ETV Bharat / state

ಸುತ್ತೂರು ಶ್ರೀಗಳ ಪುತ್ಥಳಿ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಸರ್ಕಾರಕ್ಕೆ ನೋಟಿಸ್

author img

By ETV Bharat Karnataka Team

Published : Jan 2, 2024, 10:48 PM IST

ಮೈಸೂರಿನ ಗನ್ ಹೌಸ್ ಸರ್ಕಲ್​ನಲ್ಲಿ ಸುತ್ತೂರು ಮಠದ ರಾಜೇಂದ್ರ ಸ್ವಾಮಿ ಪುತ್ಥಳಿ ಅನಧಿಕೃತವಾಗಿ ಸ್ಥಾಪಿಸಿದ್ದು, ಅದನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

high court
ಹೈಕೋರ್ಟ್

ಬೆಂಗಳೂರು: ಮೈಸೂರಿನ ಗನ್ ಹೌಸ್ ಸರ್ಕಲ್​ನಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ರಾಜೇಂದ್ರ ಸ್ವಾಮಿ ಪುತ್ಥಳಿ ಅನಧಿಕೃತವಾಗಿ ಸ್ಥಾಪಿಸಿದ್ದು, ಅದನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ ಸಾರ್ವಜನಿಕ ಅರ್ಜಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲವು ಸರ್ಕಾರ ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಮೈಸೂರಿನ ಗಿರಿಯಾ ಭೋವಿ ಪಾಳ್ಯದ ನಿವಾಸಿ ಸುಬ್ರಹ್ಮಣ್ಯ ಮತ್ತು ಕುರುಬರಹಳ್ಳಿ ನಿವಾಸಿ ಎನ್. ಶೀಲಾವತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ನಡೆಸಿತು. ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮೈಸೂರು ಜಿಲ್ಲಾಧಿಕಾರಿ, ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ನಗರ ಪೊಲೀಸ್ ಆಯುಕ್ತರು ಮತ್ತು ಮೈಸೂರು ವಿಭಾಗದ ಲೋಕೋಪಯೋಗಿ ಇಲಾಖೆ ಕಾರ್ಯಕಾರಿ ಎಂಜಿನಿಯರ್​ಗೆ​ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಅಲ್ಲದೇ ಅರ್ಜಿ ಕುರಿತು ಸಂಬಂಧಪಟ್ಟ ಸರ್ಕಾರಿ ಪ್ರಾಧಿಕಾರಗಳಿಂದ ಅಗತ್ಯ ಮಾಹಿತಿ ಪಡೆದು ಮುಂದಿನ ಎರಡು ವಾರದಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿತು. ಇದೇ ವೇಳೆ ಪ್ರತಿಮೆ ಅನಾವರಣ ಕಾರ್ಯಕ್ರಮ ಜ.4ರಂದು ನಡೆಯಲಿದ್ದು, ಅದಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿ ತಿರಸ್ಕರಿಸಿದೆ. ಅನಾವರಣ ಕಾರ್ಯಕ್ರಮ ನಿಗದಿಯಾಗಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಅರ್ಜಿದಾರರು ಸಲ್ಲಿಸದ ಹಿನ್ನೆಲೆಯಲ್ಲಿ ಅವರ ಮಧ್ಯಂತರ ಮನವಿ ಪರಿಗಣಿಸಲಾಗದು ಎಂದು ನ್ಯಾಯಪೀಠ ತಿಳಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಸ್ಥಳಗಳಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಪ್ರತಿಮೆಗಳನ್ನು ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ, ವೃತ್ತಗಳಲ್ಲಿ ಪ್ರತಿಮೆ ಸ್ಥಾಪಿಸಬಾರದು ಎಂಬುದೇನಿಲ್ಲ. ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ವೃತ್ತಗಳಲ್ಲಿ ಪ್ರತಿಮೆ ಸ್ಥಾಪಿಸಬಹುದಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಕ್ರಮವಾಗಿಯೇ ವೃತ್ತದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಹೈಕೋರ್ಟ್ ಅನುಮತಿ ನೀಡಿದ ನಂತರವೇ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಹಾಗಾಗಿ ಅರ್ಜಿಯನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ನ್ಯಾಯಪೀಠ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಸಂಚಾರ ದಟ್ಟಣೆಯಿರುವ ಪ್ರದೇಶಗಳಲ್ಲಿ ಪುತ್ಥಳಿ ಹಾಗೂ ಪ್ರತಿಮೆಗಳನ್ನು ಸ್ಥಾಪನೆ ಮಾಡಬಾರದು ಎಂಬುದಾಗಿ ಸುಪ್ರಿಂ ಕೋರ್ಟ್ ಸ್ಪಷ್ಟವಾಗಿ ತೀರ್ಪು ನೀಡಿದೆ. ಅದನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಸರ್ಕಾರಿ ಸ್ಥಳಗಳಲ್ಲಿ ಅನಧಿಕೃತ ಪ್ರತಿಮೆಗಳನ್ನು ಸ್ಥಾಪಿಸಿದ್ದರೆ, ಅವುಗಳನ್ನು ತೆರವುಗೊಳಿಸಬೇಕು. ಹಾಗೆಯೇ, ರಸ್ತೆ ಮಾರ್ಗಗಳಲ್ಲಿ ಅನಧಿಕೃತವಾಗಿ ಪ್ರತಿಮೆ ನಿರ್ಮಾಣ ಮಾಡುತ್ತಿರುವುದನ್ನು ಮೊದಲೇ ಗಮನ ಹರಿಸಿ ತಡೆಯಬೇಕು. ಒಮ್ಮೆ ಪ್ರತಿಮೆ ನಿರ್ಮಾಣವಾದಲ್ಲಿ, ಅದನ್ನು ತೆರವುಗೊಳಿಸುವುದು ಕಷ್ಟ ಎಂದು ಪೀಠ ಮೌಖಿಕವಾಗಿ ಹೇಳಿತು.

ಜೊತೆಗೆ, ಪ್ರತಿಮೆಗಳ ಸ್ಥಾಪನೆಗೆ ನ್ಯಾಯಾಲಯದ ವಿರೋಧವಿಲ್ಲ. ಆದರೆ, ಸಾರ್ವಜನಿಕರಿಗೆ ತೊಂದರೆಯಾಗುವಂತೆ, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ಪ್ರತಿಮೆ ಸ್ಥಾಪಿಸುವುದು ಸರಿಯಲ್ಲ. ರಸ್ತೆಗಳು, ಸರ್ಕಾರಿ ಸ್ಥಳಗಳು ಕೇವಲ ಪ್ರತಿಮೆಗಳಿಂದ ತುಂಬಬಾರದು. ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಪ್ರತಿಮೆ ಸ್ಥಾಪನೆ ಮಾಡುವುದನ್ನು ನ್ಯಾಯಾಲಯ ಅನುಮತಿಸುವುದೇ ಇಲ್ಲ.

ದೂರದ ಪ್ರದೇಶದಲ್ಲೋ ಅಥವಾ ಉದ್ಯಾನದ ಮಧ್ಯಭಾಗದಲ್ಲಿಯೋ ಯಾರಿಗೂ ತೊಂದರೆಯಾಗದಂತೆ ಅಗತ್ಯ ಅನುಮತಿಗಳೊಂದಿಗೆ ಪ್ರತಿಮೆ ಸ್ಥಾಪನೆ ಮಾಡುವುದರಿಂದ ಯಾವ ಸಮಸ್ಯೆ ಉದ್ಭವಿಸುವುದಿಲ್ಲ. ವೃತ್ತಗಳಲ್ಲಿ ಪ್ರತಿಮೆ ಸ್ಥಾಪಿಸುವ ವಿಚಾರವನ್ನು ಪರೀಕ್ಷೆಗೊಳಪಡಿಸುವ ಅಗತ್ಯವಿದೆ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ಪ್ರಕರಣದ ಹಿನ್ನೆಲೆ ಏನು ? ಮೈಸೂರಿನ ಗನ್ ಹೌಸ್ ಸರ್ಕಲ್​ನಲ್ಲಿ ಸುತ್ತೂರು ಮಠದ ದಿ. ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಪುತ್ಥಳಿಯನ್ನು ಇತ್ತೀಚೆಗೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿರುವುದು ವಿವಾದಕ್ಕೆ ಕಾರಣವಾಗಿತ್ತು. ಸ್ಥಳದಲ್ಲಿ ಪ್ರತಿಭಟನೆ ನಡೆದಿವೆ. ರಾಜೇಂದ್ರ ಸ್ವಾಮೀಜಿಯ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಪುತ್ಥಳಿ ಹಾಗೂ ಪ್ರತಿಮೆಗಳನ್ನು ಸ್ಥಾಪಿಸಬಾರದು ಎಂದು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನಿಂದ ಹಲವು ಆದೇಶಗಳು ಪ್ರಕಟವಾಗಿವೆ. ಆದ್ದರಿಂದ ಸ್ವಾಮೀಜಿಯ ಪುತ್ಥಳಿಯನ್ನು ತೆರವುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ:ಮಾಲ್ ಆಫ್ ಏಷ್ಯಾದ ವಿರುದ್ಧ ಕ್ರಮ ಕೈಗೊಳ್ಳದಂತೆ ಹಿಂದೆ ನೀಡಿದ್ದ ಮಧ್ಯೆಂತರ ಆದೇಶ ವಿಸ್ತರಿಸಿದ ಹೈಕೋರ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.