ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ: ಚೇತನ್​ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

author img

By

Published : Nov 23, 2022, 8:39 PM IST

kantara-film-isuue-high-court-refused-to-quash-chetan-case

ಪ್ರಕರಣವಿನ್ನೂ ತನಿಖಾ ಹಂತದಲ್ಲಿದೆ. ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪುಗಳನ್ನು ಆಧರಿಸಿ ನಟ ಚೇತನ್​ ಅವರ ಅರ್ಜಿಯನ್ನು ಹೈಕೋರ್ಟ್​ವಜಾಗೊಳಿಸಿದೆ.

ಬೆಂಗಳೂರು : ಅತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಕನ್ನಡ ಚಲನಚಿತ್ರ ಕಾಂತಾರದಲ್ಲಿ ತೋರಿಸಲಾಗಿರುವ ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಲ್ಲಿ ನಟ ಚೇತನ್ ವಿರುದ್ಧ ದಾಖಲಾಗಿರುವ ಎಫ್​ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪರಿಣಾಮ ಚೇತನ್ ವಿಚಾರಣೆ ಎದುರಿಸಲೇಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ನಗರದ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ನಟ ಚೇತನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಪೀಠ, ಪ್ರಕರಣವಿನ್ನೂ ತನಿಖಾ ಹಂತದಲ್ಲಿದೆ. ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪುಗಳನ್ನು ಆಧರಿಸಿ ಅರ್ಜಿ ವಜಾಗೊಳಿಸಿದೆ.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ನಟರೂ ಆಗಿರುವ ಅರ್ಜಿದಾರರು ತಮ್ಮ ಅಭಿಪ್ರಾಯವನ್ನಷ್ಟೇ ಹಂಚಿಕೊಂಡಿದ್ದಾರೆ. ಇದರಿಂದ, ಯಾರಿಗೂ ತೊಂದರೆಯಾಗಿಲ್ಲ, ಸಮಾಜದಲ್ಲಿ ಅಶಾಂತಿಯೂ ಉದ್ಭವಿಸಿಲ್ಲ. ಹೀಗಿದ್ದರೂ, ಅವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದ್ದು ಅದನ್ನು ರದ್ದುಗೊಳಿಸಬೇಕೆಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಸರ್ಕಾರದ ಪರ ವಕೀಲರು, ಅರ್ಜಿದಾರರು ಉದ್ದೇಶಪೂರ್ವಕವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜತೆಗೆ ಪೊಲೀಸರು ಇನ್ನೂ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ತನಿಖಾ ಹಂತದಲ್ಲಿರುವ ಪ್ರಕರಣದ ರದ್ದುಗೊಳಿಸಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: ಹಿಂದೂ ಜಾಗರಣ ವೇದಿಕೆ‌ಯಿಂದ ನಟ ಚೇತನ್ ವಿರುದ್ಧ ದೂರು ದಾಖಲು

ಪ್ರಕರಣದ ಹಿನ್ನೆಲೆ ಏನು?: ಕಾಂತಾರ ಚಿತ್ರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದ ನಟ ಚೇತನ್, ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ಚಿತ್ರದಲ್ಲಿ ತೋರಿಸಲಾಗಿದೆ. ಆದರೆ, ಇದು ನಿಜವಲ್ಲ. ನಮ್ಮ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ಕೇಳಿಕೊಳ್ಳುತ್ತೇವೆ ಎಂದಿದ್ದರು.

ಈ ಸಂಬಂಧ ಬಜರಂಗದ ದಳ ಕಾರ್ಯಕರ್ತ ಶಿವಕುಮಾರ್ ಎಂಬುವರು ಅಕ್ಟೋಬರ್​ 22ರಂದು ಶೇಷಾದ್ರಿಪುರ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನಲ್ಲಿ ನಟ ಚೇತನ್ ಅವರು ಕಾಂತಾರ ಚಿತ್ರದಲ್ಲಿ ಮೂಡಿ ಬಂದಿರುವ ಹಿಂದೂ ಸಂಪ್ರದಾಯಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಹಾಗೂ ಜಾತಿಗಳ ನಡುವೆ ವಿಷ ಬೀಜ ಬಿತ್ತಿ, ಕೋಮು ಗಲಭೆಗಳಿಗೆ ಪ್ರಚೋದನೆ ನೀಡಿದ್ದಾರೆ. ಆದ್ದರಿಂದ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿದ್ದರು. ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 505(2) ಅಡಿಯಲ್ಲಿ ಎಫ್​​ಐಆರ್ ದಾಖಲಿಸಿಕೊಂಡಿರುವ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಭೂತಕೋಲ ಆಚರಣೆ ಬಗ್ಗೆ ವಿವಾದಾತ್ಮಕ ಹೇಳಿಕೆ.. ಬೆಂಗಳೂರಲ್ಲಿ ನಟ ಚೇತನ್ ವಿರುದ್ಧ ಎಫ್​ಐಆರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.