ETV Bharat / state

ಜ.25ರಿಂದ ಶಿವರಾಮ್ ಕಾರಂತ ಬಡಾವಣೆ ನಿವೇಶನಗಳಿಗೆ ಅರ್ಜಿ ಆಹ್ವಾನ

author img

By ETV Bharat Karnataka Team

Published : Jan 18, 2024, 7:24 AM IST

ಶಿವರಾಮ್ ಕಾರಂತ ಬಡಾವಣೆ ನಿವೇಶನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್
ಡಿಸಿಎಂ ಡಿ.ಕೆ ಶಿವಕುಮಾರ್

ಶಿವರಾಮ್ ಕಾರಂತ ಬಡಾವಣೆ ನಿವೇಶನಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜನವರಿ 25ರಿಂದ ಶಿವರಾಮ ಕಾರಂತ ಬಡಾವಣೆ ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಿದ್ದು, ಮೊದಲ ಆದ್ಯತೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಬಿಡಿಎ ಪ್ರಧಾನ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಶಿವರಾಮ ಕಾರಂತ ಬಡಾವಣೆ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಗಳ ಪರಿಶೀಲನೆ ಮಾಡಿದ್ದೇವೆ. ಶಿವರಾಮ್ ಕಾರಂತ ಬಡಾವಣೆ ನಿವೇಶನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುವುದು. ಉಳಿದಂತೆ, ಬೆಂಗಳೂರಿನ ವಿವಿಧ ಬಿಡಿಎ ಕಚೇರಿಗಳಲ್ಲಿ ಆಫ್‌ಲೈನ್ ಮೂಲಕ ಅರ್ಜಿಗಳ ಸ್ವೀಕಾರ ಮಾಡಲಾಗುವುದು. ಅರ್ಜಿ ಹಾಕಿದ ನಂತರ ಅರ್ಜಿದಾರರು ಒಂದು ತಿಂಗಳಲ್ಲಿ ನಿವೇಶನ ಒಟ್ಟು ಮೊತ್ತದ ಶೇ.12.5ರಷ್ಟು ಆರಂಭಿಕ ಠೇವಣಿ ಕಟ್ಟಬೇಕು. ಪರಿಶಿಷ್ಟರು ಶೇ.5ರಷ್ಟು ಠೇವಣಿ ಕಟ್ಟಬೇಕು. ಪಾರದರ್ಶಕವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ಯಾರು ಬೇಕಾದರೂ ಮಾಹಿತಿ ಪಡೆಯಲು ಹಾಗೂ ನೋಡಲು ಅವಕಾಶ ಕಲ್ಪಿಸಲಾಗುವುದು. ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದರು.

ಬಡಾವಣೆಯಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣಕ್ಕೆ 45 ಅಡಿ ರಸ್ತೆ ಇರುವ ಕಡೆ 25-30 ಎಕರೆ ಜಾಗ ಗುರುತಿಸಲಾಗಿದೆ. ಕಂಠೀರವ ಕ್ರೀಡಾಂಗಣ ಮಾದರಿಯಲ್ಲಿ ಬೆಂಗಳೂರು ಉತ್ತರ ಭಾಗದಲ್ಲಿ ಮತ್ತೊಂದು ಕ್ರೀಡಾಂಗಣ ಮಾಡಬೇಕು ಎಂದು ತೀರ್ಮಾನಿಸಿದ್ದೇವೆ. ಸಿಎ ನಿವೇಶನ, ಪಾರ್ಕ್ ಎಲ್ಲವೂ ಇದೆ. ಇಲ್ಲಿ ಶೇ.42ರಷ್ಟು ಜಾಗದಲ್ಲಿ ನಿವೇಶನ ಮಾಡಲಾಗಿದ್ದು, ಉಳಿದ ಜಾಗವನ್ನು ಅಗಲವಾದ ರಸ್ತೆ ಹಾಗೂ ಇತರೆ ಸೌಕರ್ಯಕ್ಕೆ ಬಳಸಲಾಗಿದೆ. ನಾವು ರೈತರಿಗೆ ಈಗ ನಿವೇಶನಗಳನ್ನು ಹಂಚಿಕೆ ಮಾಡಬೇಕಾದ ಹಿನ್ನೆಲೆಯಲ್ಲಿ ಈ ನಿವೇಶನಗಳ ಬೆಲೆ ದುಬಾರಿಯಾಗಿದೆ. ಈ ಮುನ್ನ ಅವರಿಗೆ ಹಣಕಾಸಿನ ಪರಿಹಾರ ನೀಡಿ ಭೂಮಿ ವಶಪಡಿಸಿಕೊಳ್ಳಲಾಗುತ್ತಿತ್ತು. ಆದರೆ ಈಗ ಮೊದಲ ಬಾರಿಗೆ ನಿವೇಶನವನ್ನು ನೀಡುತ್ತಿದ್ದೇವೆ. ಈ ಬಡಾವಣೆಯಲ್ಲಿ ಪ್ರತಿ ಚದರ ಅಡಿಗೆ 4,900 ರೂ. ನಿಗದಿ ಮಾಡಲಾಗಿದೆ ಎಂದು ಡಿಕೆಶಿ ಮಾಹಿತಿ ನೀಡಿದರು.

ಭೂಮಿ ಕಳೆದುಕೊಂಡ ರೈತರಿಗೆ ಮೊದಲ ಆದ್ಯತೆ: ಶಿವರಾಮ ಕಾರಂತ ಲೇಔಟ್ ಸಂಬಂಧ ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ 3069 ಎಕರೆಯನ್ನು ನಮ್ಮ ವಶಕ್ಕೆ ತೆಗೆದುಕೊಳ್ಳಲಾಗಿದೆ. 17 ಗ್ರಾಮದಲ್ಲಿ ಒಟ್ಟು 18 ಸಾವಿರ ಮಂದಿ ಭೂಮಿ ಕಳೆದುಕೊಂಡಿದ್ದು, ಅವರಿಗೆ ಮೊದಲ ಆದ್ಯತೆಯಲ್ಲಿ ಶೇ. 40 ರಷ್ಟು ನಿವೇಶನಗಳನ್ನು ನೀಡಲಾಗುವುದು. ಅವರದೇ ಜಮೀನಿನಲ್ಲಿ ನಿವೇಶನ ನೀಡಲಾಗುವುದು. ಸಾಧ್ಯವಾಗದಿದ್ದರೆ ಅವರದೇ ಊರಿನಲ್ಲಿ ಸೈಟ್ ನೀಡಲಾಗುವುದು. ಭೂ ಸಂತ್ರಸ್ತರು ಎಲ್ಲಾ ದಿಕ್ಕಿನ ನಿವೇಶನಗಳನ್ನು ಪಡೆಯಲು ಸಿದ್ಧರಿರಬೇಕು. ನಮಗೆ ನಿರ್ದಿಷ್ಟ ದಿಕ್ಕಿನ ನಿವೇಶನ ಬೇಕು ಎಂದು ಪಟ್ಟು ಹಿಡಿಯುವಂತಿಲ್ಲ.

ಈ ಬಡಾವಣೆಯಲ್ಲಿ 9500 ನಿವೇಶನಗಳನ್ನು ಭೂಮಿ ಕಳೆದುಕೊಂಡವರಿಗೆ ನೀಡಬೇಕಾಗಿದೆ. 4750 ಕ್ಕೂ ಹೆಚ್ಚು ಕಾರ್ನರ್ ನಿವೇಶನಗಳನ್ನು ಕಾನೂನಿನ ಪ್ರಕಾರದಂತೆ ಇ-ಹರಾಜು ಹಾಕಲಾಗುವುದು. ಉಳಿದ 10 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಜನರಿಗೆ ಹಂಚಿಕೆ ಮಾಡಲಾಗುತ್ತಿದೆ. ಈ ಪ್ರಕ್ರಿಯೆಗೆ 9 ಬ್ಯಾಂಕುಗಳನ್ನು ಗುರುತಿಸಿದ್ದೇವೆ ಎಂದು ಡಿಕೆಶಿ ಮಾಹಿತಿ ನೀಡಿದರು.

ಪಿಆರ್ ಆರ್ ರಸ್ತೆ ಈಗ ಬೆಂಗಳೂರು ಬಿಸಿನೆಸ್ ಕಾರಿಡಾರ್: ಬೆಂಗಳೂರಿನ ಉತ್ತರದಲ್ಲಿ ಫೆರಿಫೆರಲ್ ರಿಂಗ್ ರಸ್ತೆ ಮಾಡಲು ತೀರ್ಮಾನಿಸಿದ್ದು, ಬಹಳ ಒತ್ತಡವಿದ್ದರೂ ಇದರ ಡಿನೋಟಿಫಿಕೇಶನ್ ಮಾಡುವುದಿಲ್ಲ. ಇದಕ್ಕೆ ಈಗ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಬಿಬಿಸಿ) ಎಂದು ನಾಮಕರಣ ಮಾಡಿದ್ದೇವೆ. ಮುಂದಿನ ಒಂದು ವಾರದಲ್ಲಿ ಈ ರಸ್ತೆಯ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಯಾರು ಬೇಕಾದರೂ ಭಾಗವಹಿಸಬಹುದು. ಭೂಮಿ ಕಳೆದುಕೊಳ್ಳುವ ರೈತರಿಗೆ ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಸೂಕ್ತ ಪರಿಹಾರ ನೀಡುತ್ತೇವೆ ಎಂದು ಡಿ.ಕೆ.ಶಿವಕುಮಾರ್​ ವಿವರಿಸಿದರು.

ಡಿನೋಟಿಫಿಕೇಶನ್ ಮಾಡುವುದಿಲ್ಲ: ಬಿಬಿಸಿ ಸೇರಿದಂತೆ ಯಾವುದೇ ಯೋಜನೆಗೆ ಒಮ್ಮೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡರೆ ನಂತರ ಅದನ್ನು ಡಿನೋಟಿಫಿಕೇಶನ್ ಮಾಡುವುದಿಲ್ಲ ಎಂಬ ತೀರ್ಮಾನ ಮಾಡಲಾಗಿದೆ. ಕೆಂಪೇಗೌಡ ಬಡಾವಣೆಯ ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಹೊಸ ಲೂಪ್ ರಸ್ತೆ ಸೇರಿಸಲಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ನಿಯಂತ್ರಣವಾಗಲಿದೆ. 3,278 ವಸತಿ ಮನೆಗಳನ್ನು ಆದಷ್ಟು ಬೇಗ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ಬಡಾವಣೆ ನಿರ್ಮಾಣ, ಜಾಗ ಗುರುತಿಸುವ ಕೆಲಸ ಆರಂಭ: ಡಿಸಿಎಂ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.