ETV Bharat / state

ಪ್ರಚೋದನೆ‌ ನೀಡುವ ಕಟೌಟ್ ಹಾಕುವುದು, ಕಲ್ಲು ತೂರಾಟಕ್ಕೆ ಅವಕಾಶ ನೀಡಲ್ಲ: ಡಿಸಿಎಂ ಡಿ ಕೆ ಶಿವಕುಮಾರ್​

author img

By ETV Bharat Karnataka Team

Published : Oct 2, 2023, 7:10 PM IST

ಡಿಸಿಎಂ ಡಿ.ಕೆ ಶಿವಕುಮಾರ್
ಡಿಸಿಎಂ ಡಿ.ಕೆ ಶಿವಕುಮಾರ್

ಶಿವಮೊಗ್ಗದ ರಾಗಿ ಗುಡ್ಡ ಏರಿಯಾದಲ್ಲಿ ನಡೆದ ಗಲಭೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸುತ್ತ, ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ​

ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ​

ಬೆಂಗಳೂರು : ಪ್ರಚೋದನೆ ನೀಡುವ ಕಟೌಟ್ ಹಾಕುವಂತದ್ದು, ಕಲ್ಲು ತೂರಾಟದಂತಹ ಕೃತ್ಯಕ್ಕೆ ನಮ್ಮ ಸರ್ಕಾರ ಅವಕಾಶ ನೀಡಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಗಲಭೆ ಮಾಡಲು ಸರ್ಕಾರವೇ ಮುಕ್ತ ಅವಕಾಶ ನೀಡಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದರು. ಕಾನೂನು ಕೈಗೆತ್ತಿಕೊಳ್ಳುವ ಯಾರೊಬ್ಬರನ್ನು ನಾವು ಸಹಿಸಿಕೊಳ್ಳುವುದಿಲ್ಲ. ಈ ಘಟನೆಯನ್ನು ನಾವು ಖಂಡಿಸುತ್ತೇವೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆ. ಈ ಘಟನೆ ಹಿಂದೆ ಯಾರೇ ಇದ್ದರೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನಮ್ಮ ರಾಜ್ಯ ಶಾಂತಿಯ ತೋಟವಾಗಿರಬೇಕು. ಕಾನೂನು ಎಲ್ಲರಿಗೂ ಒಂದೇ ಎಂದು ತಿಳಿಸಿದರು.

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ಕೊಡಿಸಲಿ : ಕಾವೇರಿ ವಿಚಾರವಾಗಿ ವಿರೋಧ ಪಕ್ಷ ಬಿಜೆಪಿ ಕೇವಲ ರಾಜಕೀಯ ಮಾಡುತ್ತಿದೆ. ಅವರಿಗೆ ರಾಜ್ಯದ ಹಿತದ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದಿಂದ ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಅನುಮತಿ ಕೊಡಿಸಲಿ. ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಕರ್ನಾಟಕ ತನ್ನ ಜಾಗದಲ್ಲಿ ಆಣೆಕಟ್ಟುಕೊಳ್ಳಲು ಅಡ್ಡಿಪಡಿಬೇಡಿ ಎಂದು ಹೇಳಿದೆ. ಹೀಗಾಗಿ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ರಾಜ್ಯದ ಹಿತಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ. ಅವರಿಗೆ ರಾಜ್ಯದ ಹಿತ ಕಾಯುವ ಬದ್ಧತೆ ಇದ್ದರೆ ಕಾವೇರಿ, ಮಹದಾಯಿ ಹಾಗೂ ಕೃಷ್ಣಾ ನದಿ ವಿಚಾರವಾಗಿ ದೆಹಲಿಗೆ ಹೋಗಿ ಕೇಂದ್ರದ ಬಳಿ ಚರ್ಚೆ ಮಾಡಲಿ ಎಂದು ಬಿಜೆಪಿ ನಾಯಕರ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದರು.

ಶಾಮನೂರು ಶಿವಶಂಕರಪ್ಪರ ಜೊತೆ ಚರ್ಚೆ ಮಾಡುತ್ತೇವೆ : ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಂಖ್ಯೆಯ ಪತ್ರ ಹರಿದಾಡುತ್ತಿರುವ ಬಗ್ಗೆ ಡಿ.ಕೆ ಶಿವಕುಮಾರ್​ ಅವರನ್ನು ಕೇಳಿದಾಗ, ಯಾರೋ ದೂರು ಕೊಟ್ಟಿರುವ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಜೊತೆ ನಾವೆಲ್ಲ ಕೂತು ಚರ್ಚೆ ಮಾಡುತ್ತೇವೆ ಎಂದರು.

ಮತ್ತೊಂದೆಡೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ಮಾತನಾಡಿದ ಶಾಸಕ ಲಕ್ಷ್ಮಣ್​ ಸವದಿ, ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಅನ್ನೋದು ನನಗೆ ಸ್ಪಷ್ಟವಾಗಿ ತಿಳಿದಿಲ್ಲ. ಕೆಲಸವೊಂದರ ನಿಮಿತ್ತವಾಗಿ ಎರಡು ದಿನ ಬೆಂಗಳೂರಿಗೆ ಭೇಟಿ ನೀಡುತ್ತಿದ್ದೇನೆ. ಅಲ್ಲಿ ಅವರನ್ನು ಭೇಟಿ ಮಾಡಿ ಏನು ಮಾಹಿತಿ ಇದೆ ಮತ್ತು ಯಾವ ಅರ್ಥದಲ್ಲಿ ಈ ರೀತಿ ಹೇಳಿದ್ದಾರೆ ಅನ್ನೋದನ್ನು ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ : 144 ಸೆಕ್ಷನ್ ರಾಗಿಗುಡ್ಡಕ್ಕೆ ಸಿಮಿತಗೊಳಿಸಿ, ಇಡೀ ನಗರಕ್ಕೆ ಅನ್ವಯ ಬೇಡ: ಕೆ ಎಸ್​ ಈಶ್ವರಪ್ಪ, ಗೋಪಿನಾಥ್ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.