ETV Bharat / state

ರಾಜ್ಯದ ಶಾಲೆಗಳಲ್ಲಿ ಮೂಲಸೌಕರ್ಯ ಸರಿಪಡಿಸದ ಕುರಿತು ಹೈಕೋರ್ಟ್ ಅಸಮಾಧಾನ

author img

By ETV Bharat Karnataka Team

Published : Dec 12, 2023, 7:39 AM IST

ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದ್ದ ಹೈಕೋರ್ಟ್​ ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು.

ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ
ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ

ಬೆಂಗಳೂರು: ಶೌಚಾಲಯ ಮತ್ತು ಕುಡಿಯುವ ನೀರು ಲಭ್ಯತೆ ಕೊರತೆ ಎದುರಿಸುತ್ತಿದ್ದ ರಾಜ್ಯದ 551 ಶಾಲೆಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಅವುಗಳಲ್ಲಿ 482 ಶಾಲೆಗಳ ಸ್ಥಿತಿ ತೃಪ್ತಿಕರವಾಗಿದೆ ಮತ್ತು 69 ಶಾಲೆಗಳ ಸ್ಥಿತಿ ತೃಪ್ತಿಕರವಾಗಿಲ್ಲ ಎಂಬುದು ಸಮೀಕ್ಷೆಯಿಂದ ಕಂಡುಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೈಕೋರ್ಟ್‌ಗೆ ಸೋಮವಾರ ತಿಳಿಸಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು, ನ್ಯಾಯಾಲಯದ ನಿರ್ದೇಶನದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಪ್ರತಿನಿಧಿಗಳ ಸಮಕ್ಷಮದಲ್ಲಿ ಶಾಲೆಗಳ ಸಮೀಕ್ಷೆ ನಡೆಸಲಾಗಿದ್ದು, ಅದರ ವರದಿಯನ್ನು ಶಿಕ್ಷಣ ಇಲಾಖೆ ಆಯುಕ್ತರಾದ ಬಿ ಬಿ ಕಾವೇರಿ ಅವರ ಪರವಾಗಿ ಸಲ್ಲಿಸುತ್ತಿದ್ದೇನೆ. ಎಲ್ಲೆಲ್ಲಿ ಅತೃಪ್ತಿ ವ್ಯಕ್ತಪಡಿಸಲಾಗಿದೆಯೋ ಅಂತಹ ಕಡೆ ಮೂಲಸೌಕರ್ಯ ವೃದ್ಧಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸಲು ನೇಮಿಸಿರುವ ವಕೀಲರು) ಹಿರಿಯ ವಕೀಲರಾದ ನಿ. ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ, ಈಗಷ್ಟೇ ವರದಿ ಕೈ ಸೇರಿದೆ. ಅದನ್ನು ಪರಿಶೀಲಿಸಿ ತಮ್ಮ ಅಭಿಪ್ರಾಯ ಮಂಡಿಸಲಾಗುವುದು ಎಂದು ಪೀಠಕ್ಕೆ ವಿವರಿಸಿದರು. ಅಲ್ಲದೆ, ಕಳೆದ ವಿಚಾರಣೆ ವೇಳೆ ನ್ಯಾಯಾಲಯ ಬಿಬಿಎಂಪಿ ವ್ಯಾಪ್ತಿಯಲ್ಲೂ ಶಾಲೆಗಳಲ್ಲಿನ ಮೂಲಸೌಕರ್ಯದ ಬಗ್ಗೆ ಸಮೀಕ್ಷೆ ನಡೆಸಲು ಆದೇಶಿಸಲಾಗಿತ್ತು. ಆದರೆ ಈವರೆಗೆ ಪಾಲಿಕೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಈ ವೇಳೆ ನ್ಯಾಯಪೀಠ, ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಗಳು ದುಸ್ಥಿತಿಯಲ್ಲಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಬಿಬಿಎಂಪಿಗೆ ಸೂಚನೆ ನೀಡಲು ತಿಳಿಸಿತು. ಸಿವಿಕ್ ಸರ್ಕಾರೇತರ ಸಂಸ್ಥೆ (ಎನ್​ಜಿಒ) ಪರ ಹಾಜರಾಗಿದ್ದ ಸಂಸ್ಥೆಯ ಮುಖ್ಯಸ್ಥೆ ಕಾತ್ಯಾಯಿನಿ ಚಾಮರಾಜ್, ತಮ್ಮ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಆರ್‌ಟಿಇ ಕಾಯಿದೆ ಜಾರಿಯ ಬಗ್ಗೆ ಸಮೀಕ್ಷೆ ನಡೆಸಲಾಗಿದ್ದು, ಅದರ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದೇವೆ ಎಂದರು.

ಜತೆಗೆ, ಶಿಕ್ಷಣ ಇಲಾಖೆ ಕೇವಲ ಎರಡು ಸಾವಿರ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆಂದು ಹೇಳುತ್ತಿದೆ. ಆದರೆ ವಾಸ್ತವದಲ್ಲಿ 15 ಸಾವಿರಕ್ಕೂ ಅಧಿಕ ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಎಂದು ವಿವರಿಸಿದರು. ನ್ಯಾಯಾಲಯ ಅವರಿಗೆ ವರದಿಯನ್ನು ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಜೀತದಾಳು ಪುನರ್ವಸತಿ ಯೋಜನೆಯ ಎರಡು ಷರತ್ತು ರದ್ದು ಕೋರಿ ಅರ್ಜಿ: ಮಾನವ ಹಕ್ಕುಗಳ ಆಯೋಗಕ್ಕೆ ತುರ್ತು ನೋಟಿಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.