ETV Bharat / state

ಕೃಷ್ಣಾ ಮೇಲ್ದಂಡೆ ವ್ಯಾಪ್ತಿಯ ಬೆಳೆಗಳಿಗೆ 2.75 ಟಿಎಂಸಿ ನೀರು ಹರಿಸಲು ತೀರ್ಮಾನ: ಡಿ.ಕೆ.ಶಿವಕುಮಾರ್

author img

By ETV Bharat Karnataka Team

Published : Jan 7, 2024, 1:21 PM IST

Updated : Jan 7, 2024, 2:11 PM IST

ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬೆಳೆಗಳ ಸಂರಕ್ಷಣೆಗಾಗಿ ಕಾಲುವೆಗಳಿಗೆ ನೀರು ಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Etv Bharatdecision-to-release-water-for-crops-in-upper-krishna-project-area-shivakumar
ಕೃಷ್ಣಾ ಮೇಲ್ದಂಡೆ ವ್ಯಾಪ್ತಿಯ ಬೆಳೆಗಾಗಿ 2.75 ಟಿಎಂಸಿ ನೀರು ಹರಿಸಲು ತೀರ್ಮಾನ: ಶಿವಕುಮಾರ್

ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ಪ್ರಮಾಣವನ್ನು ಕಾಯ್ದಿರಿಸಿ, ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗಳ ಸಂರಕ್ಷಣೆಗೆ ಕೂಡಲೇ 2.75 ಟಿಎಂಸಿ ನೀರನ್ನು ಕಾಲುವೆಗಳಿಗೆ ಹರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರನ್ನು ಗಮನದಲ್ಲಿಟ್ಟುಕೊಂಡು ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಕಷ್ಟದ ಪರಿಸ್ಥಿತಿಯಲ್ಲಿ ರೈತರ ಸಹಕಾರ ಮುಖ್ಯ. 170 ಕೀ.ಮೀ. ವ್ಯಾಪ್ತಿಯಲ್ಲಿ ನೀರು ಹರಿಯಬೇಕಿದೆ. ರೈತರ ಹೋರಾಟ, ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು 2.75 ಟಿಎಂಸಿ ನೀರು ಬಿಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ರೈತ ಪರ ಹೋರಾಟಗಾರರು ಮಾನಿಟರ್ ಮಾಡಬೇಕು. ನೀವೇ ಪೊಲೀಸ್ ಆಗಬೇಕು, ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಕುಡಿಯುವ ನೀರಿಗೂ ಸಮಸ್ಯೆ: ಈ ಬಗ್ಗೆ ಶನಿವಾರ, ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಸಚಿವರುಗಳು, ಶಾಸಕರುಗಳು, ಜಿಲ್ಲಾಧಿಕಾರಿಗಳು ಹಾಗೂ ರೈತ ಮುಖಂಡರುಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದೆ. ಅಲ್ಲಿ ಬರಗಾಲ ಇದ್ದರೂ ರೈತರು ಬೆಳೆ ಬೆಳೆದಿದ್ದಾರೆ. ಆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಇದೆ. ರೈತರು ಗುಂಡಿ ತೆಗೆದು, ಜೆಸಿಬಿಯಿಂದ ಮುಚ್ಚಿ ಎಂದು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ಯಾರನ್ನೂ ಮುಚ್ಚಲು ಹೋಗಲ್ಲ. ಜೂನ್​ವರೆಗೆ ಮಳೆ ನಿರೀಕ್ಷೆ ಕಷ್ಟ. ನೀರು ಬಿಟ್ಟರೂ ಕೊನೆಯ ಭಾಗದವರೆಗೂ ತಲುಪಲ್ಲ ಎಂದು ಹೇಳಿದರು.

ಮಳೆ ಕೊರತೆಯಿಂದಾಗಿ ಕೃಷ್ಣಾ ಮೇಲ್ಕಂಡೆ ಯೋಜನೆಯ ಪ್ರಮುಖ ಜಲಾಶಯಗಳಾದ ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಲ್ಲಿ ನೀರಿನ ಕೊರತೆ ಇದೆ. ಕಳೆದ ವರ್ಷ ಇದೇ ಸಮಯದಲ್ಲಿ ಜಲಾಶಯಗಳಲ್ಲಿನ ನೀರಿನ ಸಂಗ್ರಹಣೆಗೆ ಹೋಲಿಸಿದರೆ, ಸಂಗ್ರಹಣೆ ಶೇ.50ಕ್ಕಿಂತ ಕಡಿಮೆ ಇದೆ. ಮುಂಬರುವ ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರನ್ನು ಕಾಯ್ದಿರಿಸಬೇಕಿದೆ. ರಾಜ್ಯ ಜಲನೀತಿ ಅನುಸಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗಿದೆ ಎಂದರು.

ಜಲಾಶಯಗಳಲ್ಲಿ ಹಾಗೂ ಜನಪ್ರತಿನಿಧಿಗಳ ಬೇಡಿಕೆಯ ಅನ್ವಯ ಈಗಾಗಲೇ ಬೆಳೆದು ನಿಂತಿರುವ ಮೆಣಸಿನಕಾಯಿ ಇತ್ಯಾದಿ ಬೆಳೆಗಳನ್ನು ಸಂರಕ್ಷಿಸಿ, ಇಳುವರಿ ಕಾಪಾಡಿಕೊಂಡು ರೈತರ ಹಿತಾಸಕ್ತಿ ರಕ್ಷಣೆ ಮಾಡುವುದು ಕೂಡ ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಜನಪ್ರತಿನಿಧಿಗಳು ಮತ್ತು ರೈತರ ಮುಖಂಡರುಗಳ ಮನವಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಬಿಡುಗಡೆ ಮಾಡಲಾಗುವ 2.75 ಟಿಎಂಸಿ ನೀರನ್ನು ರೈತರು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಲು ಕೋರುತ್ತೇನೆ. ಜಿಲ್ಲಾಡಳಿತವು ನೀರಾವರಿ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ, ನೀರಿನ ಬಳಕೆಗೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಇದನ್ನೂ ಓದಿ: ಕೃಷಿ ಕಾರ್ಮಿಕರಿಗೆ ಕಾಂಗ್ರೆಸ್ ಸರ್ಕಾರದಿಂದ ಗುಳೆ ಗ್ಯಾರಂಟಿ: ಆರ್.ಅಶೋಕ್

Last Updated : Jan 7, 2024, 2:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.