ETV Bharat / state

ಬ್ಯಾಂಕ್​ಗೆ ಸಾಲ ಮರುಪಾವತಿಸದೆ ವಂಚನೆ ಆರೋಪ; ರಮೇಶ್​ ಜಾರಕಿಹೊಳಿ ವಿರುದ್ಧ ಎಫ್​ಐಆರ್​

author img

By ETV Bharat Karnataka Team

Published : Jan 7, 2024, 2:16 PM IST

fir-against-former-minister-ramesh-jarakiholi-on-charges-of-not-repaying-loan
ಬ್ಯಾಂಕ್​ಗೆ ಸಾಲ ಮರುಪಾವತಿಸದೇ ವಂಚನೆ ಆರೋಪ ; ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಹಿತ ಮೂವರ ವಿರುದ್ಧ ಎಫ್​ಐಆರ್​

ಸಾಲ ಮರುಪಾವತಿಸದೆ ವಂಚನೆ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಬ್ಯಾಂಕ್ ಸಾಲ ಮರುಪಾವತಿಸದೆ ವಂಚಿಸಿರುವ ಆರೋಪದಡಿ ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ನಗರದ ವಿ.ವಿ.ಪುರಂ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್ ಹಾಗೂ ಅದರ ಸಮೂಹ ಬ್ಯಾಂಕ್​ಗಳಿಂದ ಸಾಲ ಪಡೆದು ಪಾವತಿಸದೇ ವಂಚಿಸುವ ಉದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಎಂಬವರು ದೂರು ದಾಖಲಿಸಿದ್ದಾರೆ.

ದೂರಿನ ವಿವರ: ಬೆಳಗಾವಿ ಜಿಲ್ಲೆ ಗೋಕಾ​​​ಕ್​​ ಫಾಲ್ಸ್​​ ರಸ್ತೆಯಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್​​ ಲಿಮಿಟೆಡ್​​​ ಕಂಪನಿಯ ಅಧ್ಯಕ್ಷ ರಮೇಶ್​ ಜಾರಕಿಹೊಳಿ ಹಾಗೂ ನಿರ್ದೇಶಕ ವಸಂತ್​ ವಿ.ಪಾಟೀಲ್​ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಂಕರ್​ ಎ.ಪಾವಡೆ ಅವರು ಕಾರ್ಖಾನೆ ಸ್ಥಾಪನೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ ನಿಯಮಿತದಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಿದ್ದರು. ಬ್ಯಾಂಕ್​ನ ಷರತ್ತುಗಳನ್ನು ಒಪ್ಪಿ, ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ ಮತ್ತು ಅದರ ಸಮೂಹ ಬ್ಯಾಂಕ್​ಗಳಾದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ತುಮಕೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಉತ್ತರ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತಗಳಲ್ಲಿ 2013ರ ಡಿಸೆಂಬರ್​​ 7ರಿಂದ 2017ರ ಮಾರ್ಚ್​ 31ರವರೆಗೆ ಹಂತ ಹಂತವಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದಾರೆ.

ಆದರೆ, ಸಾಲ ಮರುಪಾವತಿಸದೆ ಒಟ್ಟು 439 ಕೋಟಿ 7 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಸಾಲ ಪಡೆಯುವ ಸಮಯದಲ್ಲಿ ಸೌಭಾಗ್ಯ, ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಯ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರಾಗಿದ್ದ ಆರೋಪಿತರು ನಂತರ, ಬ್ಯಾಂಕ್‌ನ ಗಮನಕ್ಕೆ ತರದೇ ಕಂಪನಿಯಲ್ಲಿ ತಮ್ಮ ಸ್ಥಾನಗಳಿಂದ ಹೊರಬಂದು, ಬೇರೆಯವರನ್ನ ಆ ಸ್ಥಾನಗಳಿಗೆ ನೇಮಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನನ್ವಯ ರಮೇಶ್ ಜಾರಕಿಹೊಳಿ, ವಸಂತ್ ವಿ.ಪಾಟೀಲ್ ಹಾಗೂ ಶಂಕರ್ ಪಾವಡೆ ವಿರುದ್ಧ ವಿ.ವಿ.ಪುರಂ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 420 (ವಂಚನೆ), 406 (ಕ್ರಿಮಿನಲ್ ನಂಬಿಕೆ ದ್ರೋಹ), 34 (ಸಾಮೂಹಿಕ ಕ್ರಿಮಿನಲ್ ಉದ್ದೇಶ) ಆರೋಪದಡಿ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮಹಿಳಾ ಐಪಿಎಸ್ ಅಧಿಕಾರಿ ಕಾರಿಗೆ ಬೈಕ್‌ನಲ್ಲಿ ಗುದ್ದಿ ನಿಂದಿಸಿದ ವ್ಯಕ್ತಿ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.