ETV Bharat / state

6 ತಿಂಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕಾತಿ: ಅಶ್ವತ್ಥನಾರಾಯಣ

author img

By

Published : Jun 30, 2021, 10:52 PM IST

2009ರ ನಂತರ ಪ್ರಾಂಶುಪಾಲರನ್ನು ನೇಮಕಾತಿ ಮಾಡಿರಲಿಲ್ಲ. ಇದಕ್ಕೆ 55 ವರ್ಷ ವಯೋಮಿತಿ ಇದೆ. ಅದೇ 2017ರ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕವೂ ಆಗಿರಲಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.

dcm-ashwath-narayan
ಡಿಸಿಎಂ ಅಶ್ವತ್ಥ್ ನಾರಾಯಣ್

ಬೆಂಗಳೂರು: ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ​ನಾರಾಯಣ​ ತಿಳಿಸಿದರು.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಸಂದರ್ಶನ ಇಲ್ಲದೆಯೇ ಲಿಖಿತ ಪರೀಕ್ಷೆ ಮೂಲಕವೇ ಇಷ್ಟೂ ಹುದ್ದೆಗಳನ್ನು ತುಂಬಲಾಗುತ್ತಿದೆ. ಈ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಆರು ತಿಂಗಳೊಳಗಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದಲ್ಲದೆ, ಎಲ್ಲ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಅರ್ಹತೆ ಆಧಾರದ ಮೇಲೆ ನೇಮಕಾತಿ ಆಗಲಿದೆ ಎಂದರು.

2009ರ ನಂತರ ಪ್ರಾಂಶುಪಾಲರನ್ನು ನೇಮಕಾತಿ ಮಾಡಿರಲಿಲ್ಲ. ಇದಕ್ಕೆ 55 ವರ್ಷ ವಯೋಮಿತಿ ಇದೆ. ಅದೇ 2017ರ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕವೂ ಆಗಿರಲಿಲ್ಲ. ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ 500 ಅಂಕಕ್ಕೆ ನಡೆಯುತ್ತದೆ. (ಕನ್ನಡ 100, ಇಂಗ್ಲಿಷ್‌ 100, ಜಿಕೆ 50 ಆಯ್ಕೆ ವಿಷಯಗಳಿಗೆ 250 ಅಂಕ ಇರುತ್ತದೆ.) ಪ್ರಾಂಶುಪಾಲರ ಆಯ್ಕೆ ಪರೀಕ್ಷೆ 100 ಅಂಕ ಇರುತ್ತದೆ. ಎಲ್ಲ ಪ್ರಶ್ನೆಗಳು ಬಹುಆಯ್ಕೆ ಮಾದರಿಯಲ್ಲಿ ಇರುತ್ತವೆ. ಪ್ರಾಥಮಿಕ ಅರ್ಹತೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ ಎಂದು ತಿಳಿಸಿದರು.

ಮೆರಿಟ್ ಕ್ರೈಟೀರಿಯಾ ಪರಿಗಣನೆ: ಮೆರಿಟ್ ಮೂಲಕ ಆಯ್ಕೆ ಮಾಡಲಾಗುವುದು. ಕೋವಿಡ್ ಕಾರಣಕ್ಕೆ ನೇಮಕಾತಿ ತಡ ಆಗಿತ್ತು. ಇದೀಗ ನೇಮಕಾತಿಗೆ ಅನುಮತಿ ನೀಡಲಾಗಿದೆ. ಸುಮಾರು 4 ಸಾವಿರ ಸಹಾಯಕ ಪ್ರೊಫೆಸರ್ ಹುದ್ದೆ ಖಾಲಿ ಇವೆ. ಸದ್ಯದ ಪರಿಸ್ಥಿತಿಗೆ 1,242 ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಮೆರಿಟ್ ಕ್ರೈಟೀರಿಯಾವನ್ನು ಪರಿಗಣಿಲಾಗುತ್ತದೆ‌ ಎಂದು ಸ್ಪಷ್ಟಪಡಿಸಿದ ಅವರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಲಸಿಕೆ ಕಡ್ಡಾಯಗೊಳಿಸಿಲ್ಲ. ಸ್ವಯಂಪ್ರೇರಿತವಾಗಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಇದೇ ವೇಳೆ ತಿಳಿಸಿದರು.

ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ: ನಾಯಕತ್ವ ಬದಲಾವಣೆ ವಿಚಾರವಾಗಿ ಯತ್ನಾಳ್ ಹೇಳಿಕೆಗೆ ಡಿಸಿಎಂ ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡುತ್ತಾ, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ವರಿಷ್ಠರ ಮಟ್ಟದಲ್ಲಿ ಈ ವಿಚಾರವನ್ನು ಚರ್ಚೆಗೆ ತೆಗೆದುಕೊಳ್ಳಲಾಗಿದೆ. ಪಕ್ಷದ ಹೈಕಮಾಂಡ್ ದುರ್ಬಲವಾಗಿಲ್ಲ, ಪ್ರಬಲವಾಗಿದೆ. ಈ ವಿಚಾರವಾಗಿ ಪಕ್ಷದ ವರಿಷ್ಠರು ಏನೆಲ್ಲಾ ಅಗತ್ಯ ಇದೆ ಆ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಓದಿ: ಬಹುಮಾನ ಬಂದಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬನಿಗೆ 8 ಲಕ್ಷ ರೂ. ಟೋಪಿ ಹಾಕಿದ ಖದೀಮರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.