ETV Bharat / state

ರಾಜ್ಯ ಹೆದ್ದಾರಿ ಅಭಿವೃದ್ದಿಗೆ 3500 ಕೋಟಿ ರೂಪಾಯಿ ಬಿಡುಗಡೆ: ಸಚಿವ ಸಿ.ಸಿ.ಪಾಟೀಲ್

author img

By

Published : Nov 17, 2022, 6:21 PM IST

CC Patil, Minister of Public Works
ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್

3500 ಕೋಟಿ ರೂಪಾಯಿಗಳನ್ನು ರಾಜ್ಯ ಹೆದ್ದಾರಿಯ ಅಭಿವೃದ್ದಿಗೆ ಬಿಡುಗಡೆ ಮಾಡಲಾಗಿದ್ದು, 2275 ಕಿಲೋಮೀಟರ್ ರಸ್ತೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರು : ರಾಜ್ಯ ಹೆದ್ದಾರಿಯ ಅಭಿವೃದ್ದಿಗೆ 3500 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಣದಲ್ಲಿ 2,275 ಕಿಲೋಮೀಟರ್ ರಸ್ತೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಯಿಂದಾಗಿ ರಾಜ್ಯಾದ್ಯಂತ ರಸ್ತೆಗಳು ಹಾನಿಗೀಡಾಗಿದ್ದು, ಅವುಗಳನ್ನು ಸುಸ್ಥಿತಿಗೆ ತರಲು ಮತ್ತು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿಗಳ ವಿವೇಚನಾ ನಿಧಿಯಡಿ ಶಾಸಕರಿಗೆ ನೀಡುವ ಹಣದ ಪೈಕಿ 4,750 ಕೋಟಿ ರೂ.ಗಳನ್ನು ಲೋಕೋಪಯೋಗಿ ರಸ್ತೆಗಳ ಅಭಿವೃದ್ದಿಗೆ ನೀಡಲು ನಿರ್ಧರಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳು ತಮ್ಮ ವಿವೇಚನೆಯಡಿ ಶಾಸಕರಿಗೆ ಹದಿನೈದರಿಂದ ಐವತ್ತು ಕೋಟಿ ರೂಪಾಯಿಗಳನ್ನು ನೀಡಲು ತೀರ್ಮಾನಿಸಿದ್ದರು. ಈ ಹಣದಲ್ಲಿ 4750 ಕೋಟಿ ರೂ.ಗಳನ್ನು ರಸ್ತೆ ಅಭಿವೃದ್ಧಿಗೆ ಒದಗಿಸಲು ನಿರ್ಧರಿಸಲಾಗಿದೆ. ತಮ್ಮ ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಸ್ತೆಗಳು ಹದಗೆಟ್ಟ ಕುರಿತು ಶಾಸಕರು ಅನೇಕ ಬಾರಿ ಹೇಳಿದ್ದರು.

ಹೀಗಾಗಿ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಅದೇ ರೀತಿ ರಸ್ತೆಗಳ ಮರು ಡಾಂಬರೀಕರಣಕ್ಕಾಗಿ 440 ಕೋಟಿ ರೂ.ಗಳನ್ನು ಒದಗಿಸಲು ನಿರ್ಧರಿಸಲಾಗಿದ್ದು, ಈ ಹಣದಿಂದ 1008 ಕಿಲೋಮೀಟರುಗಳಷ್ಟು ರಸ್ತೆಗೆ ಡಾಂಬರೀಕರಣ ಕಾರ್ಯ ನಡೆಯಲಿದೆ. ಇನ್ನು ಕಾಲು ಸಂಕಗಳ ನಿರ್ಮಾಣಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಸ್ತೆ ಅಭಿವೃದ್ದಿ, ದುರಸ್ಥಿ ಮತ್ತು ಡಾಂಬರೀಕರಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

350 ಕೋಟಿ ರೂಪಾಯಿ ವೆಚ್ಚದಲ್ಲಿ ನೂರು ಅಂಬೇಡ್ಕರ್ ವಿದ್ಯಾರ್ಥಿ ನಿಲಯ ಮತ್ತು ನೂರು ಕ್ರೈಸ್ಟ್ ವಿದ್ಯಾರ್ಥಿ ನಿಲಯಗಳನ್ನು ಕಟ್ಟಲು ತೀರ್ಮಾನಿಸಲಾಗಿದೆ. ಕರ್ನಾಟಕದಿಂದ ಆಂಧ್ರದ ಶ್ರೀ ಶೈಲಂಗೆ ತೆರಳುವ ಯಾತ್ರಾತ್ರಿಗಳ ಅನುಕೂಲಕ್ಕಾಗಿ 85 ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ಭವನ ನಿರ್ಮಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಮೊದಲ ಹಂತದಲ್ಲಿ 75 ಕೊಠಡಿಗಳು ಸೇರಿದಂತೆ ಹಲವು ಸವಲತ್ತುಗಳಿರುವ ಕಟ್ಟಡವನ್ನು ನಿರ್ಮಿಸಲಾಗುವುದು. ಎರಡನೇ ಹಂತದಲ್ಲಿ 45 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಇನ್ನಷ್ಟು ಅನುಕೂಲ ಕಲ್ಪಿಸಿಕೊಡಲಾಗುವುದು ಎಂದರು.

ವಿದ್ಯಾರ್ಥಿ ನಿಲಯಗಳ ಸ್ಥಾಪನೆ : ಮೈಸೂರು ವಿಶ್ವವಿದ್ಯಾನಿಲಯ ಸೇರಿದಂತೆ ರಾಜ್ಯದ ಐದು ವಿವಿಗಳ ವ್ಯಾಪ್ತಿಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಹೆಸರಿನ ವಿದ್ಯಾರ್ಥಿ ನಿಲಯಗಳು ಮೇಲೇಳಲಿವೆ. ಬೆಳಗಾವಿ, ಕಲಬುರಗಿ, ಧಾರವಾಡ, ಮೈಸೂರು ಮತ್ತು ಮಂಗಳೂರಿನ ವಿಶ್ವವಿದ್ಯಾನಿಲಯಗಳಲ್ಲಿ ಸ್ಥಾಪನೆಯಾಗಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 1000 ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಿಕೊಡಲು ತೀರ್ಮಾನಿಸಲಾಗಿದೆ.

ದೀನ್ ದಯಾಳ್ ಉಪಾಧ್ಯಾಯ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ 412 ಕೋಟಿ ‌ರೂ.ಗಳನ್ನು ಒದಗಿಸಲಾಗುವುದು. ಅದಲ್ಲದೇ ಮೈಸೂರಿನ ಚಾಮುಂಡಿ ಬೆಟ್ಟ ಮಳೆಯಿಂದ ಹಾನಿಗೀಡಾಗಿದ್ದು ಹಲವು ಕಡೆ ಕುಸಿತಗೊಂಡಿದೆ. ಇದರ ದುರಸ್ತಿ ಕಾರ್ಯ ನಡೆದಿದ್ದು ಮಾರ್ಚ್ ತಿಂಗಳ ಒಳಗಾಗಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.‌ ನೈಲಿಂಗ್ ತಂತ್ರಜ್ಞಾನದ ಮೂಲಕ ಚಾಮುಂಡಿ ಬೆಟ್ಟದಲ್ಲಿ ದುರಸ್ತಿ ಕಾರ್ಯ ನಡೆದಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ: ಪಕ್ಷಿಧಾಮಗಳಲ್ಲಿ ರಸ್ತೆ ಅಭಿವೃದ್ಧಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.