ETV Bharat / state

ಬೆಂಗಳೂರು-ಕನಕಪುರ ರಸ್ತೆ ಸುರಕ್ಷತೆ ಕಲ್ಪಿಸದ NHAI ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

author img

By

Published : Aug 9, 2023, 10:20 PM IST

ಬೆಂಗಳೂರು-ಕನಕಪುರ ರಸ್ತೆಯಲ್ಲಿ ವಾಹನ ಸವಾರರಿಗೆ ಸುರಕ್ಷತೆ ಕಲ್ಪಿಸದ ಎನ್​ಎಚ್​ಎಐ ಕ್ರಮಕ್ಕೆ ಹೈಕೋರ್ಟ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ಕನಕಪುರ-ಬೆಂಗಳೂರು ರಸ್ತೆಯಲ್ಲಿ ವಾಹನ ಸವಾರರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಈ ಸಂಬಂಧ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಮುಂದಿನ ಎರಡು ವಾರದಲ್ಲಿ ವಿವರಣೆ ನೀಡುವಂತೆ ಸೂಚನೆ ನೀಡಿದೆ.

ಬೆಂಗಳೂರು-ಕನಕಪುರ ರಸ್ತೆ ವಿಸ್ತರಣೆ ಕುರಿತಂತೆ ಎಸ್ಪಿ ಸಂದೀಪ್ ರಾಜು ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್​ ಕಮಲ್​ ಅವರಿದ್ದ ಪೀಠದಲ್ಲಿ ವಿಚಾರಣೆಗೆ ಬಂದಿತ್ತು.

ಈ ವೇಳೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೇಮಕ ಮಾಡಿದ್ದ ಕೋರ್ಟ್ ಕಮಿಷನರ್​ ಸಲ್ಲಿಸಿದ ವರದಿಯನ್ನು ಪರಿಗಣಿಸಿದ ನ್ಯಾಯಪೀಠ, ದೇಶದಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್​ಎಚ್​ಎ) ಪರಿಣಿತಿಯನ್ನು ಹೊಂದಿದೆ. ಆದರೂ ಸುರಕ್ಷತೆಯನ್ನು ಕಡೆಗಣಿಸಿದೆ ಎಂದು ನ್ಯಾಯಪೀಠ ತಿಳಿಸಿತು. ಅಲ್ಲದೆ, ರಸ್ತೆಯಲ್ಲಿ ಸಂಚರಿಸುವವರಿಗೆ ಸುರಕ್ಷತೆ ಬೇಕಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತು.

ಇದಕ್ಕೂ ಮುನ್ನ ಎನ್​ಎಚ್​ಎ ಪರ ವಕೀಲರು, ಬೆಂಗಳೂರು- ಕನಕಪುರ ರಸ್ತೆಯನ್ನು ಎರಡು ಪಥಗಳಿಂದ ನಾಲ್ಕು ಪಥಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಸಂಬಂಧ ಗುತ್ತಿಗೆ ಪಡೆದಿದ್ದ ಕಂಪೆನಿ ಮಧ್ಯದಲ್ಲಿ ಕಾಮಗಾರಿ ಸ್ಥಗಿತಗೊಳಿಸಿತ್ತು. ಇದೀಗ ಮತ್ತೊಂದು ಕಂಪೆನಿಗೆ ಗುತ್ತಿಗೆ ನೀಡಲಾಗಿದ್ದು, ಕಾಮಗಾರಿ ನಡೆಯುತ್ತಿದೆ.

ಈ ನಡುವೆ ಮೊದಲು ಗುತ್ತಿಗೆ ಪಡೆದ ಕಂಪನಿ ಮಳವಳ್ಳಿ ನ್ಯಾಯಾಲಯ ಮೆಟ್ಟಿಲೇರಿದ್ದು, ಪ್ರಸ್ತುತ ತಡೆಯಾಜ್ಞೆ ಇದೆ. ಹೀಗಾಗಿ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿದರು. ಅಲ್ಲದೆ, ಕೆಲ ಭಾಗಗಳಲ್ಲಿ ರಸ್ತೆ ನಾಲ್ಕು ಪಥಗಳಾಗಿದ್ದು, ಕೆಲ ಭಾಗಗಳಲ್ಲಿ ಎರಡು ಪಥಗಳಿವೆ. ಈ ಭಾಗಗಳಲ್ಲಿ ವಾಹನ ಸವಾರರಿಗೆ ಸುರಕ್ಷತೆಗೆ ಕ್ರಮ ಕೈಗೊಂಡಿದ್ದು, ಸಿಮೆಂಟ್​ ಬ್ಯಾರಿಕೇಡ್​ಗಳನ್ನು ಹಾಕಲಾಗಿದ್ದು, ಬಣ್ಣ ಬಳಿಯಲಾಗಿದೆ ಎಂದು ವಿವರಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಸಿಮೆಂಟ್​ ಬ್ಲಾಕ್​ಗಳನ್ನು ಅಳವಡಿಸುವುದರಿಂದ ಸುರಕ್ಷತೆ ಇರಲಿದೆ ಎಂಬುದಾಗಿ ಹೇಳಲಾಗುವುದಿಲ್ಲ. ಎನ್​ಎಚ್​ಐಎ ಕ್ರಮ ತೃಪ್ತಕರವಾಗಿಲ್ಲ. ಇದರಿಂದ ರಾತ್ರಿ ವೇಳೆ ಸಂಚಾರ ಮಾಡುವವರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಬೆಂಗಳೂರು- ಮೈಸೂರು ರಸ್ತೆ ಟೋಲ್​ ವಿವರ ಸಲ್ಲಿಸಿ : ಈ ವೇಳೆ ಮಧ್ಯ ಪ್ರವೇಶಿಸಿದ ವಕೀಲ ಜಿ. ಆರ್​ ಮೋಹನ್​, ಮೈಸೂರು- ಬೆಂಗಳೂರು ದಶಪಥ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಟೋಲ್​ ಸಂಗ್ರಹ ಮಾಡಲಾಗುತ್ತಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಎಷ್ಟು ಕಿಲೋಮೀಟರ್​ಗೆ ಟೋಲ್​ ಸಂಗ್ರಹ ಮಾಡಲಾಗುತ್ತಿದೆ. ಎಷ್ಟು ಸಂಗ್ರಹ ಮಾಡಲಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರದ ಮೂಲಕ ಸಲ್ಲಿಸಿದಲ್ಲಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: 1ನೇ ತರಗತಿಗೆ 6 ವರ್ಷ: ಸರ್ಕಾರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.