ETV Bharat / state

ಗ್ಯಾರಂಟಿ ಯೋಜನೆ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿ ಕೆ ಶಿವಕುಮಾರ್

author img

By ETV Bharat Karnataka Team

Published : Nov 12, 2023, 6:28 PM IST

Updated : Nov 12, 2023, 7:31 PM IST

ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ. ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

dcm-dk-sivakumar-reaction-on-h-d-kumaraswamy-statement
ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಸಿಎಂ ಡಿ ಕೆ ಶಿವಕುಮಾರ್

ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು: " ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವ ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿ, "ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ?. ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ" ಎಂದು ಪ್ರಶ್ನಿಸಿದ್ದಾರೆ.

"ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಹೀಗೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ. ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತನೆಯೇ ಇಲ್ಲ. ಪಾಪ ಅವರಿಗೆ ಅವರ ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರ ಬಳಿ ಕೇಳಿ ತಿಳಿದುಕೊಳ್ಳಬೇಕು" ಎಂದು ತಿರುಗೇಟು ನೀಡಿದ್ದಾರೆ.

"ಚನ್ನಪಟ್ಟಣದ 25ಕ್ಕೂ ಹೆಚ್ಚು ಮತದಾರರ ಬಳಿ ನಾನೇ ಖುದ್ದಾಗಿ ಮಾತನಾಡಿದ್ದೇನೆ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದ ಮತದಾರರ ಬಳಿ ಹೋಗಿ ಕೇಳಲಿ. ಉಚಿತ ವಿದ್ಯುತ್, ಶಕ್ತಿ, ಅನ್ನ ಭಾಗ್ಯ, ಗೃಹಲಕ್ಷ್ಮಿ ಯೋಜನೆಗಳು ಅವರಿಗೆ ತಲುಪಿದೆಯೆ?, ಇಲ್ಲವೇ? ಎಂದು ಪರೀಕ್ಷೆ ಮಾಡಲಿ. ಒಂದಷ್ಟು ತಾಂತ್ರಿಕ ದೋಷ ಹಾಗೂ ಇತರೇ ಕಾರಣಗಳಿಂದ ಶೇ5 ರಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಈಗ ಒಂದೊಂದೇ ಸಮಸ್ಯೆಗಳನ್ನು ಬಗೆಹರಿಸಿ ತಲುಪಿಸಲಾಗುತ್ತಿದೆ" ಎಂದು ತಿಳಿಸಿದರು.

ಕರ್ನಾಟಕದ ಸಚಿವರಿಗೆ ಪಂಚರಾಜ್ಯ ಚುನಾವಣೆ ಸಲುವಾಗಿ ಕಮಿಷನ್ ಟಾರ್ಗೆಟ್ ಕೊಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, "ಕುಮಾರಸ್ವಾಮಿ ಅವರು ಟಾರ್ಗೆಟ್ ಕೊಟ್ಟಿರಬೇಕು. ನಮ್ಮ ಸಚಿವರು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಹೋಗಿ ಬರುತ್ತಿದ್ದಾರೆ. ತಾಳ್ಮೆಯಿಂದ ಇರಲು ಕುಮಾರಸ್ವಾಮಿ ಅವರಿಗೆ ಆಗುತ್ತಿಲ್ಲ. ಅವರಿಗೂ ವಿಜಯೇಂದ್ರ ಇಬ್ಬರಿಗೂ ಒಳ್ಳೆಯದಾಗಲಿ" ಎಂದರು.

ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಕೊಟ್ಟಿರುವ ನೋಟಿಸ್ ಪೀರಿಯಡ್‌ನಲ್ಲಿ ಇದ್ದಾರೆಯೇ ಎಂಬ ಹೆಚ್​ಡಿಕೆ ಹೇಳಿಕೆಗೆ, "ಕುಮಾರಸ್ವಾಮಿ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ?. ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಾವೆಲ್ಲ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ಬೇರೆ ಚರ್ಚೆಯೇ ಇಲ್ಲ" ಎಂದು ಟಾಂಗ್​ ಕೊಟ್ಟರು.

ಇದನ್ನೂ ಓದಿ: ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ, ಹಣ ಕೊಟ್ಟವರು ಅಧಿಕಾರದಲ್ಲಿ ಇರ್ತಾರೆ: ಹೆಚ್​ಡಿಕೆ ಆರೋಪ

Last Updated : Nov 12, 2023, 7:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.