ETV Bharat / state

ಧಾರವಾಡ ಭೇಟಿಗೆ ಅವಕಾಶ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

author img

By

Published : Jul 6, 2023, 8:10 PM IST

MLA Vinay Kulkarni
MLA Vinay Kulkarni

ಧಾರವಾಡ ಭೇಟಿಗೆ ಅವಕಾಶ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಜನರ ಸಮಸ್ಯೆಗಳನ್ನು ಆಲಿಸುವುದು ಮತ್ತು ಕ್ಷೆತ್ರದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಗಮನ ಹರಿಸಲು ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ನೀಡುವ ಸಂದರ್ಭದಲ್ಲಿ ಧಾರವಾಡ ಭೇಟಿಗೆ ನಿರ್ಬಂಧ ವಿಧಿಸಿರುವ ಷರತ್ತನ್ನು ಸಡಿಲ ಮಾಡುವಂತೆ ಕೋರಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತ್ ಕುಮಾರ್ ಮನವಿಯನ್ನು ತಿರಸ್ಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ವಿನಯ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಮೂರನೇ ಷರತ್ತನ್ನು ಪ್ರಾಸಿಕ್ಯೂಷನ್ ಅದರಲ್ಲೂ ಸಾಕ್ಷಿಗಳ ಹಿತಾಸಕ್ತಿ ಕಾಯಲು ಹಾಗೂ ಸಾಕ್ಷಿಗಳ ಹೇಳಿಕೆಯನ್ನು ಈ ನ್ಯಾಯಾಲಯವು ದಾಖಲಿಸಿಕೊಳ್ಳುವವರೆಗೆ ಹಾಗೆ ಮಾಡಲಾಗಿದೆ. ಸಾಕ್ಷಿಗಳು ಧಾರವಾಡದಲ್ಲೇ ನೆಲೆಸಿದ್ದು, ಮೂರನೇ ಷರತ್ತನ್ನು ಸಡಿಲಿಸಿದರೆ ಧಾರವಾಡದಲ್ಲಿ ಕುಲಕರ್ಣಿ ಅವರ ಓಡಾಟವನ್ನು ನಿಯಂತ್ರಿಸಲು ಬೇರೆ ಯಾವುದೇ ಷರತ್ತು ಇರುವುದಿಲ್ಲ.

ಅರ್ಜಿದಾರರು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣವು ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಸಾಕ್ಷಿಯ ಭಾಗವಾಗಿ ಸಂಗ್ರಹಿಸಿರುವ ವಸ್ತುಗಳು ಮತ್ತು ಸಾಕ್ಷಿಗಳು ಸಾಕ್ಷಿ ಪೆಟ್ಟಿಗೆಯಲ್ಲಿ ಬಂದು ನಿಂತಿಲ್ಲ. ಹೀಗಾಗಿ, ಈ ಹಂತದಲ್ಲಿ ಧಾರವಾಡ ಪ್ರವೇಶಕ್ಕೆ ವಿಧಿಸಿರುವ ನಿರ್ಬಂಧ ಸಡಲಿಕೆ ಮಾಡುವಂತೆ ಕೋರಿ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿದೇ ಬೇರೆ ದಾರಿಯಿಲ್ಲ ಎಂದು ನ್ಯಾಯಾಲಯವು ಆದೇಶದಲ್ಲಿ ವಿವರಿಸಿದೆ.

ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ವಿಶೇಷ ಅಭಿಯೋಜಕ ವಾದ ಮಂಡಿಸಿ, ಅರ್ಜಿದಾರರು ಧಾರವಾಡ ಪ್ರವೇಶಕ್ಕೆ ವಿಧಿಸಿರುವ ನಿರ್ಬಂಧ ಷರತ್ತನ್ನು ಸುಪ್ರೀಂಕೋರ್ಟ್ ಸಡಲಿಕೆ ಮಾಡಿಲ್ಲ. ಜತೆಗೆ, ಮೂರನೇ ಷರತ್ತು ಸಡಲಿಕೆ ಮಾಡುವ ಅಧಿಕಾರವನ್ನು ಸುಪ್ರೀಂಕೋರ್ಟ್ ಈ ನ್ಯಾಯಾಲಯಕ್ಕೆ ನೀಡಿಲ್ಲ. ಮೂರನೇ ಷರತ್ತು ಸಡಿಲಿಸಿದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ. ಹೀಗಾಗಿ ಅರ್ಜಿ ತಿರಸ್ಕರಿಸಬೇಕು ಎಂದು ವಾದ ಮಂಡಿಸಿದ್ದರು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಾದ ವಿನಯ ಕುಲಕರ್ಣಿ ಅವರ ಶಾಸಕರಾಗಿ ಆಯ್ಕೆಯಾಗಿದ್ದು, ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ಕರ್ತವ್ಯ ಮತ್ತು ಜವಾಬ್ದಾರಿ ಹೊಂದಿದ್ದಾರೆ. ಅಲ್ಲದೇ, ಜನರ ಸಮಸ್ಯೆಗಳಿಗೆ ಅವರು ಧ್ವನಿಯಾಗಬೇಕಿದೆ. ಈ ನಡುವೆ, ವಿಶೇಷ ನ್ಯಾಯಾಲಯಕ್ಕೆ ಮೂರನೇ ಷರತ್ತನ್ನು ಸಡಿಲಿಕೆ ಮಾಡುವ ಅಧಿಕಾರವಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಬಹುದು ಎಂಬ ಆಧಾರವನ್ನು ಮುಂದಿಟ್ಟುಕೊಂಡು ಅರ್ಜಿಯನ್ನು ವಜಾ ಮಾಡಲಾಗದು ಎಂದು ವಾದಿಸಿದ್ದರು.

ಇದನ್ನೂ ಓದಿ: ಹೈಕೋರ್ಟ್​ನಲ್ಲೂ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅರ್ಜಿ ವಜಾ: ಧಾರವಾಡ ಪ್ರವೇಶಕ್ಕಿಲ್ಲ ಅನುಮತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.