ಗೋಹತ್ಯೆ ನಿಷೇಧ ಕಾಯ್ದೆಯಿಂದ ರೈತರಿಗೆ ಸಂಕಷ್ಟ: ಡಾ.ಸಿಲ್ವಿಯಾ ಕರಪಗಮ್

author img

By

Published : Aug 25, 2021, 7:02 AM IST

Bengaluru

ಆಹಾರ ನಮ್ಮ ಹಕ್ಕು(ಕರ್ನಾಟಕ) ಅಭಿಯಾನದಡಿ ಗೋಹತ್ಯೆ ನಿಷೇಧ ಕಾಯ್ದೆಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞೆ ಡಾ.ಸಿಲ್ವಿಯಾ ಕರಪಗಮ್ ಹೇಳಿದರು.

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನಡೆಯಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಮತ್ತೊಂದೆಡೆ, ಪೌಷ್ಟಿಕ ಆಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞೆ ಡಾ.ಸಿಲ್ವಿಯಾ ಕರಪಗಮ್ ಹೇಳಿದರು.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಹಾರ ನಮ್ಮ ಹಕ್ಕು(ಕರ್ನಾಟಕ) ಅಭಿಯಾನದಡಿ ಈ ಕಾಯ್ದೆಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ. ಇದರ ಬಗ್ಗೆ ಚರ್ಚಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಯ್ದೆ ವಾಪಸ್ ಪಡೆಯಲಿ ಎಂದರು.

ಸಾರ್ವಜನಿಕ ಆರೋಗ್ಯ ತಜ್ಞೆ ಡಾ. ಸಿಲ್ವಿಯಾ ಕರಪಗಮ್

ಗೋಹತ್ಯೆ ನಿಷೇಧ 1964ರಿಂದಲೇ ಜಾರಿಯಲ್ಲಿದೆ. ಹಾಲು ನೀಡದ, ಕೃಷಿಗೆ ಯೋಗ್ಯವಲ್ಲದ, ರೋಗಗ್ರಸ್ತ ಗೋವುಗಳನ್ನು ಕೊಲ್ಲುವುದಕ್ಕೆ ಅವಕಾಶ ನೀಡಿರುವ ಆ ಕಾಯ್ದೆ, ಉಳಿದಂತೆ ಗೋಹತ್ಯೆಯನ್ನು ನಿಷೇಧಿಸಿದೆ. ಇದೀಗ ಹೊಸದಾಗಿ ಜಾರಿಗೆ ಬಂದಿರುವ ಕಾಯ್ದೆಯಿಂದ ರೈತರಿಗೆ ತೊಂದರೆಯಾಗಿದ್ದು, ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು. ಅವುಗಳನ್ನು ರೈತರೇ ಸಾಕಬೇಕಾದರೆ ಅದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಹೇಳಿದರು.

ದಲಿತ ಮುಖಂಡ ಆರ್.ಮೋಹನ್ ರಾಜ್ ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಕಠೋರ ಮತ್ತು ಅವೈಜ್ಞಾನಿಕ. ಸಂಪೂರ್ಣ ರೈತ ವಿರೋಧಿಯಾಗಿದೆ. ಈ ಕಾಯ್ದೆಗೆ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದೆಯೇ ಹೊರತು ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾನುವಾರುಗಳ ಬಗ್ಗೆ ಬಿಜೆಪಿ ಸರ್ಕಾರ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಜಾನುವಾರು ಸಂಬಂಧಿ ಆರ್ಥಿಕ ಮತ್ತು ಸಾಮಾಜಿಕ ಅಧ್ಯಯನವನ್ನು ತಜ್ಞರಿಂದ ನಡೆಸಿ, ಅದರ ವರದಿ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ನಂತರ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೂಪಿಸಬೇಕು ಎಂದು ಹೇಳಿದರು.

ಗೋವುಗಳ ಬಗ್ಗೆ ಬಿಜೆಪಿಗೆ ಅಷ್ಟೊಂದು ಭಕ್ತಿ ಮತ್ತು ಕಾಳಜಿ ಹೊಂದಿದ್ದರೆ ಗೋವಾ, ಕೇರಳ ಮತ್ತು ಈಶಾನ್ಯ ರಾಜ್ಯ ಸೇರಿ ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದು ಕಾನೂನನ್ನು ಜಾರಿಗೆ ತನ್ನಿ, ಇದರ ಜೊತೆಗೆ ಗೋಮಾಂಸ ರಫ್ತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.