ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ ಕುರಿತು ಬಿಬಿಎಂಪಿ ಹಾಗೂ ಸರ್ಕಾರವನ್ನು ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.
ಸಮರ್ಪಕವಾದ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆಯಾಗುತ್ತಿಲ್ಲ. ಪರಿಸರ ಮಾಲಿನ್ಯ ಕಡಿಮೆಗೊಳಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮ ಜರುಗಿಸಿಲ್ಲ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ತ್ಯಾಜ್ಯ ನಿರ್ವಹಣೆ ಕುರಿತ ವಿಫಲತೆ ಮತ್ತು ಪರಿಹಾರದ ಬಗ್ಗೆ ಮಂಗಳವಾರ ಸಮಗ್ರ ಆದೇಶ ಹೊರಡಿಸುವುದಾಗಿ ಹೈಕೋರ್ಟ್ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿಯಲ್ಲಿ ಅಸಮರ್ಥತೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಕಸ ನಿರ್ವಹಣೆ ಕುರಿತು ಅತೃಪ್ತಿ ವ್ಯಕ್ತಪಡಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್ ವಾದ ಮಂಡಿಸಿ, ಘನತ್ಯಾಜ್ಯ ನಿರ್ವಹಣೆಗೆ ಪಾಲಿಕೆ ಬಜೆಟ್ನಲ್ಲಿ ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿರಿಸಲಾಗಿದೆ. ಇದನ್ನು ಪಾಲಿಕೆ ಸದಸ್ಯರು ಮತ್ತು ಗುತ್ತಿಗೆದಾರರು ಶಾಮೀಲಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗುತ್ತಿಗೆದಾರರು ಮತ್ತು ಪಾಲಿಕೆ ಸದಸ್ಯರು ಕಸ ಸಮಸ್ಯೆ ಬಗೆಹರಿಸಿಲ್ಲ. ಬಿಬಿಎಂಪಿ ಅಧಿಕಾರಿಗಳು ಸಹ ಬಹಳಷ್ಟು ಅಕ್ರಮವೆಸಗುತ್ತಿದ್ದಾರೆ ಎಂದು ಆರೋಪಿಸಿದರು. ತ್ಯಾಜ್ಯ ವಿಲೇವಾರಿ ಬೃಹತ್ ಸಮಸ್ಯೆಯಾಗಿ ಪರಿಣಮಿಸಿದೆ. ಬಿಬಿಎಂಪಿ ಹಾಗೂ ಸರ್ಕಾರ ಸರಿಯಾದ ಕ್ರಮಕೈಗೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಸಮಗ್ರ ಆದೇಶ ಪ್ರಕಟಿಸುವುದಾಗಿ ತಿಳಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿದೆ.