ETV Bharat / state

ಮೈಸೂರು ವಿವಿ ಕುಲಪತಿಯಾಗಿ ಲೋಕ್​ನಾಥ್ ಮುಂದುವರಿಕೆಗೆ ಹೈಕೋರ್ಟ್ ಸೂಚನೆ

author img

By ETV Bharat Karnataka Team

Published : Sep 21, 2023, 9:16 PM IST

high court
ಹೈಕೋರ್ಟ್​

ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ನಿರಾಳತೆ ನೀಡಿದ ಹೈಕೋರ್ಟ್​, ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು ಖಾಲಿಯಾಗುವಂತಿಲ್ಲ. ಈ ಹಿನ್ನೆಲೆ ಹುದ್ದೆಯಲ್ಲಿ ಮುದುವರೆಯಬೇಕು ಎಂದು ಸೂಚನೆ ನೀಡಿದೆ.

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿ ಆಗಿರುವ ಪ್ರೊ. ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ರಿಲೀಫ್​ ನೀಡಿರುವ ಹೈಕೋರ್ಟ್​ ಮುಂದಿನ ಆದೇಶದವರೆಗೆ ಕುಲಪತಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದೆ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು ಖಾಲಿಯಾಗುವಂತಿಲ್ಲ. ಈ ಹಿನ್ನೆಲೆ ಹುದ್ದೆಯಲ್ಲಿ ಮುದುವರೆಯಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ಈ ಸಂಬಂಧ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ.

ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಪ್ರೊ ಶರತ್ ಅನಂತಮೂರ್ತಿ ಮತ್ತು ಡಾ ಜಿ ವೆಂಕಟೇಶ್‌ ಕುಮಾರ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಏಕ ಸದಸ್ಯ ಪೀಠ ಪುರಸ್ಕರಿಸಿ, ಲೋಕನಾಥ್​ ಅವರ ನೇಮಕ ಆದೇಶವನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಲೋಕನಾಥ್​ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ್​ ಅವರಿದ್ದ ನ್ಯಾಯಪೀಠವು ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಈ ಆದೇಶದಂತೆ ಲೋಕನಾಥ್​ ಅವರು ವಿವಿ ಕುಲಪತಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಾಗಿದ್ದಾರೆ ಎಂಬುದಾಗಿ ಅರ್ಥವಲ್ಲ ಎಂದು ಪೀಠ ತನ್ನ ಆದೇಶದಲ್ಲಿ ಸ್ಪಷ್ಟ ಪಡಿಸಿದೆ.

ಪ್ರಕರಣದ ಹಿನ್ನೆಲೆ ಏನು ? ಶೋಧನಾ ಸಮಿತಿಯು ಪ್ರೊ. ಎನ್ ಕೆ ಲೋಕನಾಥ್, ಪ್ರೊ. ಶರತ್ ಅನಂತಮೂರ್ತಿ, ಪ್ರೊ. ಡಿ ಎಸ್‌ ಗುರು ಅವರ ಹೆಸರುಗಳನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು 2023ರ ಮಾ.23ರಂದು ಪ್ರೊ. ಎನ್ ಕೆ ಲೋಕನಾಥ್ ಅವರನ್ನು ನಾಲ್ಕು ವರ್ಷಗಳ ಅವಧಿಗೆ ಅಥವಾ 67 ವರ್ಷಗಳಾಗುವವರೆಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ಆದೇಶಿಸಿತ್ತು. ಅದನ್ನು ಪ್ರಶ್ನಿಸಿದ್ದ ಅರ್ಜಿದಾರರು, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯನ್ವಯ ನಿರ್ದಿಷ್ಟ ಅರ್ಹತೆ ಇಲ್ಲದಿದ್ದರೂ ನಿಯಮಾವಳಿ ಉಲ್ಲಂಘಿಸಿ, ಪ್ರೋ.ಲೋಕನಾಥ್ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ.

ಮೈಸೂರಿನ ಜಯಲಕ್ಷ್ಮೀಪುರಂ ನಿವಾಸಿ ಡಿ ವಿ ಶಶಿಧರ್ ಮತ್ತಿತರರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಲೋಕನಾಥ್ ಮತ್ತಿತರರ ವಿರುದ್ಧ ಆಸ್ತಿ ಒತ್ತುವರಿ ಸಂಬಂಧ 2020ರ ನ.4ರಂದು ವಂಚನೆ ಪ್ರಕರಣ ದಾಖಲಿಸಿದ್ದರು. ಆ ಕುರಿತ ಪ್ರಕರಣ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಬಾಕಿ ಇದೆ ಎಂದು ಆಕ್ಷೇಪಿಸಿದ್ದರು.

ಕುಲಪತಿಯಾಗಿ ನೇಮಕ ಆಗುವವರ ವಿರುದ್ಧ ಯಾವುದೇ ಕ್ರಿಮಿನಲ್‌ ಪ್ರಕರಣ ಬಾಕಿ ಇರಬಾರದು. ಆದರೆ ಕುಲಪತಿಯಾಗಿ ನೇಮಕಗೊಂಡಿರುವ ಲೋಕನಾಥ್ ವಿರುದ್ಧ ಕ್ರಿಮಿನಲ್ ಪ್ರಕರಣ ಬಾಕಿ ಇದೆ. ಆದರೆ ಆ ವಿಷಯವನ್ನು ಅವರು ಮರೆಮಾಚಿದ್ದಾರೆ. ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ವಿರುದ್ಧವಾಗಿ ಹಾಗೂ ನಿಯಮಗಳನ್ನು ಗಾಳಿಗೆ ತೂರಿ ಲೋಕನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

ದಾಖಲೆಗಳ ಪ್ರಕಾರ ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಲು 20 ದಿನ ಸಮಯ ನೀಡಿ 2022ರ ನ.8ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ 2022ರ ನ.24 ಕೊನೆಯ ದಿನವಾಗಿತ್ತು. ಅದೇ ದಿನ ಲೋಕನಾಥ್‌ ಅವರು ಹೈಕೋರ್ಟ್‌ನಲ್ಲಿ ತಮ್ಮ ಪ್ರಕರಣದ ವಿರುದ್ಧ ತಡೆಯಾಜ್ಞೆ ಪಡೆದುಕೊಂಡಿದ್ದರು.

ಜೊತೆಗೆ 2007ರಲ್ಲಿ ನಡೆದ ಪ್ರಾಧ್ಯಾಪಕ ನೇಮಕದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ತನಿಖೆಗೆ ನೇಮಕ ಮಾಡಲಾಗಿದ್ದ ನ್ಯಾಯಮೂರ್ತಿ ರಂಗ ವಿಠಲಾಚಾರ್ ಆಯೋಗವು ಪ್ರಾಧ್ಯಾಪಕ ನೇಮಕಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಯಮದಂತೆ 10 ವರ್ಷಗಳ ಬೋಧನಾ ಅನುಭವ ಇರಬೇಕು. ಆದರೆ, ಲೋಕನಾಥ್ ಅವರಿಗೆ ಅದು ಇಲ್ಲ. ಹೀಗಾಗಿ, ಅವರು ಯುಜಿಸಿ ನಿಯಮದ ಪ್ರಕಾರ ಪ್ರಾಧ್ಯಾಪಕ ಹುದ್ದೆಗೂ ಅರ್ಹರಲ್ಲ ಎಂಬುದಾಗಿ ಹೇಳಿತ್ತು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಲೋಕನಾಥ್ ನೇಮಕಾತಿಯನ್ನು ರದ್ದುಪಡಿಸಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿ ಲೋಕನಾಥ್​ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಇದನ್ನೂಓದಿ:ಮೈಸೂರು ವಿವಿ ಕುಲಪತಿ ಲೋಕನಾಥ್​ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.