ್ಲ ರಾಜ್ಯಗಳ ಯುವ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂಓದಿ:CM Siddaramaiah: ರಾಹುಲ್ ಗಾಂಧಿ ವಿರುದ್ಧದ ಕ್ರಮ ನಿಮಗೆ ಅನ್ವಯವಾಗುವುದಿಲ್ಲವೇ? ಮೋದಿ ವಿರುದ್ಧ ಸಿದ್ದರಾಮಯ್ಯ ಟೀಕೆ

Last Updated : Jul 26, 2023, 9:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.