ETV Bharat / state

ಡ್ರೀಮ್ಸ್ ಜಿ ಕೆ ಸಂಸ್ಥೆ ವಂಚನೆ: ಹೂಡಿಕೆದಾರರಿಗೆ ಪರಿಹಾರ ಕಲ್ಪಿಸಲು ಕ್ರಮವೆಂದ ಸರ್ಕಾರ

author img

By

Published : Feb 27, 2023, 10:53 PM IST

ಡ್ರೀಮ್ಸ್ ಜಿ ಕೆ ಇನ್‌ವೆಸ್ಟರ್ಸ್​​​ ವೆಲ್​ಫೇರ್​​ ಅಸೋಸಿಯೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಹೈಕೋರ್ಟ್‌
ಹೈಕೋರ್ಟ್‌

ಬೆಂಗಳೂರು : ನಗರದ ಡ್ರೀಮ್ಸ್ ಜಿ ಕೆ ಸಂಸ್ಥೆಯಲ್ಲಿ 385 ಕೋಟಿ ರು. ಗಳ ಬಂಡವಾಳ ಹೂಡಿಕೆ ಮಾಡಿರುವವರಿಗೆ ಪರಿಹಾರ ಕಲ್ಪಿಸುವುದಕ್ಕಾಗಿ 12 ಆರೋಪಿತರ ವಿರುದ್ಧ 27 ದೋಷಾರೋಪ ಪಟ್ಟಿಗಳು ಅಧೀನ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಸಲ್ಲಿಕೆ ಮಾಡಿದ್ದು, ಪ್ರಕರಣ ವಿಚಾರಣಾ ಹಂತದಲ್ಲಿದೆ. ಈ ಸಂದರ್ಭದಲ್ಲಿ ಪ್ರತ್ಯೇಕ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮೆಸೆಸ್ ಡ್ರೀಮ್ಸ್ ಜಿ ಕೆ ಇನ್‌ವೆಸ್ಟರ್ಸ್​​​ ವೆಲ್​ಫೇರ್​​ ಅಸೋಸಿಯೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿ ಸಂಸ್ಥೆಯಲ್ಲಿ ಬಂಡವಾಳ ಹೂಡಿಕೆ ಮಾಡಿರುವವರಿಗೆ ಪರಿಹಾರ ಕಲ್ಪಿಸುವ ಸಲುವಾಗಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಪ್ರಕರಣ ತನಿಖಾ ವರದಿಯನ್ನು ಸಲ್ಲಿಸಿದ ಸರ್ಕಾರದ ಪರ ವಕೀಲರು, ಪ್ರಕರಣದ 13 ಮಂದಿ ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಜತೆಗೆ, ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ನೀಡಿತ್ತು. ತನಿಖೆಯಲ್ಲಿ ಗ್ರಾಹಕರನ್ನು ಬಂಡವಾಳ ಹೂಡಿಕೆಗೆ ಆಕರ್ಷಣೆ ಮಾಡಿದ್ದು, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಜನ ಬಂಡವಾಳ ಹೂಡಿಕೆ ಮಾಡಿದ್ದಾರೆ. ಅಲ್ಲದೆ, ಸುಮಾರು 385 ಕೋಟಿ ರೂ. ಗಳನ್ನು ಹೂಡಿಕೆ ಮಾಡಿದ್ದರು. ಆರೋಪಿಗಳು ಹೂಡಿಕೆದಾರರನ್ನು ವಂಚಿಸಿದ್ದರು ಎಂಬುದು ತಿಳಿಸಿದೆ.

ಪ್ರಕರಣದಲ್ಲಿ 12 ಮಂದಿ ಆರೋಪಿಗಳಾಗಿದ್ದು, ಸುದೀರ್ಘ ತನಿಖೆ ನಡೆಸಿರುವ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ 27 ಆರೋಪ ಪಟ್ಟಿಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, ಆರೋಪಗಳಲ್ಲಿ 12 ಸ್ಥಿರಾಸ್ತಿಗಳು ಮತ್ತು 46 ಆಸ್ತಿಗಳ ಮಾರಾಟ ಸಂಬಂಧ ಒಪ್ಪಂದ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬ್ಯಾಂಕ್ ಬ್ಯಾಲೆನ್ಸ್, ಮ್ಯೂಚುವಲ್ ಫಂಡ್, ವಾಹನಗಳು ಸೇರಿದಂತೆ 9 ಕೋಟಿ ರೂಗಳಿಗೂ ಹೆಚ್ಚು ಚರಾಸ್ತಿಗಳು ಪತ್ತೆಯಾಗಿವೆ. ಅವುಗಳನ್ನು ಕಾನೂನು ಪ್ರಕಾರ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ : ಹಣ ನೀಡಲು ಬೆದರಿಕೆ ಆರೋಪ: ಆರ್‌ಎಸ್‌ಎಸ್ ಕಾರ್ಯಕರ್ತನ ವಿರುದ್ಧದ ಪ್ರಕರಣ ರದ್ದು

ಅಲ್ಲದೆ, ಆಸ್ತಿಗಳ ಮಾರಾಟಕ್ಕಾಗಿ ಬೆಂಗಳೂರು ದಕ್ಷಿಣ ತಾಲೂಕಿನ ಹೆಚ್ಚುವರಿ ಆಯುಕ್ತರ ನೇತೃತ್ವದಲ್ಲಿ ಸಕ್ಷಮ ಪ್ರಾಧಿಕಾರ ರಚನೆ ಮಾಡಲಾಗಿದೆ. ಆರೋಪಿತರ ಒಡೆತನದ ಆಸ್ತಿಗಳನ್ನು ವಶಕ್ಕೆ ಪಡೆದು ಹೂಡಿಕೆದಾರರಿಗೆ ಪರಿಹಾರ ಒದಗಿಸುವುದಕ್ಕಾಗಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಈ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ವಿವರಿಸಿದರು.

ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ಕಾನೂನು ಪ್ರಕಾರ ತೀರ್ಮಾನ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿತು. ಅಲ್ಲದೆ, ಈ ಪ್ರಕರಣದಲ್ಲಿ ತಕ್ಷಣ ಯಾವುದೇ ರೀತಿಯ ಆದೇಶಗಳನ್ನು ಹೊರಡಿಸುವ ಅಗತ್ಯವಿಲ್ಲ ಎಂದು ತಿಳಿಸಿ ಅರ್ಜಿಯನ್ನು ಇತ್ಯರ್ಥ ಪಡಿಸಿತು.

ಇದನ್ನೂ ಓದಿ : ಎರಡು ಪ್ರಕರಣಗಳಲ್ಲಿ ಶಿಕ್ಷೆಯಾದಲ್ಲಿ ಒಂದೇ ಅವಧಿಯಲ್ಲಿ ಅನುಭವಿಸಬೇಕು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.