ETV Bharat / state

ವಿದ್ಯಾರ್ಥಿ ದೆಸೆಯಿಂದಲೇ ಸಂಘಟನಾ ಚತುರ.. ಬಂಡೆಯಂತೆ ನಿಂತು ಕಾಂಗ್ರೆಸ್​ ಗೆಲ್ಲಿಸಿದ ಡಿಕೆಶಿ ರಾಜಕೀಯ ಹಾದಿ

author img

By

Published : May 18, 2023, 3:48 PM IST

Updated : May 18, 2023, 6:50 PM IST

ಡಿಕೆಶಿ
ಡಿಕೆಶಿ

ವಿದ್ಯಾರ್ಥಿ ದೆಸೆಯಿಂದಲೇ ಬೆಳೆದು ಬಂದಾಗನಿಂದ ಕನಕಪುರ ಬಂಡೆ ಖ್ಯಾತಿಯ ಡಿ.ಕೆ. ಶಿವಕುಮಾರ್ ಮೇ 20ರಂದು ರಚನೆಯಾಗಲಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಡಿಸಿಎಂ ಆಗಿ ಅಧಿಕಾರಕ್ಕೆ ಏರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಡಿಕೆಶಿ ರಾಜಕೀಯ ಜೀವನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ರಾಮನಗರ/ ಬೆಂಗಳೂರು: ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (ಡಿಕೆ ಶಿವಕುಮಾರ್) ರಾಜ್ಯ ರಾಜಕೀಯದಲ್ಲಿ ತಮ್ಮದೇಯಾದ ವರ್ಚಸ್ಸು ಹೊಂದಿರುವ ಜನ ನಾಯಕ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಆಗಿರುವ ಅವರು, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರು ಹೌದು. ಕಾಂಗ್ರೆಸ್ ಹೈಕಮಾಂಡ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಮುಖ್ಯಮಂತ್ರಿ ಆಗುವ ಪಟ್ಟಿಯಲ್ಲಿ ಮೊದಲಿಗರು ಕೂಡ ಹೌದು.

ವೈಯಕ್ತಿಯ ಪರಿಚಯ: ಕನಕಪುರ ತಾಲೂಕು ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪುತ್ರರಾಗಿ ಶಿವಕುಮಾರ್ 15 ಮೇ 1962 ರಂದು ಜನಿಸಿದರು. 1993 ರಲ್ಲಿ ಉಷಾ ಎಂಬುವರನ್ನು ವಿವಾಹವಾದ ಶಿವಕುಮಾರ್ ದಂಪತಿಯು, ಐಶ್ವರ್ಯ, ಆಭರಣ ಆಕಾಶ್ ಎಂಬ ಮೂವರು ಮಕ್ಕಳನ್ನು ಹೊಂದಿದ್ದಾರೆ. ಸಹೋದರ ಡಿ. ಕೆ. ಸುರೇಶ್ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸರಾಗಿದ್ದಾರೆ. ಸದ್ಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷರಾಗಿದ್ದ ಅವರು ಕಾಂಗ್ರೆಸ್​ ಅಭ್ಯರ್ಥಿಯಾಗಿ ಕನಕಪುರದಿಂದ ಕಣಕ್ಕೆ ಇಳಿದಿದ್ದರು.

ಡಿಕೆಶಿ ರಾಜಕೀಯ ಬೆಳವಣಿಗೆ: 1989ರಲ್ಲಿ ಸಾತನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ಕ್ಷೇತ್ರದಲ್ಲಿದ್ದ ಜೆಡಿಎಸ್‌ ಪ್ರಭಾವನ್ನು ಕಡಿಮೆಗೊಳಿಸಿದರು. 1991ರಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವಲ್ಲಿ ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರವಹಿಸಿದ್ದರು. 1994ರಲ್ಲಿ ಡಿಕೆಶಿ ಅವರಿಗೆ ಕಾಂಗ್ರೆಸ್​​ ಟಿಕೆಟ್​ ನಿರಾಕರಿಸಲಾಗಿತ್ತು. ಆಗ ಅವರು ಪಕ್ಷೇತರರಾಗಿ ಗೆಲುವು ಸಾಧಿಸಿದ್ದರು. ಈ ಮೂಲಕ ಅವರು ಆಗಲೇ ತಮ್ಮ ಸಾಮರ್ಥ್ಯವನ್ನ ತೋರಿಸಿದ್ದಾರೆ. ಬಂಗಾರಪ್ಪ ಸಂಪುಟದಲ್ಲಿ ಬಂಧಿಖಾನೆ ಖಾತೆ ಹೊಣೆಯನ್ನು ಅವರಿಗೆ ನೀಡಲಾಗಿತ್ತು. 1999ರ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಆಯ್ಕೆಗೊಂಡ ಅವರು, ಎಸ್. ಎಂ. ಕೃಷ್ಣ ಸಂಪುಟದಲ್ಲಿ ಸಹಕಾರ ಸಚಿವರಾದರು.

2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿರು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಕನಕಪುರ ಕ್ಷೇತ್ರಕ್ಕೆ ಬಂದರು. 2008, 2013 ಮತ್ತು 2018ರ ಚುನಾವಣೆಯಲ್ಲಿ ಕನಕಪುರದಿಂದ ಸತತ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ. 2013ರ ಸಿದ್ದರಾಮಯ್ಯ ಅವರ ಸಂಪುಟ ಸೇರಿ ಇಂಧನ ಖಾತೆ ವಹಿಸಿಕೊಂಡರು. ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದರು.

ವಿದ್ಯಾರ್ಥಿಯಿಂದ ರಾಜಕಾರಣಿಯಾದ ಡಿಕೆಶಿ: ಡಿಕೆ ಶಿವಕುಮಾರ್ 1980ರ ದಶಕದ ಆರಂಭದಲ್ಲಿ ವಿದ್ಯಾರ್ಥಿ ನಾಯಕರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಕ್ರಮೇಣ ಕಾಂಗ್ರೆಸ್ ಪಕ್ಷದ ಶ್ರೇಣಿಯ ಮೂಲಕ ಹುದ್ದೆಗೇರಿದರು. 1989 ರಲ್ಲಿ ಮೈಸೂರು ಜಿಲ್ಲೆಯ ಸಾತನೂರು ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದಾಗ ಅವರು ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಆಗ ಅವರಿಗೆ ಕೇವಲ 27 ವರ್ಷ. ಕನಕಪುರ ಕ್ಷೇತ್ರ ರಚನೆ ಬಳಿಕ ಸತತ ಗೆದ್ದು ಪ್ರಾಬಲ್ಯ ಸ್ಥಾಪಿಸಿದವರು.

ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರನ್ನು ಉಳಿಸಿದ ಕೀರ್ತಿ: ನಮ್ಮ ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲಿ ವಿಲಾಸ್‍ರಾವ್ ದೇಶ್‍ಮುಖ್ ಸಮ್ಮಿಶ್ರ ಸರ್ಕಾರ ಎನ್​ಸಿಪಿ ಪಕ್ಷದೊಂದಿಗೆ ಸೆಣಸಾಟಕ್ಕಿಳಿದಾಗ ಸರ್ಕಾರ ಅಲ್ಪಮತದ ಅಪಾಯಕ್ಕೆ ಸಿಕ್ಕಿಕೊಂಡಿತ್ತು. ಆಗ ಎನ್​ಸಿಪಿ ಮತ್ತು ಪ್ರತಿಪಕ್ಷಗಳು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಕುದುರೆ ವ್ಯಾಪಾರಕ್ಕೆ ಇಳಿದಿದ್ದವು. ತಕ್ಷಣ ಕಾಂಗ್ರೆಸ್ ಹೈಕಮಾಂಡ್​ನ ಆದೇಶದಂತೆ ಕಾರ್ಯಪ್ರವೃತ್ತರಾದ ಡಿ.ಕೆ. ಶಿವಕುಮಾರ್ ಅವರು ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರನ್ನು ಮುಂಬೈಯಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಸುಮಾರು 10-12 ದಿನಗಳ ಕಾಲ ಬೆಂಗಳೂರಿನ ರೆಸಾರ್ಟ್ ಒಂದರಲ್ಲಿ ಇರಿಸಿಕೊಂಡು ರಕ್ಷಣೆ ನೀಡಿದರು.

ಅನೇಕ ಕಾರ್ಯಕ್ರಮಗಳು ಅನುಷ್ಠಾನ: 2018ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮೊದಲಿಗೆ ಜಲಸಂಪನ್ಮೂಲ ನಂತರ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ಪಡೆದ ಡಿ.ಕೆ.ಶಿವಕುಮಾರ್​ ಅವರು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದರು. ಮಹದಾಯಿ ಸಮಸ್ಯೆ ಪರಿಹಾರ, ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ ಅವರು ರಾಜ್ಯದಲ್ಲಿ ಅತೀ ಹೆಚ್ಚು ಪ್ರಮಾಣದ ಚೆಕ್ ಡ್ಯಾಮ್‍ಗಳ ನಿರ್ಮಾಣಕ್ಕೆ ಪ್ರೋತ್ಸಾಹ ಧನ ನೀಡುವ ಮೂಲಕ ಉತ್ತೇಜಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಘಟನೆ: ಕಾಂಗ್ರೆಸ್ ಪಕ್ಷದಲ್ಲಿ ಖಾಲಿ ಇದ್ದ ನಾಯಕತ್ವದ ಸ್ಥಾನಕ್ಕೆ ಅಂದರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ಮಾರ್ಚ್ 11, 2020ರಂದು ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಿದರು. ಈ ನೇಮಕವಾದ ಕೆಲವೇ ದಿನಗಳಲ್ಲಿ ಕೋವಿಡ್ ಮಹಾಮಾರಿ ದೇಶದೆಲ್ಲೆಡೆ ಆವರಿಸಿತು. ಈ ಸಂದರ್ಭದಲ್ಲಿ ಅವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಉತ್ತೇಜನ ನೀಡಿ ಅವರು ಕೂಡ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಮಾಡಲು ಕರೆ ನೀಡಿದರು.

ಡಿಕೆಶಿಯಿಂದ 60 ಕಿ.ಮೀ. ಪಾದಯಾತ್ರೆ: ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಪ್ರಯೋಜನಗಳನ್ನು ಹೊಂದಿರುವ ಮೇಕೆದಾಟು ಯೋಜನೆಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದಾಗ ಈ ಯೋಜನೆ ಆಗ್ರಹಿಸಿ, ಈ ಭಾಗದಲ್ಲಿ 160 ಕಿ.ಮೀ. ಪಾದಯಾತ್ರೆ ಮಾಡಿದರು.

ವೈಯಕ್ತಿಕ ಜೀವನದಲ್ಲಿ ರೈತರಾಗಿ, ವಸತಿ ಯೋಜನೆಗಳ ನಿರ್ಮಾತೃರಾಗಿರುವ ಡಿ.ಕೆ. ಶಿವಕುಮಾರ್, ನ್ಯಾಷನಲ್ ಎಜುಕೇಶನ್ ಫೌಂಡೇಷನ್‍ನ ಸ್ಥಾಪಕ ಅಧ್ಯಕ್ಷರಾಗಿ ಇಂಜಿನಿಯರಿಂಗ್, ನರ್ಸಿಂಗ್ ಹಾಗೂ ಮ್ಯಾನೇಜ್‍ಮೆಂಟ್ ವಿದ್ಯಾ ಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಅಲ್ಲದೆ ವಿಶ್ವಮಟ್ಟದ ಎರಡು ಪ್ರಾಥಮಿಕ ಶಾಲೆಗಳನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ: ದೆಹಲಿಯಲ್ಲಿ ಕಾಂಗ್ರೆಸ್‌ ವರಿಷ್ಠರಿಂದ ಘೋಷಣೆ

Last Updated :May 18, 2023, 6:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.