ETV Bharat / state

ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ

author img

By

Published : Sep 10, 2022, 11:00 PM IST

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ನಾಳೆ ಹೈದರಾಬಾದ್​ ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.

former-cm-hd-kumarswamy-meets-kcr-tomorrow
ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಭೇಟಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ನಾಳೆ ಹೈದರಾಬಾದ್ ನಲ್ಲಿ ಭೇಟಿಯಾಗಲಿದ್ದಾರೆ. ರಾಜಕೀಯ ವಲಯದಲ್ಲಿ ಈ ಇಬ್ಬರು ನಾಯಕರ ಭೇಟಿಯನ್ನು ರಾಜಕೀಯದ ಮಹತ್ವದ ಬೆಳವಣಿಗೆ ಎಂದು ಬಣ್ಣಿಸಲಾಗಿದೆ.

ಹೈದರಾಬಾದ್ ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಾಳೆ ಮಧ್ಯಾಹ್ನ 1 ಗಂಟೆಯಿಂದ 3 ಗಂಟೆವರೆಗೂ ಉಭಯ ನಾಯಕರ ಭೇಟಿ ನಡೆಯಲಿದೆ. ಇದೇ ವೇಳೆ, ತೆಲಂಗಾಣ ಮುಖ್ಯಮಂತ್ರಿಗಳ ಜತೆ ಕುಮಾರಸ್ವಾಮಿ ಅವರು ಭೋಜನವನ್ನು ಸ್ವೀಕರಿಸಲಿದ್ದಾರೆ. ಇಂದು ರಾತ್ರಿಯೇ ಹೈದರಾಬಾದ್ ತಲುಪಿದ ಹೆಚ್​ಡಿಕೆ ಅವರನ್ನು ತೆಲಂಗಾಣದ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ರಾಜ್ಯದ ಅಧಿಕೃತ ಅತಿಥಿಯ (State Guest) ಗೌರವ ಕೊಟ್ಟು ಬರಮಾಡಿಕೊಂಡರು. ಸಭೆಯಲ್ಲಿ ಇಬ್ಬರೂ ನಾಯಕರು ಕರ್ನಾಟಕ, ತೆಲಂಗಾಣ ರಾಜಕೀಯ ಹಾಗೂ ಅದರಲ್ಲೂ ರಾಷ್ಟ್ರಮಟ್ಟದ ರಾಜಕಾರಣದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಕಳೆದ ಮೇ ತಿಂಗಳಲ್ಲಿ ಕೆ.ಚಂದ್ರಶೇಖರ್ ರಾವ್ ಅವರು ಬೆಂಗಳೂರಿಗೆ ಆಗಮಿಸಿ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದರು.

ಪ್ರಾದೇಶಿಕ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನ : ಅಂದು ಮಾಧ್ಯಮಗಳ ಜತೆ ಮಾತನಾಡಿದ್ದ ಉಭಯ ನಾಯಕರು, ವಿಜಯದಶಮಿ ಹೊತ್ತಿಗೆ ರಾಷ್ಟ್ರ ಮಟ್ಟದಲ್ಲಿ ಪರ್ಯಾಯ ರಾಜಕೀಯ ಶಕ್ತಿಯನ್ನು ಹುಟ್ಟು ಹಾಕುವ ಸುಳಿವು ನೀಡಿದ್ದರು. ಈ ನಿಟ್ಟಿನಲ್ಲಿ ಮತ್ತೆ ಇಬ್ಬರು ನಾಯಕರು ಮಾತುಕತೆ ನಡೆಸಲಿದ್ದಾರೆ. ಮೇಲಾಗಿ, ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಅಧಿಕಾರದಲ್ಲಿದ್ದು, ಕರ್ನಾಟಕದಲ್ಲಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ತರಬೇಕು ಎನ್ನುವುದು ಕೆಸಿಆರ್ ಅವರ ಒತ್ತಾಸೆಯಾಗಿದೆ. ಈ ನಿಟ್ಟಿನಲ್ಲಿ ಹಿರಿಯರಾದ ಅವರನ್ನು ಭೇಟಿ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನೊಂದೆಡೆ ದಕ್ಷಿಣ ಭಾರತದಲ್ಲಿ ಅಧಿಕಾರದಲ್ಲಿರುವ ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳು, ಶೀಘ್ರದಲ್ಲಿಯೇ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಮುಖ್ಯವಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮತ್ತು ಕುಮಾರಸ್ವಾಮಿ ಅವರು ಭೇಟಿ ಮಾಡುವ ಸಾಧ್ಯತೆ ಇದೆ. ಇದೇ ತಿಂಗಳ 5ರಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ಕುಮಾರಸ್ವಾಮಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ : ಶೀಘ್ರದಲ್ಲೇ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ನೇರ ನೇಮಕಾತಿ: ಶಿಕ್ಷಣ ಸಚಿವ ನಾಗೇಶ್ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.