ETV Bharat / state

ಸದನದಲ್ಲಿ ಗಂಗಾ ಕಲ್ಯಾಣ ಯೋಜನೆ ಪ್ರತಿಧ್ವನಿ: ಆಡಳಿತ, ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ

author img

By

Published : Sep 14, 2022, 4:26 PM IST

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಸುವುದರ ಜೊತೆಗೆ ಇವುಗಳಿಗೆ ಪಂಪ್‍ಸೆಟ್ ಹಾಗೂ ವಿದ್ಯುತ್ ಸೌಕರ್ಯಗಳನ್ನು ಒದಗಿಸಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಒತ್ತಾಯಿಸಿದರು.

ganga-kalyana-scheme-echoes-in-assembly
ಸದನದಲ್ಲಿ ಗಂಗಾ ಕಲ್ಯಾಣ ಯೋಜನೆ ಪ್ರತಿಧ್ವನಿ: ಆಡಳಿತ, ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆ ಕಾಮಗಾರಿ ವಿಚಾರ ವಿಧಾನಸಭೆಯಲ್ಲಿ ಒಂದು ಗದ್ದಲಕ್ಕೆ ಕಾರಣವಾಗಿ ಪ್ರತಿಪಕ್ಷದ ಸದಸ್ಯರು ಕೆಲಕಾಲ ಧರಣಿ ನಡೆಸಿದರು. ಮುಖ್ಯಮಂತ್ರಿಗಳು ತನಿಖೆ ನಡೆಸುವ ಹಾಗೂ ಸರ್ವಪಕ್ಷ ಸಭೆ ಕರೆಯುವ ಭರವಸೆಯ ಹಿನ್ನೆಲೆಯಲ್ಲಿ ಧರಣಿ ಹಿಂಪಡೆಯಲಾಯಿತು.

ಪರಿಶಿಷ್ಟ ಜಾತಿ - ಪಂಗಡದ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಕೊಳವೆ ಬಾವಿಗಳು ಕಳೆದ ಹಲವು ವರ್ಷಗಳಿಂದ ಪೂರ್ಣಗೊಂಡಿಲ್ಲ. ಗುತ್ತಿಗೆ ನೀತಿಯಿಂದ ಹೀಗಾಗಿದೆ ಎಂದು ಪ್ರತಿಪಕ್ಷದ ಸದಸ್ಯರು ಆರೋಪಿಸಿದರು. ಕೊಳವೆ ಬಾವಿಗಳನ್ನು ಕೊರೆಸುವುದರ ಜೊತೆಗೆ ಇವುಗಳಿಗೆ ಪಂಪ್‍ಸೆಟ್ ಹಾಗೂ ವಿದ್ಯುತ್ ಸೌಕರ್ಯಗಳನ್ನು ಒದಗಿಸಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಒತ್ತಾಯಿಸಿದರು.

ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಯಲ್ಲಿ 130 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ: ಸಿಎಂಗೆ ಸಿದ್ದರಾಮಯ್ಯ ಪತ್ರ

ಶಾಸಕರಾದ ಪ್ರಿಯಾಂಕ್​ ಖರ್ಗೆ, ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಕೆ.ಅನ್ನದಾನಿ, ಪ್ರಸಾದ ಅಬ್ಬಯ್ಯ, ಭೀಮಾನಾಯ್ಕ್ ಮೊದಲಾದವರು ಕೊಳವೆಬಾವಿಗಳ ಗುತ್ತಿಗೆಯಲ್ಲಿ ಅಕ್ರಮವಾಗಿದೆ. ಫಲಾನುಭವಿಗಳಿಗೆ ಇನ್ನೂ ಯೋಜನೆ ಪ್ರಯೋಜನ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ, ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಉಂಟಾಯಿತು. ಆದ್ದರಿಂದ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯೋಜನೆಯ ಎಲ್ಲ ಕೊಳವೆ ಬಾವಿಗಳನ್ನು ಇದೇ ವರ್ಷ ಪೂರ್ಣಗೊಳಿಸುವ ಭರವಸೆ ನೀಡಿದರು. ಅಲ್ಲದೇ, ಗಂಗಾ ಕಲ್ಯಾಣ ಯೋಜನೆಯಲ್ಲಿ ಆಗಿರುವ ಅಕ್ರಮಗಳನ್ನು ತನಿಖೆ ನಡೆಸಲಾಗುವುದು ಹಾಗೂ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸರ್ವಪಕ್ಷದ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಎಲ್ಲ ಕಡೆ ಎಲೆಕ್ಟ್ರಿಕ್ ಬಸ್ : ರಾಜ್ಯಾದ್ಯಂತ 2030ರ ವೇಳೆಗೆ ಎಲೆಕ್ಟ್ರಿಕ್ ಬಸ್‍ಗಳನ್ನು ಓಡಿಸಲು ಸರ್ಕಾರ ಸಂಕಲ್ಪ ಮಾಡಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಇದೇ ವೇಳೆ ಸದನಕ್ಕೆ ತಿಳಿಸಿದರು.

ಕಾಂಗ್ರೆಸ್ ಸದಸ್ಯ ತನ್ವೀರ್ ಸೇಠ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡೀಸಲ್ ಬೆಲೆ ದಿನದಿಂದ ದಿನಕ್ಕೆ ಮುಗಿಲು ಮುಟ್ಟುತ್ತಿದೆ. ಆದ್ದರಿಂದ ನಾವು ಹೊಸತನಕ್ಕೆ ಹೊರಳುವುದು ಇಂದಿನ ಅನಿವಾರ್ಯತೆಯಾಗಿದೆ. ಎಲೆಕ್ಟ್ರಿಕ್ ಬಸ್‍ಗಳೇ ಭವಿಷ್ಯದ ಸಾರಿಗೆ. ಆದ್ದರಿಂದ ಡೀಸೆಲ್​ ಮತ್ತು ಪೆಟ್ರೋಲ್ ವಾಹನಗಳನ್ನು ಬದಲಿಸಲೇಬೇಕಾಗಿದೆ. ಎಂದರು.

ಇದನ್ನೂ ಓದಿ: ತಾಂಡಾಗಳಿಗೆ ಕಂದಾಯ ಗ್ರಾಮ ಮಾನ್ಯತೆ, ಕೋರ್ಟ್​ ನಡೆಸಲು ಎಡಿಸಿ, ಶಿರಸ್ತೇದಾರರಿಗೂ ಅವಕಾಶ: ಸಚಿವ ಅಶೋಕ್

ಸದ್ಯಕ್ಕೆ ಬೆಂಗಳೂರಿನಲ್ಲಿ ಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಕ್ ಬಸ್‍ಗಳು ಕೆಲ ಮಾರ್ಗಗಳಲ್ಲಿ ಓಡುತ್ತಿವೆ. ಇವು ಡೀಸಲ್​ಗಿಂತ ಮಿತವ್ಯಯಕಾರಿ ಎಂಬುದು ಮನವರಿಕೆಯಾಗಿದೆ. ಆದ್ದರಿಂದ ಇವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಎಂಟು ವರ್ಷಗಳಲ್ಲಿ ಡೀಸೆಲ್​ ಬಸ್‍ಗಳು ಸಾರಿಗೆ ಸಂಸ್ಥೆಯಿಂದ ಕಣ್ಮರೆಯಾಗಲಿವೆ ಎಂದು ಹೇಳಿದರು.

ಇದನ್ನೂ ಓದಿ: ಯಾರ‍್ಯಾರನ್ನೋ ಕರ್ಕೊಂಡು ಸರ್ಕಾರ ಮಾಡಿದ್ದೇವೆ, 8 ಶಾಸಕರು ರಾಜೀನಾಮೆ ನೀಡಿದ್ರೆ ಸರ್ಕಾರ ಬಿದ್ದು ಹೋಗುತ್ತೆ: ಸಂಸದ ಸಿದ್ದೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.