ETV Bharat / state

ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವುದು ಖಚಿತ.. ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

author img

By

Published : May 31, 2023, 3:23 PM IST

Updated : May 31, 2023, 4:23 PM IST

ಇಂದು ವಿಧಾನಸಭೆಯಲ್ಲಿ ನಡೆದ ಸಚಿವರುಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

five-guarantee-scheme-is-sure-to-be-implemented-cm-siddaramaiah
ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವುದು ಖಚಿತ, ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವು ಭರವಸೆ ನೀಡಿರುವ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವುದು ಖಚಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ ನಡೆದ ಸಚಿವರುಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಎಲ್ಲ ಸಚಿವರು ಮಾಹಿತಿ ನೀಡಿದ್ದಾರೆ. ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದಲೂ ಮಾಹಿತಿ ಸಂಗ್ರಹ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಸಚಿವರು ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಯಾವ ಗಾಸಿಪ್ ಕೂಡ ಮಾಡಬೇಡಿ. ಹಂಗಂತೆ, ಹಿಂಗಂತೆ ಅಂತ ಯಾರೂ ಹೇಳುವುದಕ್ಕೆ ಹೋಗಬೇಡಿ. ತೀರ್ಮಾನ ಮಾಡುವುದು ಸರ್ಕಾರ. ನಿಮಗೆ ಅನಿಸಿದ್ದನ್ನೆಲ್ಲ ಹೇಳೋಕಾಗಲ್ಲ. "ಹೇಗೆ ಮಾಡಬೇಕು, ಏನು ಮಾಡಬೇಕು" ಅಂತ ಸರ್ಕಾರ ಹಾಗೂ ನಾವು ಯೋಚನೆ ಮಾಡುತ್ತೇವೆ. ನೀವು ಬಹಳ ಸ್ಪೀಡ್​ನಲ್ಲಿದ್ದೀರಿ. ನಾವು ನಿಮ್ಮಷ್ಟು ಸ್ಪೀಡ್ ಇಲ್ಲ ಎಂದು ಹೇಳಿದರು.

ಎಲ್ಲ ಅಧಿಕಾರಿಗಳ ಬಳಿ ಏನೇನು ವರ್ಕೌಟ್ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಕೊಂಡಿದ್ದಾರೆ. ಆರ್ಥಿಕ ಹೊರೆ ಎಷ್ಟಾಗುತ್ತೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಆರ್ಥಿಕ ಇಲಾಖೆ ಅಧಿಕಾರಿಗಳು ಕೂಡ ಸಲಹೆ ನೀಡಿದ್ದಾರೆ. ರೀ ವರ್ಕ್ ಮಾಡಿ ಕ್ಯಾಬಿನೆಟ್​​ಗೆ ಸಲ್ಲಿಸಲು ತಿಳಿಸಿದ್ದಾರೆ. ರೀ ವರ್ಕ್ ಮಾಡಿ ಆಲೋಚನೆ ಮಾಡುತ್ತೇವೆ. ಶುಕ್ರವಾರ ನಾವು ಸಂಪುಟ ಸಭೆ ಸೇರಿ ವಿವರವಾಗಿ ಚರ್ಚೆ ಮಾಡಿ ತಿಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದರು.

ಗ್ಯಾರಂಟಿ ಯೋಜನೆಗಳ ಜಾರಿಗೆ ನಾವು ಬದ್ಧರಾಗಿದ್ದೇವೆ. ಅಧಿಕಾರಿಗಳು ತಮ್ಮ ಅಭಿಪ್ರಾಯ, ಸಲಹೆ ತಿಳಿಸಿದ್ದಾರೆ. ಶುಕ್ರವಾರ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ, ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇವೆ. ಯಾರೂ ಕೂಡ ಊಹಾಪೋಹಗಳಿಗೆ ಅವಕಾಶ ನೀಡಬೇಡಿ. ಆ ಬಗ್ಗೆ ಹೆಚ್ಚಿನ ಗಮನ ನೀಡಬೇಡಿ. ನಾವು ನಮ್ಮ ಪ್ರಣಾಳಿಕೆ, ಕೊಟ್ಟಿರುವ ಮಾತಿನ ಬಗ್ಗೆ ಅರಿವಿದೆ. ಈ ಯೋಜನೆಗಳನ್ನು ಕ್ರಮಬದ್ಧವಾಗಿ ಅನುಷ್ಠಾನಕ್ಕೆ ತರುವುದು ನಮ್ಮ ಆದ್ಯತೆ ಎಂದರು.

ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ''ಅವರು ಏನಾದರೂ ಹೇಳಿಕೊಳ್ಳಲಿ. ಸಲಹೆಯಾದರೂ ನೀಡಲಿ, ಒತ್ತಡ ಬೇಕಾದರೂ ಹಾಕಲಿ, ಹೋರಾಟ ಬೇಕಾದರೂ ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡುವವರನ್ನು ತಡೆಯಲು ಸಾಧ್ಯವಿಲ್ಲ. ಬಿಜೆಪಿ ಈ ಹಿಂದೆ ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದ್ದರು. ಆಗ ಮಾತನಾಡಲಿಲ್ಲ. ರೈತರಿಗೆ 10 ಗಂಟೆ ವಿದ್ಯುತ್ ಉಚಿತ ನೀಡುವುದಾಗಿ ಹೇಳಿದ್ದರು. ಆ ಬಗ್ಗೆಯೂ ಮಾತನಾಡಲಿಲ್ಲ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ 600 ಭರವಸೆಗಳ ಪೈಕಿ ಕೇವಲ 50 ಭರವಸೆ ಈಡೇರಿಸಿದ್ದಾರೆ. ಆಗಲೂ ಮಾತನಾಡಲಿಲ್ಲ. ನಾವು ನಮ್ಮ ಯಾಜನೆಗಳನ್ನು ಕ್ರಮಬದ್ಧವಾಗಿ, ನ್ಯಾಯಬದ್ಧವಾಗಿ ಜಾರಿ ಮಾಡಿ ನ್ಯಾಯ ಒದಗಿಸಬೇಕು. ರಾಜ್ಯ ಹಾಗೂ ಮತದಾರ ಉಳಿಯಬೇಕು ಅದು ನಮ್ಮ ಗುರಿ'' ಎಂದು ತಿಳಿಸಿದರು.

ಈ ಯೋಜನೆಗೆ ಕಂಡೀಷನ್ ಇರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ''ಇಲ್ಲಿ ಕಂಡೀಷನ್​ಗಿಂತ ಒಂದು ವ್ಯವಸ್ಥಿತವಾಗಿ ಜಾರಿ ಮಾಡುವುದು ಮುಖ್ಯ. ಉಚಿತ ಬಸ್ ಪ್ರಯಾಣ ವಿಚಾರದಲ್ಲಿ ಯಾರಿಗೆ, ಯಾವ ಬಸ್, ಎಂಬ ವ್ಯವಸ್ಥಿತ ರೂಪದಲ್ಲಿ ಯೋಜನೆ ಜಾರಿ ಆಗಬೇಕಿದೆ. ನಿರುದ್ಯೋಗ ಭತ್ಯೆ ವಿಚಾರದಲ್ಲಿ ಪದವೀಧರ ಮನೆಯಲ್ಲಿದ್ದಾನಾ ಅಥವಾ ಖಾಸಗಿ ಕೆಲಸದಲ್ಲಿ ಇದ್ದಾನಾ? ಖಾಸಗಿಯಲ್ಲಿ ಆತನ ಪರಿಸ್ಥಿತಿ ಏನು? ಎಂಬ ಲೆಕ್ಕಾಚಾರ ಮಾಡಬೇಕು. ನಾವು ವಿರೋಧ ಪಕ್ಷಗಳಾಗಲಿ ಅಥವಾ ಬೇರೆಯವರ ಒತ್ತಡಕ್ಕೆ ಮಣಿಯುವುದಿಲ್ಲ'' ಎಂದು ಡಿಕೆಶಿ ಹೇಳಿದರು.

''ನಿಮ್ಮ ಯೋಜನೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಆರ್ಥಿಕ ಇಲಾಖೆ ಅಧಿಕಾರಿಗಳು ಅವರ ಸಲಹೆ ನೀಡಿದ್ದಾರೆ. ಅನೇಕ ಆಯ್ಕೆ ನೀಡಿದ್ದಾರೆ. ನಾವು ಅದನ್ನು ಅಧ್ಯಯನ ಮಾಡಿ, ಚರ್ಚೆ ಮಾಡುತ್ತೇವೆ'' ಎಂದು ತಿಳಿಸಿದರು.

ಇದಕ್ಕೂ ಮುನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಲ್ಲ ವಿಚಾರಗಳ ಬಗ್ಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿದ್ದಾರೆ. ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಅಂತಿಮವಾಗಿ ತೀರ್ಮಾನ ಮಾಡುತ್ತೇವೆ. ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಐದು ಗ್ಯಾರಂಟಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ. ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದರು.

ಸಚಿವ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆ: ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಹಾಗಾಗಿ ನಾಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಘೋಷಣೆಯಾಗುವುದಿಲ್ಲ. ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ: 4 ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಗತಿ ಹೇಗಿದೆ?

Last Updated : May 31, 2023, 4:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.