ETV Bharat / state

ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಹಾನಿ: ಎಸ್​​​ಸಿಡಿಸಿಯನ್ನು ಪ್ರತಿವಾದಿಯನ್ನಾಗಿಸಲು ಹೈಕೋರ್ಟ್ ಸೂಚನೆ

author img

By ETV Bharat Karnataka Team

Published : Nov 8, 2023, 9:43 PM IST

ಗಣಿಗಾರಿಕೆಯಿಂದ ಕೆಆರ್​ಎಸ್​ ಜಲಾಶಯಕ್ಕೆ ಹಾನಿ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು.

ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಹಾನಿ ಅರ್ಜಿ ವಿಚಾರಣೆ
ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಹಾನಿ ಅರ್ಜಿ ವಿಚಾರಣೆ

ಬೆಂಗಳೂರು: ಗಣಿಕಾರಿಕೆಯಿಂದ ಕೃಷ್ಣರಾಜ ಸಾಗರ (ಕೆಆರ್​ಎಸ್​) ಜಲಾಶಯಕ್ಕೆ ಹಾನಿ ಕುರಿತಾದ ಪ್ರಕರಣದಲ್ಲಿ ರಾಜ್ಯ ಜಲಾಶಯ ಸುರಕ್ಷತಾ ಸಮಿತಿಯನ್ನು (ಎಸ್ಸಿಡಿಸಿ) ಪ್ರತಿವಾದಿಯನ್ನಾಗಿ ಮಾಡಲು ಹೈಕೋರ್ಟ್ ಅರ್ಜಿದಾರರಿಗೆ ಸೂಚನೆ ನೀಡಿದೆ.

ಗಣಿಗಾರಿಕೆ ಪರವಾನಗಿ ನೀಡುವಾಗ ಭೂ ಪರಿವರ್ತನೆಗೆ ಜಿಲ್ಲಾಧಿಕಾರಿ ಷರತ್ತು ವಿಧಿಸಿರುವುದನ್ನು ಪ್ರಶ್ನಿಸಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಿ.ಜಿ. ಕುಮಾರ್ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಆದಿತ್ಯ ಸೋಂಧಿ ಅವರ ಸಲಹೆ ಆಧರಿಸಿ ಎಸ್ಸಿಡಿಸಿಯನ್ನು ಪಕ್ಷಕಾರರನ್ನಾಗಿಸಬೇಕು. ಜಲಾಶಯ ಸುರಕ್ಷತಾ ಕಾಯಿದೆ 2021ರ ಪ್ರಕಾರ ಎಸ್ಸಿಡಿಸಿಯು ವರ್ಷದಲ್ಲಿ ಎರಡು ಸಭೆ ನಡೆಸಬೇಕು. ಇದರಲ್ಲಿ ಒಂದು ಸಭೆಯನ್ನು ಮುಂಗಾರು ಆರಂಭವಾಗುವುದಕ್ಕೂ ಮುನ್ನ ನಡೆಸಬೇಕು. ಸಮಿತಿಯ ವರದಿಯನ್ನೂ ಸಾರ್ವಜನಿಕಗೊಳಿಸಲ್ಲ ಎಂದು ವರದಿಯಲ್ಲಿ ವಿವರಿಸಿದ್ದಾರೆ.

ಅಮಿಕಸ್ ಕ್ಯೂರಿ ಪ್ರಾಥಮಿಕ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ರಾಷ್ಟ್ರೀಯ ಜಲಾಶಯ ಸುರಕ್ಷತಾ ಪ್ರಾಧಿಕಾರ ಮತ್ತು ಎಸ್ಸಿಡಿಸಿ ಕಾರ್ಯ ಚಟುವಟಿಕೆ ಉಲ್ಲೇಖಿಸಿದ್ದಾರೆ. ಹೀಗಾಗಿ, ಅವುಗಳನ್ನು ಪಕ್ಷಕಾರರನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿಗೆ ತಿದ್ದುಪಡಿ ಮಾಡಿ ಸಮಿತಿಯನ್ನು ಪ್ರತಿವಾದಿಯನ್ನಾಗಿ ಮಾಡಬೇಕು ಎಂದು ಪೀಠ ತಿಳಿಸಿದೆ.

ಸಭೆ ನಡೆಸಿರುವುದಕ್ಕೆ ಸಂಬಂಧಿಸಿದ ದಾಖಲೆ ಮತ್ತು ಅದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆಯೇ ಮತ್ತು ಅದರ ಸಂಬಂಧ ಯಾವುದಾದರೂ ಕ್ರಮಕೈಗೊಳ್ಳಲಾಗಿದೆಯೇ ಎಂಬುದರ ಮಾಹಿತಿ ನೀಡಬೇಕು ಎಂದು ಎಸ್ಸಿಡಿಎಸ್​ಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಜತೆಗೆ, 2018ರಲ್ಲಿ ಸ್ಥಾಪಿಸಲ್ಪಟ್ಟ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು (ಕೆಎಸ್ಎನ್​ಡಿಎಂಸಿ) ಜಿಲ್ಲಾಧಿಕಾರಿಗೆ ಯಾವುದಾದರೂ ವರದಿ ಸಲ್ಲಿಸಿದೆಯೇ, ಒಂದೊಮ್ಮೆ ವರದಿ ನೀಡಿದ್ದರೆ ಅದನ್ನು ಏಕೆ ಸಾರ್ವಜನಿಕಗೊಳಿಸಲಾಗಿಲ್ಲ. ಇದು ಸಾರ್ವಜನಿಕಗೊಡಿದ್ದರೆ ಯಾವ ರೀತಿಯಲ್ಲಿ ಅದನ್ನು ಜನರಿಗೆ ಲಭ್ಯವಾಗಿಸಲಾಗಿದೆ. ಸುರಕ್ಷತೆ ನಿರ್ವಹಣೆ, ಭದ್ರತೆ ಅಥವಾ ಗೌಪ್ಯತೆ ಬಗ್ಗೆ ಏನಾದರೂ ಸಮಸ್ಯೆಗಳಿದ್ದರೆ ಅದನ್ನೂ ಎಸ್ಸಿಡಿಎಸ್ ವಿವರಿಸಬೇಕು ಎಂದು ತಿಳಿಸಿ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ ಏನು? : ಪಾಂಡವಪುರ ತಾಲ್ಲೂಕಿನ ಹೊಂಗನಹಳ್ಳಿ ವ್ಯಾಪ್ತಿಯಲ್ಲಿನ 120 ಎಕರೆ ಭೂ ಪರಿವರ್ತನೆಗೆ ಜಿಲ್ಲಾಧಿಕಾರಿ ಷರತ್ತು ವಿಧಿಸಿರುವುದನ್ನು ಮಂಡ್ಯದ ಚಿನಕುರಳಿ ಗ್ರಾಮದ ಸಿ ಜಿ ಕುಮಾರ್ ಅವರು ಪ್ರಶ್ನಿಸಿದ್ದರು. ಕಾವೇರಿ ನೀರಾವರಿ ನಿಗಮ ಲಿಮಿಟೆಡ್ ಪರೀಕ್ಷಾರ್ಥ ಸ್ಫೋಟ ನಡೆಸಿದ ಬಳಿಕ ಭೂ ಪರಿವರ್ತನಾ ಆದೇಶ ಚಾಲ್ತಿಗೆ ಬರಲಿದೆ ಎಂದು 2023ರ ಮೇ 15ರಂದು ಗಣಿ ಪರವಾನಗಿ ನೀಡುವಾಗ ಜಿಲ್ಲಾಧಿಕಾರಿ ಷರತ್ತು ವಿಧಿಸಿದ್ದರು. ಇದನ್ನು ಪ್ರಶ್ನಿಸಿ ಸಿ ಜಿ ಕುಮಾರ್​ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಅತ್ಯಾಚಾರ ಆರೋಪ : ಮುರುಘಾ ಶರಣರಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.