ETV Bharat / state

ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯ ಕೊರತೆಯಿಂದಾಗಿ ಬಡವರೂ ಸಹ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವಂತಾಗಿದೆ: ಹೈಕೋರ್ಟ್ ಬೇಸರ

author img

By ETV Bharat Karnataka Team

Published : Oct 9, 2023, 3:29 PM IST

Updated : Oct 9, 2023, 7:33 PM IST

High Court : ಸರ್ಕಾರಗಳು ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಮುಂದಾಗಿಲ್ಲ. ಇದರಿಂದ ಪರೋಕ್ಷವಾಗಿ ಮಕ್ಕಳು ಖಾಸಗಿ ಶಾಲೆಗಳಿಗೆ ಹೋಗುವಂತಾಗಿದೆ ಎಂದು ಹೈಕೋರ್ಟ್​​ ಬೇಸರ ವ್ಯಕ್ತಪಡಿಸಿದೆ.

high-court-upset-about-lack-of-infrastructure-in-government-schools
ಸರ್ಕಾರಿ ಶಾಲೆಗಳಲ್ಲಿ ಮೂಲಸೌಲಭ್ಯ ಕೊರತೆ

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಮೂಲಸೌಲಭ್ಯ (ಶೌಚಾಲಯ, ಕುಡಿಯುವ ನೀರು) ಗಳ ಕೊರತೆಯನ್ನು ನೀಗಿಸುವಲ್ಲಿ ವಿಫಲವಾಗಿರುವ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಪೋಷಕರಿಗೆ ಎರಡು ಹೊತ್ತಿನ ಊಟಕ್ಕಿಲ್ಲದಿದ್ದರೂ ಬೇರೆ ದಾರಿಯಿಲ್ಲದೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ, ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಮುಂದಿನ ಎಂಟು ವಾರಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿರುವ ಸಂಬಂಧ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಸರ್ಕಾರ ಉಚಿತ ಬಸ್ ಪ್ರಯಾಣ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸಿದರೂ, ನಮಗೆ (ನ್ಯಾಯಪೀಠಕ್ಕೆ) ಅಭ್ಯಂತರವಿಲ್ಲ. ಆದರೆ, ಬಡ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಮೂಲ ಸೌಲಭ್ಯಗಳುಳ್ಳ ವ್ಯವಸ್ಥೆ ಕಲ್ಪಿಸಬೇಕು ಎಂಬುದೇ ನಮ್ಮ ಆಶಯ ಎಂದು ಪೀಠ ಪ್ರತಿಪಾದಿಸಿತು. ನಮ್ಮ ಸಂವಿಧಾನದ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕಾಗಿದೆ. ಆದರೆ, ಸರ್ಕಾರಗಳು ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಮುಂದಾಗಿಲ್ಲ. ಇದು ಪರೋಕ್ಷವಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ತಳ್ಳುವಂತೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿತು.

ಅಲ್ಲದೆ, ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆಯಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿಲ್ಲವೇ?, 2023ರಲ್ಲಿ ಈ ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ನಡೆಯುತ್ತಿದೆ. ಈವರೆಗೂ 464 ಶಾಲೆಗಳಲ್ಲಿ ಶೌಚಾಲಯ ಹಾಗೂ 32 ಶಾಲೆಗಳಲ್ಲಿ ಕುಡಿಯಲು ಶುದ್ಧವಾದ ನೀರಿನ ಸೌಲಭ್ಯದ ಕೊರತೆಯಿದೆ. ಆದರೂ ಸರ್ಕಾರ ಈ ಬಗ್ಗೆ ಕ್ರಮಕ್ಕೆ ಮುಂದಾಗಿಲ್ಲ. ಆ ಮೂಲಕ ಪರೋಕ್ಷವಾಗಿ ಖಾಸಗಿ ಶಾಲೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಜೊತೆಗೆ, ಹಣವಿರುವ ಪೋಷಕರು ಎಲ್ಲ ಸೌಲಭ್ಯಗಳುಳ್ಳ ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ಬಡವರ ಮಕ್ಕಳು ಸೌಲಭ್ಯವುಳ್ಳ ಶಾಲೆಗಳಲ್ಲಿ ಶಿಕ್ಷಣ ಪಡೆಯಬಾರದೇ? ಹೀಗಾದರೆ ಬಡವರ ಮಕ್ಕಳು ಶಿಕ್ಷಣ ಪಡೆಯುವುದು ಬೇಡವೇ ಎಂದು ಹೈಕೋರ್ಟ್​ ಪ್ರಶ್ನಿಸಿತು.

ಅಂಬೇಡ್ಕರ್ ಅವರು ಯಾವುದೇ ಭಾವಚಿತ್ರವನ್ನು ನೋಡಿದರೂ ಪುಸ್ತಕವನ್ನು ಹಿಡಿದುಕೊಂಡಿರುತ್ತಾರೆ. ಅದರ ಉದ್ದೇಶವೇ ಶಿಕ್ಷಣದ ಮಹತ್ವವನ್ನು ತಿಳಿಸುವುದಾಗಿದೆ. ಮುಂದುವರೆದ ಕೆಲ ದೇಶಗಳಲ್ಲಿ ರಕ್ಷಣಾ ಇಲಾಖೆಗಿಂತಲೂ ಹೆಚ್ಚಿನ ಪ್ರಮಾಣದ ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು 464 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳು ಇಲ್ಲ. ಇನ್ನೂ ಕೆಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಇದರ ಜೊತೆಗೆ 80 ಕೋಟಿ ರೂಪಾಯಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಲು ಹಂಚಿಕೆ ಮಾಡಲಾಗಿದೆ ಎಂದು ಸಲ್ಲಿಸಿದ ವರದಿಯಲ್ಲಿ ವಿವರಿಸಲಾಗಿತ್ತು.

ಅಲ್ಲದೆ, ಸಾಕಷ್ಟು ಸೌಲಭ್ಯಗಳು ಇಲ್ಲದೇ ಇರುವುದರಿಂದ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಹಣಕಾಸಿನ ಸಮಸ್ಯೆ ಎದುರಿಸುತ್ತಿರುವ ಪೋಷಕರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದೇ ವಿಧಿ ಇಲ್ಲವಾಗಿದೆ. ಈ ಮೂಲಕ ಸಂವಿಧಾನದಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಿರುವುದರ ಹಿಂದಿನ ಉದ್ದೇಶಕ್ಕೆ ಸೋಲಾಗುತ್ತಿದೆ ಎಂದು ವಿವರಿಸಿದರು.

ಇದರಿಂದ ಮತ್ತಷ್ಟು ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ಯಾವ ಮಕ್ಕಳು ಸರ್ಕಾರಿ ಶಾಲೆಗೆ ಹೋಗುತ್ತಾರೆ ಎಂಬುದಕ್ಕೆ ಸಂಶೋಧನೆ ಮಾಡಬೇಕಿಲ್ಲ. ಕಡುಬಡವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಾರೆ. ಅವರಿಗೆ ಆಯ್ಕೆ ನೀಡಿದರೆ ಖಂಡಿತವಾಗಿಯೂ ಅವರು ಅತ್ತ ಸುಳಿಯುವುದಿಲ್ಲ. ಸಮಾಜದ ತಳವರ್ಗದ ಜನರ ಮಕ್ಕಳು ರಾಜ್ಯದಲ್ಲಿ ಶಿಕ್ಷಣ ಪಡೆಯಬಾರದೇ? ಉಳ್ಳವರಿಗೆ ಮಾತ್ರವೇ ಶಿಕ್ಷಣವೇ? ಹಣವಿದ್ದವರು ತಮ್ಮ ಮಕ್ಕಳನ್ನು ಎಲ್ಲಾ ಸೌಲಭ್ಯಗಳು ಇರುವ ಒಳ್ಳೆಯ ಶಾಲೆಗೆ ಸೇರಿಸಬಹುದು. ಹಣವಿಲ್ಲದವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಹಾಗಿಲ್ಲ? ಎಂದು ಪೀಠ ತಿಳಿಸಿತು.

ಜತೆಗೆ, ಎರಡು ತಿಂಗಳಲ್ಲಿ ರಾಜ್ಯ ಸರ್ಕಾರವು ಸಮೀಕ್ಷೆ ಪೂರ್ಣಗೊಳಿಸಬೇಕು. ಇದಕ್ಕೆ ಮತ್ತೆ ಕಾಲಾವಕಾಶ ವಿಸ್ತರಿಸುವುದಿಲ್ಲ. ತನ್ನ ವ್ಯಾಪ್ತಿಯಲ್ಲಿ ಶಾಲೆಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಬಿಬಿಎಂಪಿಗೆ ನಿರ್ದೇಶಿಸಲಾಗಿದೆ. ಸಮೀಕ್ಷೆಗೆ ಸಂಬಂಧಿಸಿದಂತೆ ಮತ್ತೆ ಕಾಲಾವಕಾಶ ವಿಸ್ತರಿಸುವುದಿಲ್ಲ ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಕನಿಷ್ಟ ವೇತನ ಮರು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

Last Updated : Oct 9, 2023, 7:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.