ETV Bharat / state

ಅಧಿವೇಶನದಲ್ಲಿ ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಪಟ್ಟು : ಆರ್ ಅಶೋಕ್

author img

By ETV Bharat Karnataka Team

Published : Nov 27, 2023, 6:16 PM IST

Opposition leader R Ashok
ವಿಪಕ್ಷ ನಾಯಕ ಆರ್​ ಅಶೋಕ್​

R Ashok counter against Siddaramaiah: ಕಾಂಗ್ರೆಸ್​ ಸರ್ಕಾರ ಇವತ್ತು ನಿದ್ದೆಯಿಂದ ಎದ್ದಿದೆ. ಅದಕ್ಕೆ ಈಗ ದಿಢೀರ್ ಆಗಿ​ ಮುಖ್ಯಮಂತ್ರಿ ಜನತಾದರ್ಶನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್​ ಅಶೋಕ್ ಅವರು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರ್ಕಾರ ಎಂದು ಹರಿಹಾಯ್ದರು. ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಲೆಕ್ಕಪತ್ರ ಮಂಡಿಸಲಿ: ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್​ಡಿಆರ್​ಎಫ್ ಮಾರ್ಗಸೂಚಿಗಿಂತ ದುಪ್ಪಟ್ಟು ಪರಿಹಾರ ನೀಡಿದ್ದೆವು. ನಂತರ ಕೇಂದ್ರದ ನೆರವು ಖಜಾನೆಗೆ ಬಂತು. ಆ ಕೆಲಸ ಮಾಡಲು ಇವರಿಗೇನು ಎಂದು ಅಶೋಕ್​ ಆಕ್ರೋಶ ವ್ಯಕ್ತಪಡಿಸಿದರು.

ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಠ ಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಕೇಳಿದರೆ ಎಲ್ಲದಕ್ಕೂ ಲಂಚ ಕೊಡಬೇಕು. ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ರೈತರು ದೂರು ನೀಡುತ್ತಿದ್ದಾರೆ. ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎನ್ನುತ್ತಾರೆ. ಅದು ನಿಜವೇ ಆಗಿದ್ದಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.

ಬೋಗಸ್ ದರ್ಶನ: ಮುಖ್ಯಮಂತ್ರಿಯವರ ಜನತಾದರ್ಶನ ಕಾರ್ಯವನ್ನು 'ಬೋಗಸ್ ದರ್ಶನ' ಎಂದ ಅಶೋಕ್, ನೆಟ್ಟಗೆ ಕೆಲಸ ಮಾಡದ ಮಂತ್ರಿಗಳನ್ನು ಕರೆಯಿಸಿ ಮೊದಲು ಅವರ ದರ್ಶನ ಮಾಡಬೇಕಿತ್ತು. ಯಾರ್ಯಾರು ಏನು ಕೆಲಸ ಮಾಡಿದ್ದಾರೆ ಎಂದು ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಖುರ್ಚಿ, ಮೇಜು ಹಾಕಿಸಿ ಮನವಿ ಪತ್ರ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಅಶೋಕ್​ ಲೇವಡಿ ಮಾಡಿದರು.

ಸಿಎಂ ಸೇರಿದಂತೆ ಎಲ್ಲ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಜನತಾದರ್ಶನ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ, ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಅದನ್ನು ಬಿಟ್ಟು ಸಿಎಂ ಅವರು ಸೀಮಿತ ಸಂಖ್ಯೆ ಜನರ ಅಹವಾಲು ಕೇಳಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಸರ್ಕಾರ ಇವತ್ತು ನಿದ್ದೆಯಿಂದ ಎದ್ದಿದೆ: ದಿಢೀರ್ ಎಂದು ಸಿಎಂ ಅವರು ಜನತಾದರ್ಶನ ಮಾಡುತ್ತಿದ್ದಾರೆ ಎಂದರೆ ಇವತ್ತು ದೀರ್ಘ ಕಾಲದ ನಿದ್ದೆಯಿಂದ ಎದ್ದಿದ್ದಾರೆ ಎಂದು ಅರ್ಥ. ಏಕೆಂದರೆ ಆಡಳಿತ ಸಂಪೂರ್ಣ ನೆಲಕಚ್ಚಿದ್ದು ಅಧಿಕಾರಶಾಹಿ ಜನರ ಶೋಷಣೆಯಲ್ಲಿ ನಿರತವಾಗಿದೆ. ಇದನ್ನು ಗಮನಿಸಿ ಸರಿಪಡಿಸಬೇಕಿದ್ದ ಸಚಿವರು ತೆಲಂಗಾಣ ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಕ್ರಾಂತಿ ಆಗಿದೆ ಎಂದು ಬುರುಡೆ ಭಾಷಣ ಬಿಗಿಯುತ್ತಿದ್ದಾರೆ. ಅಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಡಿದಿರುವ ಬರಗಾಲ ನಿವಾರಣೆಗಾಗಿ ಸಿದ್ದರಾಮಯ್ಯ ಎಲ್ಲಾ ಸಚಿವರನ್ನು ಅಲ್ಲಿಗೆ ನಿಯೋಜಿಸಿದ್ದಾರೆ. ಇಲ್ಲಿ ಜನ ತತ್ತರಿಸುತ್ತಿದ್ದರೂ ಕೇಳಲು ದಿಕ್ಕಿಲ್ಲ ಎಂದು ಕಿಡಿಕಾರಿದರು.

ಮೊದಲು ಪಕ್ಷದ ಸಿದ್ಧಾಂತ ಅರಿತುಕೊಳ್ಳಲಿ: ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಅಶೋಕ್, ಅವರು ಈಗಾಗಲೇ ಮೂರು ಪಕ್ಷಗಳಿಗೆ ಪಕ್ಷಾಂತರ ಮಾಡಿದ್ದಾರೆ. ಹೀಗಾಗಿ ಪಕ್ಷಗಳ ಸಂಸ್ಥಾಪಕ ಅಧ್ಯಕ್ಷರು ಯಾರ್ಯಾರು ಎಂಬುದನ್ನೇ ತಿಳಿದುಕೊಂಡಿಲ್ಲ. ಕಾಂಗ್ರೆಸ್ ಸ್ಥಾಪಕ ಅಧ್ಯಕ್ಷ ಬ್ರಿಟಿಷ್‌ ಎಂಬುದೂ ಗೊತ್ತಿಲ್ಲ. ಅವರ ಪರಂಪರೆಯೇ ಕಾಂಗ್ರೆಸ್​ನಲ್ಲಿ ಮುಂದುವರೆಯುತ್ತಿದೆ. ಯುಪಿಎ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರಿಗೆ ಕಾಸು ಕೊಟ್ಟು ಕಲ್ಲು ಹೊಡೆಸುತ್ತಿದ್ದರು. ಅವರೆಲ್ಲರೂ ಈಗ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ಜನಜೀವನ ಸಹಜಸ್ಥಿತಿಗೆ ಮರಳಿದೆ. ಇದಕ್ಕೆ ಮೋದಿ ಸರ್ಕಾರದ ಕಠಿಣ ಕ್ರಮಗಳು ಕಾರಣ ಎಂದರು.

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಯ ಅವ್ಯವಸ್ಥೆ ಮುಂದಿಟ್ಟ ಮಹಿಳೆ; ಪುತ್ರನ ಹೆಸರಿನ ಟ್ರಸ್ಟ್​ಗೆ ನಿವೇಶನ ಮಂಜೂರು ಮಾಡಿದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.