ETV Bharat / state

ನಿವೃತ್ತ ಲೆ.ಕರ್ನಲ್ ಕೈ ತಪ್ಪಿದ್ದ ಜಮೀನು ಮತ್ತೆ ಪಡೆಯಲು ನೆರವಾದ ಹೈಕೋರ್ಟ್

author img

By

Published : Nov 18, 2022, 7:07 AM IST

High Court
ಹೈಕೋರ್ಟ್

ವಿವಾದಿತ ಜಮೀನಿನ ಮಾಲೀಕತ್ವ ರದ್ದು ಕೋರಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಗೋಪಾಲಕೃಷ್ಣ ಭಟ್‌ ಅವರ ನೆರವಿಗೆ ಬಂದಿದೆ.

ಬೆಂಗಳೂರು: ಹಿಡುವಳಿಗಾಗಿ ನೀಡಿದ್ದ ಜಮೀನನ್ನು ಸ್ವಾಧೀನಕ್ಕೆ ನೀಡುವಂತೆ ಕೋರಿ ಹಲವು ದಶಕಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಗೋಪಾಲಕೃಷ್ಣ ಭಟ್‌ ಅವರ ನೆರವಿಗೆ ಹೈಕೋರ್ಟ್ ಧಾವಿಸಿದೆ. ನಾಲ್ಕು ಎಕರೆ ಜಮೀನಿನ ಸ್ವಾಧೀನವನ್ನು ಎಂಟು ವಾರದಲ್ಲಿ ಸುಪರ್ದಿಗೆ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ವಿವಾದಿತ ಜಮೀನಿನ ಮಾಲೀಕತ್ವ ರದ್ದು ಕೋರಿ ನಫಿಜಾ ಮತ್ತಿತರರು ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ಅರ್ಜಿದಾರರು ಕೂಡಲೇ ಜಮೀನಿನ ಸ್ವಾಧೀನವನ್ನು ಗೋಪಾಲಕೃಷ್ಣ ಅವರಿಗೆ ಬಿಟ್ಟುಕೊಡಬೇಕು ಎಂದು ಹೇಳಿದರು. ಈ ಆದೇಶವನ್ನು ಅರ್ಜಿದಾರರು ಪಾಲಿಸದಿದ್ದರೆ, ಅವರನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸಂಬಂಧಪಟ್ಟ ಪ್ರಾಧಿಕಾರದ ಅಧಿಕಾರಿಗಳು ಜಮೀನಿನಿಂದ ಒಕ್ಕಲೆಬ್ಬಿಸಬೇಕು ಎಂದರು. ಜತೆಗೆ ಗೋಪಾಲಕೃಷ್ಣ ಭಟ್ ಅವರಿಗೆ ಜಮೀನಿನ ಸ್ವಾಧೀನ ನೀಡಬೇಕು ಎಂದು ಆದೇಶಿಸಿದೆ.

ತನ್ನ ಕೈ ತಪ್ಪಿದ್ದ ಜಮೀನನ್ನು ಮತ್ತೆ ಪಡೆಯಲು 1990ರಿಂದ ನಿವೃತ್ತ ಲೆ.ಕರ್ನಲ್ ಕಾನೂನು ಹೋರಾಟ ನಡೆಸುತ್ತಿದ್ದರು. ನಮ್ಮ ದೇಶದ ಗಡಿ ರಕ್ಷಿಸಲು ತಮ್ಮ ಪ್ರಾಣ ಪಣಕ್ಕಿಡುವ ಸೈನಿಕರನ್ನು ಸಮಾಜದ ಒಂದು ವಿಭಾಗವು ಎಷ್ಟೊಂದು ಕಳಪೆಯಾಗಿ ನಡೆಸಿಕೊಳ್ಳಬಹುದು ಎಂಬುದಕ್ಕೆ ಈ ಪ್ರಕರಣ ಉದಾಹರಣೆಯಾಗಿದೆ. ಕರ್ನಾಟಕ ಭೂ ಸುಧಾರಣಾ ಕಾಯ್ದೆ-1961ರ 15 (5)ರ ಅನುಸಾರ ಸೈನಿಕರು ನಿವೃತ್ತಿಯಾದ ಮೇಲೆ ತಮ್ಮ ಮಾಲೀಕತ್ವದ ಹಿಡುವಳಿ ಜಮೀನನ್ನು ಪುನಃ ಪಡೆಯಬಹುದು ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು?: ಅರ್ಜಿದಾರರ ಪೂರ್ವಜರಾದ ಉಮರ್ ಬ್ಯಾರಿ ಎಂಬುವವರು ಗೋಪಾಲಕೃಷ್ಣ ಅವರ ತಂದೆಯ ಮಾಲೀಕತ್ವದ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ನಾಲ್ಕು ಎಕರೆ ಜಮೀನಿನಲ್ಲಿ 1940 ರಿಂದ ಗೇಣಿ ಮಾಡುತ್ತಿದ್ದರು. ಗೋಪಾಲಕೃಷ್ಣ ಭಟ್ ಅವರು 1993ರಲ್ಲಿ ಸೇನೆಯ ಸೇವೆಯಿಂದ ನಿವೃತ್ತರಾಗಿದ್ದರು. 1994ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 15(4) ಅಡಿಯಲ್ಲಿ ಜಮೀನಿನ ಮರು ಸ್ವಾಧೀನಕ್ಕೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿದಾರರಿಗೆ ನೋಟಿಸ್ ನೀಡಿದ್ದರೂ ಅವರು ಪೂರಕವಾಗಿ ಸ್ಪಂದಿಸಿರಲಿಲ್ಲ.

ನಂತರ ಭೂ ನ್ಯಾಯಾಧೀಕರಣವು ಜಮೀನಿನ ಹಕ್ಕುಪತ್ರವನ್ನು ಅರ್ಜಿದಾರರ ಹೆಸರಿಗೆ ನೋಂದಣಿ ಮಾಡಿಸಲು ಆದೇಶಿಸಿತ್ತು. ಆ ಆದೇಶವನ್ನು ವಜಾಗೊಳಿಸಿ 2000ರದಲ್ಲಿ ಹೈಕೋರ್ಟ್ ಆದೇಶಿಸಿತ್ತು. ಅಲ್ಲದೆ, ಗೋಪಾಲಕೃಷ್ಣ ಭಟ್ ಅವರ ಅರ್ಜಿಯ ಮೇಲೆ ವಿಚಾರಣೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸ್ಥಳೀಯ ತಹಶೀಲ್ದಾರ್‌ಗೆ ನಿರ್ದೇಶಿಸಿತ್ತು. ನಂತರ ತಹಶೀಲ್ದಾರ್ ಅವರು ಗೋಪಾಕೃಷ್ಣ ಭಟ್ ಪರವಾಗಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಯನ್ನು 2012ರಲ್ಲಿ ಉಪ ವಿಭಾಗಾಧಿಕಾರಿ ವಜಾಗೊಳಿಸಿ, ತಹಶೀಲ್ದಾರ್ ಆದೇಶವನ್ನು ಎತ್ತಿಹಿಡಿದಿದ್ದರು. ಈ ಆದೇಶ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್​ ಅರ್ಜಿ ವಜಾಗೊಳಿಸಿ ಗೋಪಾಲಕೃಷ್ಣ ಭಟ್ ಅವರಿಗೆ ಜಮೀನಿನ ಸ್ವಾಧೀನ ನೀಡಬೇಕು ಎಂದು ಆದೇಶಿಸಿದೆ.

ಇದನ್ನೂ ಓದಿ: ಶಓಮಿ ಸಂಸ್ಥೆಗೆ ಸೇರಿದ 5,551 ಕೋಟಿ ಜಪ್ತಿ ಪ್ರಶ್ನಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.