ETV Bharat / state

ಸಿಎಂ ಇಬ್ರಾಹಿಂ ಉಚ್ಚಾಟನೆಗೆ ವೇದಿಕೆ ಸಿದ್ಧವಾಗುತ್ತಿದೆಯೇ? ಕುತೂಹಲ ಮೂಡಿಸಿದ ಜೆಡಿಎಸ್ ಸಭೆ

author img

By ETV Bharat Karnataka Team

Published : Oct 19, 2023, 6:36 AM IST

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಮಾಜಿ ಸಿಎಂ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಉಚ್ಚಾಟನೆಗೆ ವೇದಿಕೆ ಸಿದ್ದವಾಗುತ್ತಿದ್ದು, ಇಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಬೆಳಿಗ್ಗೆ ಮಾಜಿ ಸಿಎಂ, ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಡೆಯಲಿದ್ದು, ಇದರ ನಡುವೆಯೇ ಕೋರ್ ಕಮಿಟಿ ಸಭೆ ಸಹ ನಡೆಯಲಿದೆ ಎಂದು ತಿಳಿದುಬಂದಿದೆ. ಸದ್ಯದ ಬೆಳವಣಿಗೆಗಳ ಕುರಿತು ನಾಯಕರು ಈ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

ಸದ್ಯ ಪಕ್ಷದಲ್ಲಿ 19 ಶಾಸಕರು, 8 ಮಂದಿ ವಿಧಾನಪರಿಷತ್ ಸದಸ್ಯರಿದ್ದು, ಇದರಲ್ಲಿ ಮರಿತಿಬ್ಬೇಗೌಡ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಹೊರತುಪಡಿಸಿದರೆ ಉಭಯ ಸದನಗಳಲ್ಲಿ 26 ಜೆಡಿಎಸ್ ಸಂಖ್ಯಾ ಬಲ ಇದೆ. ಜೆಡಿಎಸ್​ನಲ್ಲಿರುವ ಶಾಸಕರ ಪೈಕಿ ಮೂರನೇ ಎರಡು ಭಾಗದಷ್ಟು ಶಾಸಕ ಬಲವನ್ನು ತೋರಿಸಿ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನನ್ನದೇ ಒರಿಜಿನಲ್ ಜೆಡಿಎಸ್ ಎಂದಿರುವ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ‌ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಿಡಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಸಿ ಎಂ ಇಬ್ರಾಹಿಂ ಆಟಕ್ಕೆ ಪೂರ್ಣ ವಿರಾಮ ಹಾಕಲು ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕುಮಾರಸ್ವಾಮಿಗೆ ಇಬ್ರಾಹಿಂ ಸವಾಲ್‌: ನಮ್ಮದೇ ಒರಿಜಿನಲ್ ಜಾತ್ಯತೀತ ಜನತಾದಳ. ನಾನೇ ಅದರ ಅಧ್ಯಕ್ಷ. ಇದು ನನ್ನ ಮನೆ. ಮುಂದೇನಾಗುತ್ತದೆ ಎಂಬುದನ್ನು ಪರದೆ ಮೇಲೆ ನೋಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ ಇಬ್ರಾಹಿಂ 'ದಳ'ಪತಿಗಳಿಗೆ ಖಡಕ್ (ಅಕ್ಟೋಬರ್ 16-2023) ಸಂದೇಶ ರವಾನಿಸಿದ್ದರು.

ನಗರದ ನಾಗವಾರ ಮುಖ್ಯ ರಸ್ತೆಯಲ್ಲಿರುವ ಸಿಎಂಎ ಕಲ್ಯಾಣ ಮಂಟಪದಲ್ಲಿ ಅಂದು ಆಯೋಜಿಸಿದ್ದ 'ಜೆಡಿಎಸ್ ಚಿಂತನ ಮಂಥನ' ಸಭೆಯಲ್ಲಿ ಮಾತನಾಡಿದ್ದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ‌ ತೆಗೆಯಲು ಸಾಧ್ಯವಿಲ್ಲ. ಅದಕ್ಕೆ ಸಭೆ ನಡೆಸಿ ತೀರ್ಮಾನ ಮಾಡಬೇಕು. ನಿತೀಶ್ ಕುಮಾರ್, ಶರದ್ ಪವಾರ್ ಸೇರಿದಂತೆ ಕಾಂಗ್ರೆಸ್ ನಾಯಕರೂ ನನ್ನ ಜೊತೆ ಮಾತನಾಡಿದ್ದಾರೆ ಎಂದಿದ್ದರು.

ಹೊಸ ಕೋರ್ ಕಮಿಟಿ ರಚನೆ: ಈ ಸಭೆಯ‌ ಚರ್ಚೆಯನ್ನು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರಿಗೆ ತಿಳಿಸುತ್ತೇನೆ. ಹೊಸ ಕೋರ್ ಕಮಿಟಿ ರಚನೆ ಮಾಡುತ್ತೇನೆ. ಅದರ ಸಭೆ ಕರೆಯುತ್ತೇನೆ. ಅಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಜಿಲ್ಲಾ ಪ್ರವಾಸ ಮಾಡುತ್ತೇನೆ. ನಂತರ ಮುಂದಿನ ತೀರ್ಮಾನ ಎಂದಿದ್ದರು.

ಹೆಚ್. ಡಿ ಕುಮಾರಸ್ವಾಮಿ ಅವರು ಯಾರ ಅಭಿಪ್ರಾಯವನ್ನೂ ಕೇಳದೆ ಏಕಾಏಕಿ ದೆಹಲಿಗೆ ಹೋಗಿ ಅಮಿತ್ ಶಾ ಜೊತೆಗೆ ಫೋಟೋ ತೆಗೆಸಿಕೊಂಡು ಮೈತ್ರಿ ಘೋಷಣೆ ಮಾಡಿದ್ದಾರೆ.‌ ಜೆಡಿಎಸ್ ಪ್ರಜಾಪ್ರಭುತ್ವ ‌ಹಾಗೂ‌ ಜಾತ್ಯಾತೀತದಲ್ಲಿ ನಂಬಿಕೆ ಇಟ್ಟ ಪಕ್ಷ.‌ ನಾವು ಅಲ್ಲಿ‌ ಹೋಗೋದು‌ ಅಲ್ಲ‌, ಅವರು ಇಲ್ಲಿ ಬರಲಿ‌ ಎಂದಿದ್ದೆ. ಬಿಜೆಪಿಯವರು ಎನ್​ಆರ್​ಸಿ, ಮುಸ್ಲಿಂ ಪರ್ಸನಲ್‌ ಲಾಗೆ ಕೈ ಹಾಕಲ್ಲ ಎಂದು ಭರವಸೆ ಕೊಡ್ತಾರಾ ಎಂದು ಪ್ರಶ್ನಿಸಿದ್ದೆ ಎಂದು ತಿಳಿಸಿದರು.

ಇದನ್ನೂ ಓದಿ: ನಮ್ಮದೇ ಒರಿಜಿನಲ್ ಜಾತ್ಯತೀತ ಜನತಾ ದಳ, ನಾನೇ ಅದರ ಅಧ್ಯಕ್ಷ, ಎನ್‌ಡಿಎ ಸೇರಲ್ಲ: ಹೆಚ್‌.ಡಿ.ಕುಮಾರಸ್ವಾಮಿಗೆ ಸಿ.ಎಂ.ಇಬ್ರಾಹಿಂ ಸವಾಲ್‌!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.