ETV Bharat / state

ಭಾಷಾತೀತ, ಜಾತ್ಯತೀತವಾಗಿ ಎಲ್ಲರೂ ಬೆಂಗಳೂರು ಬಂದ್‌ಗೆ ಬೆಂಬಲ ನೀಡಬೇಕು: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

author img

By ETV Bharat Karnataka Team

Published : Sep 25, 2023, 6:35 PM IST

Updated : Sep 25, 2023, 7:43 PM IST

Pressmeet by organizations
ಸಂಘಟನೆಗಳಿಂದ ಸುದ್ದಿಗೋಷ್ಠಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ, ನಾಳೆ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ.

ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕಾವೇರಿ ನೀರಿಗಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಭಾಷಾತೀತವಾಗಿ, ಜಾತ್ಯತೀತವಾಗಿ ಎಲ್ಲರೂ ಬಂದ್‌ಗೆ ಬೆಂಬಲ ನೀಡಬೇಕು. ಎಲ್ಲರಿಗೂ ನೀರು ಅನಿವಾರ್ಯವಾಗಿದ್ದು, ಎಲ್ಲರೂ ಬೀದಿಗಿಳಿಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದರು.

ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ ಮುಖ್ಯಮಂತ್ರಿ ಚಂದ್ರು ಹಾಗೂ ಕುರುಬೂರು ಶಾಂತಕುಮಾರ್ ಅವರ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಿರುವ ಬೆಂಗಳೂರು ಬಂದ್‌ಗೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಈ ಕುರಿತು ಫ್ರೀಡಂ ಪಾರ್ಕ್​ನಲ್ಲಿ ನಡೆದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಪಕ್ಷಾತೀತವಾಗಿ ಎಲ್ಲರೂ ಬಂದ್‌ಗೆ ಬೆಂಬಲ ನೀಡಿದ್ದಾರೆ. ನೀರು ಖಾಲಿಯಾದ ಮೇಲೆ ಹೋರಾಟ ಮಾಡಿ ಪ್ರಯೋಜನ ಇಲ್ಲ. ತಕ್ಷಣವೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು. ಅಧಿವೇಶನ ಕರೆದು ಚರ್ಚೆ ನಡೆಸಿ ಸಂಕಷ್ಟ ಸೂತ್ರ ಜಾರಿ ಮಾಡುವವರೆಗೆ ನೀರು ಬಿಡುವುದಿಲ್ಲ ಎಂದು ನಿರ್ಣಯ ತೆಗೆದುಕೊಳ್ಳಬೇಕು. ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ಪ್ರಾಧಿಕಾರದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ವಾಸ್ತವ ಅರಿಯದೇ ಆದೇಶ ಮಾಡುತ್ತಿದ್ದು, ಇವುಗಳನ್ನು ರದ್ದು ಮಾಡಿ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ ಮಂಡಳಿ ರಚಿಸಲು ಒತ್ತಾಯಿಸಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

150 ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ: ಎಪಿಎಂಸಿ ಕಾರ್ಯಕರ್ತರ ಸಂಘ, ಸಮತಾ ಸೈನಿಕ ದಳ, ಉದ್ಯಮಿಗಳ ಸಂಸ್ಥೆ, ಕರ್ನಾಟಕ ಸಾಂಸ್ಕೃತಿಕ ವೇದಿಕೆ, ವಿವಿಧ ನೌಕರರ ಸಂಘ, ಬಿಎಂಟಿಸಿ ಚಾಲಕರ ಸಂಘ, ರೈತಪರ ಸಂಘಟನೆಗಳು, ಕನ್ನಡ ಪರ ಹೋರಾಟಗಾರರ ಸಂಘಟನೆಗಳು, ಆಟೋ ಚಾಲಕರ ಸಂಘಟನೆಗಳು, ಟ್ಯಾಕ್ಸಿ ಕ್ಯಾಬ್ ಚಾಲಕರ ಸಂಘಟನೆಗಳು, ಸಾರಿಗೆ ಸಂಘಟನೆಗಳು, ಐಟಿಬಿಟಿ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಸಂಘಗಳು, ಕಲಾವಿದರ ಸಂಘಗಳು, ಹೋಟೆಲ್ ಮಾಲೀಕರ ಸಂಘಟನೆಗಳು, ರಾಜಕೀಯ ಪಕ್ಷಗಳು, ಬೆಂಗಳೂರು ರಸ್ತೆ ಬದಿ ವ್ಯಾಪಾರಿಗಳ ಸಂಘ, ಬಿಬಿಎಂಪಿ ನೌಕರರ ಸಂಘ ಸೇರಿದಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಈ ಸಂದರ್ಭದಲ್ಲಿ ಹೇಳಿದರು.

ಸೆಪ್ಟೆಂಬರ್ 26 ರಂದು ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್ ಬಳಿ ಸೇರಲಾಗುವುದು. ಅಲ್ಲಿಂದ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್‌ಗೆ ಬಂದು ಸೇರಲಾಗುವುದು. ಅಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಿಎಂ ಸಿದ್ದರಾಮಯ್ಯರಿಗೆ ಒತ್ತಾಯ ಪತ್ರ ನೀಡಲಾಗುವುದು. ಅವರು ಸರಿಯಾಗಿ ಸ್ಪಂದಿಸದಿದ್ದರೆ, ಹೋರಾಟ ತೀವ್ರಗೊಳಿಸಲಾಗುವುದು. ರಾಮನಗರ, ಮಂಡ್ಯ, ಮಳವಳ್ಳಿ, ಟಿ ನರಸೀಪುರ ಸೇರಿದಂತೆ ಹಲವು ಕಡೆಗಳಲ್ಲಿ ಬಂದ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದರು.

ಶಾಂತಿಯುತ ಬಂದ್‌ ಆಚರಿಸಲು ಮನವಿ: ಶಾಂತಿಯುತವಾಗಿ ಬಂದ್ ಆಚರಿಸಬೇಕು. ಬಂದ್ ಬೆಂಬಲಿಸುವ ಸಂಘಟನೆಗಳು ಕೂಡ ಶಾಂತ ರೀತಿಯಿಂದ ಜನರ ಮನವೊಲಿಸಿ ಬಂದ್ ಮಾಡಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಹೋರಾಟ ಹತ್ತಿಕ್ಕಲು ದುಷ್ಟಶಕ್ತಿಗಳು ಕೂಡ ಪ್ರಯತ್ನಿಸಬಹುದು. ಪೊಲೀಸರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಒತ್ತಾಯಿಸಿದರು.

ಆಮ್ ಆದ್ಮಿ ಪಾರ್ಟಿಯ ಬೆಂಗಳೂರಿನ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಬೆಂಗಳೂರಿನ ಸುತ್ತಮುತ್ತಲಿರುವ ಎಲ್ಲಾ ಜಿಲ್ಲಾ ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸುತ್ತಿದ್ದು, ಯಶಸ್ವಿಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ ಹೇಳಿದರು.

ಇದನ್ನೂ ಓದಿ : ಶಿವಮೊಗ್ಗ: ರಾಜ್ಯವನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಧರಣಿ

Last Updated :Sep 25, 2023, 7:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.