ETV Bharat / state

ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಅಲೋಕ್ ಮೋಹನ್ ನೇಮಕ

author img

By

Published : May 21, 2023, 6:46 AM IST

Updated : May 21, 2023, 7:08 AM IST

ಹಿರಿಯ ಐಪಿಎಸ್ ಅಧಿಕಾರಿ ಡಾ.ಅಲೋಕ್ ಮೋಹನ್ ಅವರು ಕರ್ನಾಟಕ ರಾಜ್ಯದ ಹೊಸ ಪೊಲೀಸ್ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.

Dr Alok Mohan
ಡಾ ಅಲೋಕ್ ಮೋಹನ್

ಬೆಂಗಳೂರು: ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಶನಿವಾರ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಡಾ.ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆಯಾಗಿ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸಿ ಆದೇಶ ಹೊರಡಿಸಿದೆ. ಸೇವಾ ಹಿರಿತನದ ಆಧಾರದ ಮೇಲೆ 87ನೇ ಬ್ಯಾಚ್‌ನ ಅಧಿಕಾರಿ ಹಾಗೂ ಪ್ರಸ್ತುತ ರಾಜ್ಯ ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕದಳದ ಮುಖ್ಯಸ್ಥರಾಗಿರುವ ಅಲೋಕ್ ಮೋಹನ್​ ಅವರನ್ನು ಮುಂದಿನ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿಯಾಗಿ ಆಯ್ಕೆ ಮಾಡಲಾಗಿದೆ. ಮೇ 22 ರಂದು ಇವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬಿಹಾರ ರಾಜ್ಯದ ಪಾಟ್ನಾ ಮೂಲದವರಾದ ಡಾ.ಅಲೋಕ್ ಮೋಹನ್, 1965 ರ ಏಪ್ರಿಲ್ 18ರಂದು ಜನಿಸಿದರು. ಉತ್ತರಾಖಂಡದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್‌ಸಿ, ಭಾರತೀಯ ಆಂತರಿಕಾ ಭದ್ರತೆ ಬಗ್ಗೆೆ ಪಿಎಚ್‌ಡಿ ಪಡೆದುಕೊಂಡಿದ್ದಾರೆ. ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಲೋಕ್ ಮೋಹನ್, ಸಿಐಡಿ ಡಿಜಿಪಿ, ಬೆಂಗಳೂರು ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ, ಬಳಿಕ ಮಂಗಳೂರು ಪಶ್ಚಿಮ ವಲಯ ಐಜಿಪಿಯಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಎಡಿಜಿಪಿ ಆಡಳಿತ ಹಾಗೂ ಕಾರಾಗೃಹ ಮತ್ತು ಅಗ್ನಿಶಾಮಕ ದಳ ಡಿಜಿಪಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಈಗ ರಾಜ್ಯ ಪೊಲೀಸ್​ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.

ಸಿಬಿಐ ನಿರ್ದೇಶಕರಾಗಿ ಪ್ರವೀಣ್​ ಸೂದ್​: ಹಿರಿಯ ಐಪಿಎಸ್​ ಅಧಿಕಾರಿ ಪ್ರವೀಣ್ ಸೂದ್​ ಅವರು ಕರ್ನಾಟಕದ ಡಿಜಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಕೇಂದ್ರ ಸರ್ಕಾರ ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಇತ್ತೀಚೆಗೆ ಆಯ್ಕೆ ಮಾಡಿ ಆದೇಶ ಹೊರಡಿಸಿದೆ. ಸೂದ್​ ಮುಂದಿನ ಮೂರು ವರ್ಷಗಳ ಹಿಂದೆಯಷ್ಟೇ ರಾಜ್ಯ ಡಿಜಿಪಿಯಾಗಿ ನೇಮಕಗೊಂಡಿದ್ದರು. ಮೂಲತಃ ಹಿಮಾಚಲ ಪ್ರದೇಶದ ಇವರು ಐಐಟಿ ದೆಹಲಿಯ ವಿದ್ಯಾರ್ಥಿ. ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅಧಿಕಾರ ಅವಧಿಯು ಮೇ 25ರಂದು ಕೊನೆಗೊಳ್ಳಲಿದೆ. ಹೀಗಾಗಿ ಕರ್ನಾಟಕ ಕೇಡರ್‌ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ.

ಪ್ರವೀಣ್​ ಸೂದ್ 1989 ಮೈಸೂರು ಎಎಸ್ಪಿಯಾಗಿ ವೃತ್ತಿ ಆರಂಭಿಸಿದ ಇವರು ಬಳ್ಳಾರಿ, ರಾಯಚೂರಲ್ಲಿ ಎಸ್‍ಪಿ ಆಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. 1999 ರಲ್ಲಿ ಮಾರಿಷಸ್ ದೇಶದ ಪೊಲೀಸ್ ಸಲಹೆಗಾರರಾಗಿ ಮೂರು ವರ್ಷ ಸೇವೆ ಸಲ್ಲಿಸಿದ ಪ್ರವೀಣ್ ಸೂದ್ ಅವರಿಗೆ 1996 ರಲ್ಲಿ ಮುಖ್ಯಮಂತ್ರಿಗಳ ಪದಕ, 2002ರಲ್ಲಿ ಪೊಲೀಸ್ ಪದಕ ದೊರೆತಿದೆ. 2004-07 ರಲ್ಲಿ ಮೈಸೂರು ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2011 ರಲ್ಲಿ ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾಗಿದ್ದರು. 2013-14 ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಮ್ಯಾನೆಜಿಂಗ್ ಡೈರೆಕ್ಟರ್, 2017 ರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಶೀಘ್ರದಲ್ಲೇ ಸಿಬಿಐ ನಿರ್ದೇಶಕನಾಗಿ ಅಧಿಕಾರ ವಹಿಸಿಕೊಳ್ಳುವೆ: ಪ್ರವೀಣ್ ಸೂದ್ ಟ್ವೀಟ್​

Last Updated :May 21, 2023, 7:08 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.