ETV Bharat / state

ದೇಶದಲ್ಲಿ ಬಿಜೆಪಿ, ಮೋದಿ ಪರ ಅಲೆ, 28 ಲೋಕಸಭೆ ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿ ವೈ ವಿಜಯೇಂದ್ರ

author img

By ETV Bharat Karnataka Team

Published : Dec 3, 2023, 4:28 PM IST

ಬಿ ವೈ ವಿಜಯೇಂದ್ರ
ಬಿ ವೈ ವಿಜಯೇಂದ್ರ

B Y Vijayendra visits Delhi: ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದ ಮತದಾರರು ಕೂಡ ಬಿಜೆಪಿ ಕೈಹಿಡಿಯಲಿದ್ದಾರೆ. ತೆಲಂಗಾಣದಲ್ಲಿದ್ದ ಆಡಳಿತ ವಿರೋಧಿ ಅಲೆಯ ಪ್ರಯೋಜನ ಪಡೆಯಲು ಕಾರಣಾಂತರಗಳಿಂದ ಬಿಜೆಪಿಗೆ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ನವದೆಹಲಿ/ಬೆಂಗಳೂರು: ಇಡೀ ದೇಶದಲ್ಲಿ ವಾತಾವರಣವು ಬಿಜೆಪಿ ಪರವಾಗಿದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ- ಎನ್‍ಡಿಎ ಭಾಗೀದಾರ ಜೆಡಿಎಸ್‍ ಪಕ್ಷವು ಒಟ್ಟಾಗಿ ಚುನಾವಣೆ ಎದುರಿಸಲಿವೆ. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲಿಯೂ ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿರುವ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದರು. ರಾಜ್ಯ ರಾಜಕೀಯ ವಿಚಾರದ ಕುರಿತು ಮಾತುಕತೆ ನಡೆಸಿದರು. ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ, ಕೆಲಕಾಲ ಸಮಾಲೋಚನೆ ನಡೆಸಿದರು.

karnataka-bjp-president-vijayendra-meets-jp-nadda
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ವಿಜಯೇಂದ್ರ

ಕೇಂದ್ರ ನಾಯಕರ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿದೆ ಎಂಬುದು ಇಂದಿನ ಫಲಿತಾಂಶದಿಂದ ಗೊತ್ತಾಗಿದೆ. ಪಂಚರಾಜ್ಯ ಚುನಾವಣೆ ಒಂದು ರೀತಿಯ ಸೆಮಿಫೈನಲ್ ಎಂದು ವಿಶ್ಲೇಷಿಸಲಾಗುತ್ತಿತ್ತು. ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು.

ಜನತೆ ದೇಶ ರಕ್ಷಣೆಯ ಗ್ಯಾರಂಟಿ ಬಯಸಿದ್ದಾರೆ: ವಿಜಯ ಯಾತ್ರೆ ಇಲ್ಲಿಗೇ ನಿಲ್ಲುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಜನರು ದೇಶ ರಕ್ಷಣೆಯ ಗ್ಯಾರಂಟಿ ಬಯಸುತ್ತಿದ್ದಾರೆಯೇ ಹೊರತು, ಅಧಿಕಾರ ಕಬಳಿಸುವ ಆಮಿಷದ ಗ್ಯಾರಂಟಿಗಳನ್ನಲ್ಲ ಎಂಬುದು ಈ ಫಲಿತಾಂಶದ ಮೂಲಕ ಸ್ಪಷ್ಟವಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೂ ಕೂಡ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿಗಳೆಂಬ ಆಮಿಷದ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಈಗಾಗಲೇ ರಾಜ್ಯದ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ. 6 ತಿಂಗಳುಗಳಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ಯಾವ ದಿಕ್ಕಿನಲ್ಲಿ ಸಾಗುತ್ತಿದೆ, ಅಭಿವೃದ್ಧಿ ಕೆಲಸಗಳು ಯಾವ ರೀತಿ ಕುಂಠಿತವಾಗಿವೆ, ರೈತರು ಯಾವ ರೀತಿಯಲ್ಲಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂಬುದನ್ನು ಗಮನಿಸಿದ ರಾಜ್ಯದ ಜನತೆ ಬೇಸತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಜಯಭೇರಿ ಹಿಂದೆ ರಾಜ್ಯ ಕೈ ನಾಯಕರ ತಂತ್ರಗಾರಿಕೆ: ಹೈದರಾಬಾದ್​​ನಲ್ಲೇ ಬೀಡುಬಿಟ್ಟ ಡಿಸಿಎಂ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​​ಗಡ ರಾಜ್ಯಗಳ ಫಲಿತಾಂಶ ಬಿಜೆಪಿ ಪರವಾಗಿ ಬಂದಿದೆ. ಮೋದಿ ಅವರ ನಾಯಕತ್ವ ಈ ದೇಶಕ್ಕೆ ಅಗತ್ಯ ಇದೆ. 3ನೇ ಬಾರಿಗೆ ಪ್ರಧಾನಮಂತ್ರಿ ಆಗುವ ಮೂಲಕ ಅಭಿವೃದ್ಧಿ ಪಥದಲ್ಲಿ ಈ ದೇಶ ಸಾಗಬೇಕೆಂಬ ಸಂದೇಶವನ್ನು ಮತದಾರರು ನೀಡಿದ್ದಾರೆ ಎಂದ ವಿಜಯೇಂದ್ರ, ತೆಲಂಗಾಣ ವಿಧಾನಸಭೆ ಚುನಾವಣೆ ವಿಚಾರದಲ್ಲಿ ಬಿಜೆಪಿಗೆ ಬಹಳ ನಿರೀಕ್ಷೆ ಇರಲಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕದಿಂದ ಎಷ್ಟು ಹಣ ತೆಲಂಗಾಣಕ್ಕೆ ವರ್ಗಾವಣೆ ಆಗಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಖಂಡರೇ ಹೇಳಬೇಕಿದೆ. ಕರ್ನಾಟಕದಲ್ಲಿ ಆದ ಆದಾಯ ತೆರಿಗೆ ದಾಳಿ, ನೂರಾರು ಕೋಟಿ ಹಣ ಲಭಿಸಿದ್ದು ಇದಕ್ಕೆ ಸಾಕ್ಷಿ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟವಾಗಿ ಮೇಲುಗೈ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 'ಈ ದೇಶವನ್ನು ಆಳುವ ನಾಯಕತ್ವ ಬಿಜೆಪಿ ಬಿಟ್ಟು ಬೇರೆ ಪಕ್ಷಗಳಲ್ಲಿಲ್ಲ ': ಬಿಎಸ್​ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.