ETV Bharat / state

ಕೇಂದ್ರ ಬಿಜೆಪಿ ಸರ್ಕಾರವು 'ಶಿಂಧೆ ಸೂತ್ರದ ಗೊಂಬೆ'ಯಾಗಿ ಕರ್ನಾಟಕವನ್ನು ಬಲಿ ಕೊಡಲು ಹೊರಟಿದೆಯಾ? : ಹೆಚ್​ ಡಿಕೆ ಕಿಡಿ

author img

By

Published : Apr 5, 2023, 5:17 PM IST

ಗಡಿಯಲ್ಲಿ ಆರೋಗ್ಯ ವಿಮೆ ಜಾರಿ ಕುರಿತು ಹೆಚ್​ ಡಿ ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡಿದ್ದಾರೆ.

Former Chief Minister HD Kumaraswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಮಹಾರಾಷ್ಟ್ರದಲ್ಲಿರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಪದೇ ಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ ಅವರು, ಕೇಂದ್ರ ಬಿಜೆಪಿ ಸರ್ಕಾರ ಇದೆಲ್ಲಾ ನೋಡಿಕೊಂಡು ಮೌನವಾಗಿದೆ. ಮುಂದಿನ ದಿನಗಳಲ್ಲಿ ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಇದೇ ಕಾರಣವಾಗಬಹುದು ಎಂದಿದ್ದಾರೆ.

ಮಹಾರಾಷ್ಟ್ರ ಸರ್ಕಾರವೂ ಒಂದಲ್ಲ ಎರಡಲ್ಲ, ಪ್ರತಿಯೊಂದು ವಿಷಯದಲ್ಲೂ ಕರ್ನಾಟಕವನ್ನು ಕೆರಳಿಸುತ್ತಿದ್ದು, ಇದೀಗ ರಾಜ್ಯದ ಗಡಿ ಒಳಗಿರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ಮಾಡಿದ ಆ ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ನೇರ, ಧೂರ್ತ ಪ್ರಯತ್ನ ಎಂದು ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

  • ಭಾರತ ಸ್ವತಂತ್ರ್ಯಗೊಂಡಾಗ ಎಲ್ಲರಿಗಿಂತ ಮೊದಲೇ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವರು ನಾವು. ನಮ್ಮ ಉದಾರತೆಯೇ ನಮಗೆ ಇಂದು ಮುಳುವಾಗಿದೆಯಾ? ನೆಲ, ಜಲ, ಭಾಷೆ, ಅನುದಾನ ಸೇರಿ ಪ್ರತಿ ವಿಷಯದಲ್ಲೂ ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ!! ಇನ್ನೆಷ್ಟು ದಿನ ಈ ಅನ್ಯಾಯ? 5/5

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2023 " class="align-text-top noRightClick twitterSection" data=" ">

ಕೇಂದ್ರ ಬಿಜೆಪಿ ಸರ್ಕಾರ ಶಿಂಧೆ ಸೂತ್ರದ ಗೊಂಬೆ- ಹೆಚ್​ಡಿಕೆ : ಮಹಾರಾಷ್ಟ್ರವು ಒಕ್ಕೂಟ ವ್ಯವಸ್ಥೆಯ ಎಲ್ಲಾ ಎಲ್ಲೆಗಳನ್ನು ಮೀರಿ ಅಹಂಕಾರದಿಂದ ವರ್ತಿಸುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಏಕಾನಾಥ್​ ಶಿಂಧೆ ಸೂತ್ರದ ಗೊಂಬೆಯಾಗಿ ಇಂತಹ ರಾಜಕಾರಣಕ್ಕೆ ಕರ್ನಾಟಕವನ್ನು ಬಲಿ ಕೊಡಲು ಹೊರಟಿದೆಯಾ? ಎನ್ನುವ ಅನುಮಾನ ನನ್ನದು. ಇಲ್ಲವಾದರೆ, ಮಹಾರಾಷ್ಟ್ರ ಈ ಪರಿಯ ಉದ್ಧಟತನ ತೋರುತ್ತಿದ್ದರೂ ಮೋದಿ ಸರ್ಕಾರದ ಮೌನವೇಕೆ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ- ಕುಮಾರಸ್ವಾಮಿ : ಕರ್ನಾಟಕದಲ್ಲಿ ಇಡೀ ಭಾರತವೇ ಅಡಗಿದ್ದು, ಕಾಶ್ಮೀರದಿಂದ ಕನ್ಯಾಕಮಾರಿಯವರೆಗೆ, ಗುಜರಾತಿನಿಂದ ಒಡಿಶಾವರೆಗೆ ಎಲ್ಲ ಕಡೆಯಿಂದಲೂ ಅನ್ನ ಅರಸಿಕೊಂಡು ಬಂದವರಿಗೆ ಆಶ್ರಯ ನೀಡಿದೆ. ಆ ಅನ್ನಕ್ಕೆ ಮಣ್ಣು ಸುರಿಯುವ ಹೀನ ಕೆಲಸವನ್ನು ಮಹಾರಾಷ್ಟ್ರ ಎಗ್ಗಿಲ್ಲದೆ ಮಾಡುತ್ತಿದೆ. ಕನ್ನಡಿಗರು ಸುಮ್ಮನಿರುವ ಕಾಲ ಮುಗಿದಿದೆ. ಭಾರತ ಸ್ವತಂತ್ರ್ಯಗೊಂಡಾಗ ಎಲ್ಲರಿಗಿಂತ ಮೊದಲೇ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವರು ನಾವು. ನಮ್ಮ ಉದಾರತೆಯೇ ನಮಗೆ ಇಂದು ಮುಳುವಾಗಿದೆಯಾ? ನೆಲ, ಜಲ, ಭಾಷೆ, ಅನುದಾನ ಸೇರಿ ಪ್ರತಿ ವಿಷಯದಲ್ಲೂ ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ! ಇನ್ನೆಷ್ಟು ದಿನ ಈ ಅನ್ಯಾಯ? ಎಂದು ಸರಣಿ ಟ್ವೀಟ್​ ಮಾಡುವ ಮೂಲಕ ಹೆಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ಸಿದ್ದರಾಮಯ್ಯ ಖಂಡನೆ​ : ಮತ್ತೊಂದೆಡೆ ಪ್ರತಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ಕೂಡ ಮಹಾರಾಷ್ಟ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿ ಟ್ವೀಟ್​ ಮಾಡಿದ್ದಾರೆ. ರಾಜ್ಯದ ಗಡಿಯೊಳಗಿರುವ ಗ್ರಾಮಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಿರದು ಎಂದು ಅವರು ಸರಣಿ ಟ್ವೀಟ್​ ಮಾಡುವ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಕನ್ನಡಿಗರಿಗೂ ಕರ್ನಾಟಕದಿಂದ ವಿಮೆ : ಸಿಎಂ ಬೊಮ್ಮಾಯಿ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.