ETV Bharat / state

ಶಾಂತಿ ಸುವ್ಯವಸ್ಥೆ ಹದಗೆಟ್ಟರೆ ಪೊಲೀಸ್ ಅಧಿಕಾರಿಗಳೇ ಹೊಣೆ: ಸಿಎಂ, ಡಿಸಿಎಂ ಎಚ್ಚರಿಕೆ

author img

By

Published : May 23, 2023, 5:30 PM IST

Updated : May 23, 2023, 8:01 PM IST

ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ: ಕಾನೂನು ಬಾಹಿರ ಚಟುವಟಿಕೆ ತಡೆಗೆ ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆ, ಡ್ರಗ್‌ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

senior police officers meeting was held at Vidhana Soudha.
ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಸಮ್ಮುಖದಲ್ಲಿ ನಡೆಯಿತು.

ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು.

ಬೆಂಗಳೂರು: ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ. ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು. ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು. ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮಾದಕ ವಸ್ತು ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು. ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಅವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ಎಂದು ಎಚ್ಚರಿಕೆ ನೀಡಿದರು.

ಕೇಸರೀಕರಣ ಮಾಡಲು ಹೊರಟಿದ್ದೀರಾ? ಇದೇ ವೇಳೆ ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ತರಾಟೆಗೆ ತೆಗೆದುಕೊಂಡರು. ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು..?. ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ವಿಜಯಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡುವುದಿಲ್ಲ ಎಂದು ಖಡಕ್​ ಆಗಿ ಹೇಳಿದ್ರು.

PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ OMR ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರನ್ನೇ ಹೆರಾಸ್​ಮೆಂಟ್ ಮಾಡಿದ್ದೀರಾ. ಪ್ರಿಯಾಂಕ್ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನು ಹಾಳು‌ ಮಾಡಿದ್ದೀರ ನೀವು. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರ್ಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದ ಶುರು ಆಗಬೇಕು ಎಂದು ಸೂಚಿಸಿದರು.

ಈ ಸರ್ಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡೋದು ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದ್ರೆ ಸಾಕು. ನಿಮ್ಮ ಹಿಂದಿನ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್ಲ. ಹಿಂದೆ ಪೇಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಅನ್ನೋದು ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ರಿ. ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿದ್ರಿ. ಅವರನ್ನು ಹರಾಸ್​ಮೆಂಟ್ ಮಾಡಿದ್ರಿ. ನಮ್ಮನ್ನು, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡ್ತೀರಾ? ಎಂದು ಡಿಕೆಶಿ ಪ್ರಶ್ನಿಸಿದರು.

ಆದರೆ ಎದುರು ಪಾರ್ಟಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿದ್ರಿ. ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ ನೀವು? ಅದು ಕ್ರೈಂ ಅಲ್ವಾ?. ನೀವು ಏನೇನೂ ಮಾಡಿದ್ದೀರಾ ಅಂತ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ವಾಚ್ ಮಾಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್ಲ. ನೀವು ಬದಲಾಗಬೇಕು. ನಿಮ್ಮ ವರ್ತನೆ ಬದಲಾಗಬೇಕು. ಇಲ್ಲ ಅಂದ್ರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ ಎಂದರು.

ಪ್ರಾಮಾಣಿಕವಾಗಿ ಕೆಲಸ ಮಾಡಿ: ನಾವು ದ್ವೇಷ ಸಾಧಿಸೋದಿಲ್ಲ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ. ಜನರ ನೆಮ್ಮದಿ ಕಾಪಾಡಿ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರ್ಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ನೀಡಿ ಎಂದು ವಾಗ್ದಾಳಿ ನಡೆಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

ಇದನ್ನೂಓದಿ:ಎಂ ಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ ಕೆ ಶಿವಕುಮಾರ್​ !

Last Updated :May 23, 2023, 8:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.