ETV Bharat / state

ನಮ್ಮ ದೇಶದಲ್ಲಿ ಹುಟ್ಟಿದ ಜೈನ ಧರ್ಮ ಜಗತ್ತಿಗೆ ಶಾಂತಿಯ ಸಂದೇಶ ನೀಡುತ್ತಿದೆ: ಗೃಹ ಸಚಿವ ಪರಮೇಶ್ವರ್

author img

By

Published : Jun 18, 2023, 7:36 AM IST

Updated : Jun 18, 2023, 8:10 AM IST

home minister g parameshwar
ಗೃಹ ಸಚಿವ ಪರಮೇಶ್ವರ್

ಕನ್ನಡ ಸಾಹಿತ್ಯ ಪರಿಷತ್ ನೀಡುವ 2023ನೇ ಸಾಲಿನ ಚಾವುಂಡರಾಯ ಪ್ರಶಸ್ತಿಯನ್ನು ಪ್ರೊ. ಕೆ.ಇ.ರಾಧಾಕೃಷ್ಣ ಅವರಿಗೆ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜೈನ ಧರ್ಮದ ಕುರಿತು ಮಾತನಾಡಿದರು.

ಬೆಂಗಳೂರು: "ನಮ್ಮ ದೇಶ ನಾಲ್ಕು ಧರ್ಮಗಳ ಹುಟ್ಟು ಕಂಡಿದೆ. ಹಿಂದೂ, ಬೌದ್ಧ, ಜೈನ ಹಾಗೂ ಸಿಖ್ ಧರ್ಮಗಳು ಜನಿಸಿದ್ದು ಭಾರತದಲ್ಲಿಯೇ. ವಿಶ್ವಕ್ಕೆ ಈ ನಾಲ್ಕು ಧರ್ಮಗಳು ವಿಶೇಷ ಸಂದೇಶ ನೀಡುತ್ತಿವೆ. ಜೈನ ಧರ್ಮ ನೀಡಿರುವ ಶಾಂತಿಯ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ" ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಶನಿವಾರ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್​ ಮಂದಿರದಲ್ಲಿ ನಾಡಿನ ಬಹುಶ್ರುತ ವಿದ್ವಾಂಸ ಪ್ರೊ.ಕೆ.ಇ.ರಾಧಾಕೃಷ್ಣ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2023ನೇ ಸಾಲಿನ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಸಚಿವರು, "ಧರ್ಮದ ಕುರಿತಾದ ಅಧ್ಯಯನ ನಮ್ಮಲ್ಲಿ ಕೇವಲ ಅಕಾಡೆಮಿಕ್ ನೆಲೆಯಲ್ಲಿ ನಡೆಯುತ್ತಿದೆಯೇ ಹೊರತು ಅದರ ಅಂತಃಸತ್ವ ಹಿಡಿಯುವ ಕೆಲಸವಾಗುತ್ತಿಲ್ಲ. ಪ್ರೊ.ಕೆ.ಇ.ರಾಧಾಕೃಷ್ಣ ಇಂತಹ ಮಹತ್ವದ ಕೆಲಸವನ್ನು ಮಾಡಿದ್ದಾರೆ" ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

"ಜೈನ ಧರ್ಮ ನಮ್ಮ ದೇಶದಲ್ಲಿ ಹುಟ್ಟಿಕೊಂಡು ಪ್ರಪಂಚಕ್ಕೆ ಶಾಂತಿಯ ಸಂದೇಶವನ್ನು ನೀಡುತ್ತಾ ಬಂದಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಯೋಗ್ಯರನ್ನು ಹುಡುಕಿ ಗೌರವಿಸುವ ಕಾರ್ಯ ಮಾಡುತ್ತಿರುವ ಪರಿಷತ್ತಿನ ಬಗ್ಗೆ ಬಹಳ ಹೆಮ್ಮೆ ಇದೆ" ಎಂದರು.

"ಕನ್ನಡ ಸಾಹಿತ್ಯ ಪರಿಷತ್ತನ್ನು ನಾನು ಹಿಂದಿನಿಂದಲೂ ಗಮನಿಸುತ್ತಾ ಬಂದಿದ್ದೇನೆ. ಹಿಂದೆ ಇದ್ದಂತೆ ಈಗ ಇಲ್ಲ, ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿವೆ. ಪರಿಷತ್ತಿನಲ್ಲಿ ಆಮೂಲಾಗ್ರ ಬದಲಾವಣೆ ಬಂದಿದೆ. ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿಗಾಗಿ ಕೆಲಸ ಮಾಡುತ್ತಾ ಬಂದಿರುವ ಪರಿಷತ್ತು, ಈಗ ನವ ನವೀನವಾಗಿ ಕಂಗೊಳಿಸುತ್ತಿದೆ. ನಮ್ಮ ಕೆಲಸ ಕಾರ್ಯದಲ್ಲಿಯೂ ಅರ್ಥಪೂರ್ಣತೆ ತೋರಿಸುತ್ತಿರುವುದು ಗಮನಾರ್ಹ. ಪರಿಷತ್ತಿನ ಜವಾಬ್ದಾರಿ ವಹಿಸಿದ ನಾಡೋಜ ಡಾ. ಮಹೇಶ್​ ಜೋಶಿ ಅವರ ಸೇವಾ ತತ್ಪರತೆ ಎದ್ದು ಕಾಣುತ್ತದೆ. ಪರಿಷತ್ತಿನಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ಕನ್ನಡವನ್ನು ಉಳಿಸಿ ಬೆಳಸುವುದಕ್ಕೆ ತನ್ನನ್ನು ತೊಡಗಿಸಿಕೊಂಡ ಪರಿಷತ್ತು ಹೊಸ ಅವಿಷ್ಕಾರ ಹಾಗೂ ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡಿರುವುದು ಸ್ವಾಗತಾರ್ಹ" ಎಂದು ಡಾ.ಜಿ. ಪರಮೇಶ್ವರ ಸಂತಸಪಟ್ಟರು.

ಕನ್ನಡ ಸಾಹಿತ್ಯ ಆರಂಭವಾಗಿದ್ದೇ ಜೈನ ಬರಹಗಾರರಿಂದ ಎಂದು ಹೇಳಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ, "ಜೈನರ ಕಾವ್ಯದ ಶರಣರ ವಚನದ ದಾಸರ ಹಾಡಿನ ಈ ನಾಡು" ಎಂಬ ಅಂಬಿಕಾತನಯದತ್ತರ ಕವಿವಾಣಿಯನ್ನು ಪ್ರಾಸಂಗಿಕವಾಗಿ ನೆನಪು ಮಾಡಿಕೊಂಡರು.

"ಕನ್ನಡ ಸರಸ್ವತ ಲೋಕಕ್ಕೆ ಜೈನರ ಕೊಡುಗೆ ಅಪಾರ. 10ನೇ ಶತಮಾನದಲ್ಲಿಯೇ ಕನ್ನಡ ಸಾಹಿತ್ಯ ಲೋಕವನ್ನು ಉತ್ತುಂಗಕ್ಕೆ ಏರಿಸಿದವರು ಇವರು. ಕನ್ನಡ ಸಾಹಿತ್ಯ ಪರಿಷತ್ತು ಜೈನರ ಕೊಡುಗೆಗಳನ್ನು ನಿತ್ಯವೂ ಸ್ಮರಿಸಿಕೊಳ್ಳುತ್ತದೆ. ಪರಿಷತ್ತಿನ ಮುಂಭಾಗದಲ್ಲಿ ಇರುವ ಪಂಪ ಮಹಾಕವಿ ರಸ್ತೆಯಲ್ಲಿ ಪಂಪನ ಪುತ್ಥಳಿ ಇರಲಿಲ್ಲ. ಅದಕ್ಕೆ ಪರಿಷತ್ತು ಪಂಪನ ಪುತ್ಥಳಿಯನ್ನು ಸ್ಥಾಪಿಸಿ ಜೊತೆಗೆ ʻಮನುಷ್ಯ ಜಾತಿ ತಾನೊಂದೆ ವಲಂʼ ಎಂಬ ವಿಶ್ವ ಮಾನವ ಸಂದೇಶದ ಧ್ಯೇಯವಾಕ್ಯವನ್ನು ಗೌರವಪೂರ್ವಕವಾಗಿ ಬಳಸಿಕೊಳ್ಳಲಿದೆ, ಈ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ" ಎಂದು ತಿಳಿಸಿದರು.

"ಚಾವುಂಡರಾಯ 10ನೇ ಶತಮಾನಕ್ಕೆ ಸೇರಿದ ಜೈನ ಕವಿ ಮತ್ತು ಮಹಾಯೋಧ. ಕನ್ನಡ, ಜೈನ ಸಾಹಿತ್ಯ ರಚನೆಕಾರನಾಗಿ ಹಾಗೂ ಅನೇಕ ಕವಿಗಳಿಗೆ ಪೋಷಕನಾಗಿ, ದಾನ-ಧರ್ಮಗಳಿಗೆ ಹೆಸರುವಾಸಿಯಾಗಿ ಮೆರೆದವರು. ‘ಚಾವುಂಡರಾಯ ಪುರಾಣ’ ಎಂದು ವಾಡಿಕೆಯಾಗಿ ಹೇಳುವ ‘ತ್ರಿಷಷ್ಟಿ ಲಕ್ಷಣ ಮಹಾ ಪುರಾಣ’ ಎಂಬ ಮಹಾಪುರಾಣ ರಚಿಸಿದವನು. ಕನ್ನಡ ನಾಡಿನ ಪ್ರಸಿದ್ಧ ಜೈನಕ್ಷೇತ್ರ ಶ್ರವಣಬೆಳಗೊಳದಲ್ಲಿ ಭಕ್ತಿ, ಜ್ಞಾನ, ವೈರಾಗ್ಯಮೂರ್ತಿ ‘ಗೊಮ್ಮಟೇಶ್ವರ’ ಎಂದು ಕರೆಯುವ ಬಾಹುಬಲಿ ಸ್ವಾಮಿಯ ಮಹೋನ್ನತ ಶಿಲಾಮೂರ್ತಿಯನ್ನು ಪ್ರತಿಷ್ಠಾಪಿಸಿದ ಧೀಮಂತ ವ್ಯಕ್ತಿ ಚಾವುಂಡರಾಯ" ಎಂದು ಬಣ್ಣಿಸಿದರು.

"ಚಾವುಂಡರಾಯನು ಸ್ವತಃ ಕವಿಯಾಗಿದುದ್ದಲ್ಲದೇ ಕವಿಜನ ಪೋಷಕನೂ ಆಗಿದ್ದನು. ರನ್ನ ಮಹಾಕವಿಯು ಅವರ ಆಶ್ರಯದಲ್ಲಿ ಇದ್ದು, ಅಜಿತಸೇನಾಚಾರ್ಯರ ಬಳಿ ವಿದ್ಯಾಭ್ಯಾಸ ಮಾಡಿದ್ದನು. ಅದರ ಪರಿಣಾಮವೇ ರನ್ನ ತನ್ನ ‘ಅಜಿತ ಪುರಾಣ’ದಲ್ಲಿ ಚಾವುಂಡರಾಯನ ಶೌರ್ಯ, ಔದಾರ್ಯಗಳನ್ನು ವರ್ಣಿಸಿದ್ದಾನೆ" ಎಂದು ಸ್ಮರಿಸಿದರು.

ಇದನ್ನೂ ಓದಿ : ಜೈನರದ್ದು ಅತ್ಯಂತ ಪವಿತ್ರವಾದ ಧರ್ಮ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಐ. ಅರುಣ್ ಮಾತನಾಡಿ, "ಕನ್ನಡ ಸಾಹಿತ್ಯಕ್ಕೆ ಜೈನರ ಕೊಡುಗೆ ಅರ್ಥಪೂರ್ಣವಾಗಿದೆ. ಪಂಪ, ರನ್ನನ ಕಾಲವನ್ನು ನಮ್ಮ ನಾಡಿನ ಸಾಹಿತ್ಯದ ಸುವರ್ಣಯುಗ ಎಂದು ಕರೆಯುತ್ತಿದ್ದರು. ಪ್ರಪಂಚಕ್ಕೆ ಜೈನ ಮತವು ಏಕ ರೂಪತೆಯ ನಡತೆಯನ್ನು ತೋರಿಸಿಕೊಟ್ಟಿದೆ. ಆದರೆ, ನಮ್ಮ ಪಠ್ಯದಲ್ಲಿ ಮಕ್ಕಳಿಗೆ ಇಂತಹ ಮಹತ್ವದ ಸಂಗತಿಗಳು ಇಲ್ಲದಿರುವುದು ವಿಷಾದನೀಯ" ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಮಾತನಾಡಿ, "ಬೆಂಗಳೂರಿನಲ್ಲಿ ಇಂದು ಶೇ. 60ರಷ್ಟು ಜನರು ಕನ್ನಡ ಬಾರದವರಿದ್ದಾರೆ. ಇನ್ನೂ ಶೇ.40 ರಷ್ಟು ಜನರಿಗೆ ಕನ್ನಡ ಬಂದರೂ ಬೇರೆ ಭಾಷೆಯನ್ನು ಸೇರಿಸಿಯೇ ಕನ್ನಡವನ್ನು ಮಾತನಾಡುತ್ತಿದ್ದಾರೆ. ನಾವು ಕನ್ನಡ ನಾಡಿನಲ್ಲಿ ಭಾಷೆ ಸಂಸ್ಕೃತಿ, ಕಲೆ, ಸಾಹಿತ್ಯ ಬೆಳೆಸುವ ಕೆಲಸ ಮಾಡಬೇಕಿದೆ. ಸರ್ಕಾರವು ನನಗೆ ಕನ್ನಡ ನಾಡಿನ ನೆಲ, ಮೂಲವನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ನೀಡಿದೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಸರ್ಕಾರ ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡಲಿದೆ" ಎಂದು ತಿಳಿಸಿದರು.

ಇದನ್ನೂ ಓದಿ : ಜೈನ ಧರ್ಮ ಪಾಲಿಸಿದ್ದರೆ ಜಗತ್ತಿನಲ್ಲಿ ಹಿಂಸೆಯೇ ಇರುತ್ತಿರಲಿಲ್ಲ: ಸಿಎಂ ಬೊಮ್ಮಾಯಿ

2023ನೇ ಸಾಲಿನ ಚಾವುಂಡರಾಯ ಪ್ರಶಸ್ತಿ ಸ್ವೀಕರಿಸಿದ ವಿದ್ವಾಂಸ ಪ್ರೊ.ಕೆ.ಇ.ರಾಧಾಕೃಷ್ಣ ಮಾತನಾಡಿ, "ಭಾಷೆಗೊಂದು ಮನೋಧರ್ಮವಿರುತ್ತದೆ. ಆ ಮನೋಧರ್ಮದ ಮೂಲಕವೇ ಜ್ಞಾನದ ಬೆಳವಣಿಗೆಯಾಗುವುದು, ಜ್ಞಾನಕ್ಕೂ ಜೀವನಕ್ಕೂ ಅವಿನಾಭಾವ ಪವಿತ್ರ ಸಂಬಂಧವಿದೆ. ನಮ್ಮ ಮೂಲ ಭಾಷೆ ಸಂಸ್ಕೃತದಲ್ಲಿ ಇದೆಲ್ಲವೂ ಇದೆ. ಆದರೆ, ಸಾಮಾನ್ಯರಿಂದ ಸಂಸ್ಕೃತವನ್ನು ದೂರ ಮಾಡಿರುವುದು ನಮ್ಮತನವನ್ನು ಅರಿಯಲು ಸಾಧ್ಯವಾಗದೇ ಇರುವುದಕ್ಕೆ ಮೂಲ ಕಾರಣವಾಗಿದೆ. ಶಂಕರ ಭಗವತ್ಪಾದರು ಆತ್ಮ ಎನ್ನುವ ಶಬ್ಧಕ್ಕೆ ಅವರ ರೀತಿಯಲ್ಲಿ ಅದ್ಭುತವಾಗಿ ವಾಖ್ಯಾನ ಮಾಡಿದ್ದರು. ಆದರೆ, ಅದರ ತತ್ವಾರ್ಥವನ್ನು ಅರಿತುಕೊಳ್ಳಲು ಜೈನ ಗ್ರಂಥಗಳು ಸಹಾಯ ಮಾಡುತ್ತವೆ" ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಜೈನ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್​, ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಡಾ. ಬಿ.ಎಂ.ಪಟೇಲ್ ಪಾಂಡ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ವಂದಿಸಿದರು.

Last Updated :Jun 18, 2023, 8:10 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.