ETV Bharat / state

ಸಂತ್ರಸ್ತೆಗೆ ಆರೋಪಿಯೇ ಜೀವನಾಧಾರ: ವ್ಯಕ್ತಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

author img

By ETV Bharat Karnataka Team

Published : Nov 28, 2023, 10:20 PM IST

ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬಾಲ್ಯವಿವಾಹ ಕಾಯಿದೆಯಡಿ ತನಿಖೆಗೆ ಗುರಿಯಾಗಿದ್ದ ವ್ಯಕ್ತಿಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್​ ರದ್ದು ಪಡಿಸಿದೆ.

ಬೆಂಗಳೂರು: ಬಾಲ್ಯವಿವಾಹ ಕಾಯಿದೆಯಡಿ ತನಿಖೆಗೆ ಗುರಿಯಾಗಿದ್ದ ವ್ಯಕ್ತಿಯೇ(ಪತಿ) ಸಂತ್ರಸ್ಥೆಯ(ಪತ್ನಿ) ಮತ್ತು ಆಕೆಯ ಮಗುವಿನ ಜೀವನಾಧಾರವಾಗಿರುವ ಅಂಶವನ್ನು ಪರಿಗಣಿಸಿರುವ ಹೈಕೋರ್ಟ್, ಆರೋಪಿ ವಿರುದ್ಧದ ತನಿಖೆಯನ್ನು ರದ್ದುಪಡಿಸಿ ಆದೇಶಿಸಿದೆ. ಬಾಲ್ಯವಿವಾಹ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್​ ಚಂದನಗೌಡರ್​ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಸಂತ್ರಸ್ತೆಯ ಆಧಾರ್​ ಕಾರ್ಡ್​​ ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರು ಸಂತ್ರಸ್ತೆಯನ್ನು ವಿವಾಹವಾದ ಸಂದರ್ಭದಲ್ಲಿ 17 ವರ್ಷ 8 ತಿಂಗಳಾಗಿತ್ತು. ಪ್ರಸ್ತುತ 22 ವರ್ಷ ವಯಸ್ಸಾಗಿದೆ. ಜತೆಗೆ, ಅರ್ಜಿದಾರರನ್ನೇ ಆಕೆ ಮತ್ತು ಆಕೆಯ ಮಗು ಜೀವನಾಧಾರವನ್ನಾಗಿಸಿಕೊಂಡಿದ್ದಾರೆ ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಸಂತ್ರಸ್ತೆ(ಪತ್ನಿ)ಯ ಪ್ರಮಾಣಪತ್ರ ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರನ್ನು ಶಿಕ್ಷೆಗೆ ಗುರಿಪಡಿಸಿದಲ್ಲಿ ಸಂತ್ರಸ್ತೆ ಮತ್ತು ಆಕೆಯ ಮಗುವನ್ನು ಸಂಕಷ್ಟಕ್ಕೆ ದೂಡಿದಂತಾಗಲಿದೆ. ಇದು ಕಾನೂನಿನ ದುರ್ಬಳಕೆಯಾಗಲಿದೆ. ಆದ ಕಾರಣ ಅರ್ಜಿದಾರರ ವಿರುದ್ಧದ ವಿಚಾರಣೆ ರದ್ದುಪಡಿಸುತ್ತಿರುವುದಾಗಿ ಪೀಠ ತಿಳಿಸಿದೆ.

ವಿಚಾರಣೆ ವೇಳೆ ಹಾಜರಾಗಿದ್ದ ಪತ್ನಿ, ಪ್ರಕರಣದ ಆರೋಪಿಯೇ ತಮ್ಮ ಕುಟುಂಬಕ್ಕೆ ಜೀವನಾಧಾರವಾಗಿದ್ದಾರೆ. ಅರ್ಜಿದಾರರ ವಿರುದ್ಧ ಕ್ರಿಮಿನಲ್​ ಪ್ರಕರಣ ಮುಂದುವರೆಸಿದಲ್ಲಿ ಬಂಧನಕ್ಕೊಳಬೇಕಾಗುತ್ತದೆ. ಕಾನೂನುನ್ನು ಜಾರಿ ಮಾಡುವುದಕ್ಕಿಂತ ಹೆಚ್ಚಾಗಿ ಪತ್ನಿ ಮತ್ತು ಮಗು ದುಃಖಕ್ಕೆ ತುತ್ತಾಗಬೇಕಾಗುತ್ತದೆ ಎಂದು ಮನವಿ ಮಾಡಿದರು. ಸಂತ್ರಸ್ತೆ ಆರೋಪಿಯ ಅಕ್ಕನ ಮಗಳಾಗಿದ್ದು, ಸಂಪೂರ್ಣವಾಗಿ ಗೊತ್ತಿರುವವರಾಗಿದ್ದು, ಅಪ್ರಾಪ್ತೆಯನ್ನು ವಿವಾಹವಾಗಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು.

ಹಿಂದಿನ ಪ್ರಕರಣಗಳು

ಅತ್ಯಾಚಾರ ಸಂತ್ರಸ್ತೆ ಮದುವೆಯಾಗುವುದಾಗಿ ಭರವಸೆ ನೀಡಿದ ಆರೋಪಿ ಪ್ರಕರಣ ರದ್ದು :- ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿದ್ದ ಆರೋಪಿ ಸಂತ್ರಸ್ತೆಯನ್ನೇ ಮದುವೆಯಾಗುವುದಾಗಿ ಭರವಸೆ ನೀಡಿದ ಮತ್ತು ಮದುವೆಗೆ ಸಂತ್ರಸ್ತೆ ಒಪ್ಪಿದ ಕಾರಣ ವ್ಯಕ್ತಿಯೊಬ್ಬನ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕೆಲ ದಿನಗಳ ಹಿಂದೆ ಹೈಕೋರ್ಟ್‌ ರದ್ದುಪಡಿಸಿತ್ತು. ತನ್ನ ವಿರುದ್ದದ ಪ್ರಕರಣ ರದ್ದುಪಡಿಸುವಂತೆ ಕೋರಿ ಚಿಕ್ಕಬಳ್ಳಾಪುರದ ಆರೋಪಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಪೀಠ ಈ ಆದೇಶ ಮಾಡಿತ್ತು.

ಅತ್ಯಾಚಾರ ಘಟನೆ ನಡೆದಾಗ ಸಂತ್ರಸ್ತೆ ಅಪ್ರಾಪ್ತೆಯಾಗಿದ್ದರು. ಸಂತ್ರಸ್ತೆ ಲೈಂಗಿಕ ಸಂಭೋಗಕ್ಕೆ ಗುರಿಯಾಗಿದ್ದಾಳೆ ಎಂಬುದಾಗಿ ವೈದ್ಯಕೀಯ ದಾಖಲೆಗಳು ಬಹಿರಂಗಪಡಿಸಿದ್ದವು. ವಿಚಾರಣೆಗೆ ಹಾಜರಾಗಿದ್ದ ಸಂತ್ರಸ್ತೆ, ಆರೋಪಿಯನ್ನು ಮದುವೆಯಾಗುವುದಾಗಿ ದೃಢೀಕರಿಸಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಮತ್ತೊಂದೆಡೆ ಆರೋಪಿ ಸಹ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿತ್ತು.

ಇದನ್ನೂ ಓದಿ: 15 ವರ್ಷ ಹಿಂದಿನ ಅಪಘಾತ ಪ್ರಕರಣ: ಬೈಕ್ ಸವಾರನ ತಪ್ಪು ಸಾಬೀತು, ಪರಿಹಾರ ₹85 ಸಾವಿರಕ್ಕೆ ಇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.