ETV Bharat / state

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತು ಸದ್ಯದಲ್ಲೇ ನಿರ್ಧಾರ: ಉನ್ನತ ಶಿಕ್ಷಣ ಸಚಿವ ಸುಧಾಕರ್

author img

By

Published : Jul 13, 2023, 7:19 AM IST

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತು ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭರವಸೆ ನೀಡಿದ್ದು, ಸಹಾಯಕ ಪ್ರಾಧ್ಯಾಪಕರು ಮುಷ್ಕರ ಕೈಬಿಟ್ಟಿದ್ದಾರೆ.

ಉನ್ನತ ಶಿಕ್ಷಣ ಸಚಿವ ಸುಧಾಕರ್ recruitment of assistant professor
ಉನ್ನತ ಶಿಕ್ಷಣ ಸಚಿವ ಸುಧಾಕರ್

ಬೆಂಗಳೂರು: ಎರಡು ವರ್ಷಗಳ ಹಿಂದೆ 2021ರಲ್ಲಿ ನೇಮಕಗೊಂಡು ಹುದ್ದೆ ನಿರೀಕ್ಷೆಯಲ್ಲಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತಂತೆ ನ್ಯಾಯಾಲಯದ ತೀರ್ಪು ಆಧರಿಸಿ ರಾಜ್ಯ ಸರ್ಕಾರ ತೀರ್ಮಾನಕ್ಕೆ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಹೇಳಿದರು. ಇಲ್ಲಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ನಿರೀಕ್ಷೆಯಲ್ಲಿರುವವರನ್ನು ಬುಧವಾರ ಸಚಿವರು ಭೇಟಿಯಾಗಿ, ರಾಜ್ಯ ಸರ್ಕಾರ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಮುಕ್ತವಾಗಿದೆ ಎಂದರು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಫಲಿತಾಂಶದ ನಂತರ ಉಂಟಾಗಿರುವ ಪ್ರಶ್ನೆ ಪತ್ರಿಕೆ ಬಯಲು ಪ್ರಕರಣ ಒಂದು ವಿಷಯಕ್ಕೆ ಮಾತ್ರ ಸೀಮಿತವಾಗಿದೆ. ಈಗಾಗಲೇ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಈಗಾಗಲೇ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ತನಿಖೆ ಮುಗಿದಿದೆಯೇ, ಇಲ್ಲವೇ ಎಂಬುದರ ಬಗ್ಗೆ ಅಂತಿಮ ವರದಿ ನೀಡಿಲ್ಲ, ಹಾಗಾಗಿ ವಿಳಂಬವಾಗಿದೆ. ಈ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕಲ್ಯಾಣ ಕರ್ನಾಟಕದ 371ಜೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಪರೀಕ್ಷೆ ಸಮಯದಲ್ಲಿ ಒಂದು ಮಾರ್ಗದರ್ಶನ ನೀಡಿ, ನಂತರ ಮತ್ತೊಂದು ಆದೇಶ ಹೊರಡಿಸಿದ್ದು ಕೂಡ ಈಗ ಗೊಂದಲಕ್ಕೆ ಕಾರಣವಾಗಿದೆ. ಎರಡು ವರ್ಷ ಕಾದಿದ್ದೀರಿ, ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಸಮಸ್ಯೆ ಪರಿಹಾರ ಸಿಗಲಿದೆ ಎಂದು ಭರವಸೆ ನೀಡಿದರು.

ಸಿಸಿಬಿ ವರದಿ ಹಾಗೂ 371ಜೆ ಪ್ರಕರಣಗಳು ಮುಖ್ಯ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಸರ್ಕಾರ ನಿರೀಕ್ಷಿಸುತ್ತಿದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ನೇಮಕಾತಿಗೊಂಡಿರುವ 1,242 ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ನ್ಯಾಯ ದೊರಕಿಸಿಕೊಡಲು ಬದ್ಧ. ಈ ಬಗ್ಗೆ ಕಲ್ಯಾಣ ಕರ್ನಾಟಕದ ಸಚಿವರ ಜೊತೆ ಕೂಡ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಮುಕ್ಕ ಮನಸ್ಸಿನಿಂದ ಇದ್ದಾರೆ. ಹಾಗಾಗಿ ನಿಮ್ಮ ಸಮಸ್ಯೆ ಕೆಲವೇ ದಿನಗಳಲ್ಲಿ ಬಗೆಹರಿಯಲಿದೆ ಎಂದು ಮುಷ್ಕರನಿರತ ಸಹ ಪ್ರಾಧ್ಯಾಪಕ ನೇಮಕಾತಿ ನಿರೀಕ್ಷೆಯಲ್ಲಿರುವವರಿಗೆ ಆಶ್ವಾಸನೆ ಕೊಟ್ಟರು.

ಅತ್ಯಂತ ಕಠಿಣ ಪರೀಕ್ಷೆಯನ್ನು ಎದುರಿಸಿ ಆಯ್ಕೆಯಾಗಿರುವ ನಿಮ್ಮೆಲ್ಲರ ನೋವಿಗೆ, ಆತಂಕಕ್ಕೆ ನನ್ನ ಸಹಮತವಿದೆ. ಆದರೆ, ವ್ಯವಸ್ಥೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಷ್ಟೇ ಮುಖ್ಯ. ದುಡುಕಿನ ನಿರ್ಧಾರ ಕೈಗೊಂಡರೆ ಮತ್ತೆ ನಿಮಗೆ ತೊಂದರೆ ಆಗಬಾರದೆಂಬ ನಿಲುವಿನಿಂದ ಸಿಸಿಬಿ ಅಂತಿಮ ವರದಿ ಹಾಗೂ ನ್ಯಾಯಾಲಯದ ತೀರ್ಪನ್ನು ಸರ್ಕಾರ ನಿರೀಕ್ಷಿಸುತ್ತಿದೆ. ಹಾಗಾಗಿ ಮುಷ್ಕರಕ್ಕಾಗಿ ನೂರಾರು ಮೈಲಿ ದೂರದ ಊರುಗಳಿಂದ ಬಂದಿರುವ ನೀವುಗಳು ಮುಷ್ಕರ ಕೈಬಿಟ್ಟು ನಮ್ಮೊಡನೆ ಸಹಕರಿಸಿ ಎಂದು ಮನವಿ ಮಾಡಿದರು.

ಮುಷ್ಕರ ಅಂತ್ಯ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತಂತೆ ಉನ್ನತ ಶಿಕ್ಷಣ ಸಚಿವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಲಾಯಿತು.

ಇದನ್ನೂ ಓದಿ: ಕೋರ್ಟ್​ನಿಂದ ಆದೇಶ ಬರುತ್ತಿದ್ದಂತೆ 13 ಸಾವಿರ ಪದವೀಧರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ ಭರವಸೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.