ETV Bharat / state

ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ: ನ್ಯಾ.ಭಕ್ತವತ್ಸಲ ಆಯೋಗ ವರದಿ ಜಾರಿಗೆ ಸಂಪುಟ ಸಮ್ಮತಿ

author img

By

Published : Aug 12, 2022, 6:31 PM IST

Updated : Aug 13, 2022, 4:01 PM IST

ಚುನಾವಣಾ ಪ್ರಾತಿನಿಧ್ಯ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಮತ್ತು ಈಗ ನ್ಯಾ. ಭಕ್ತವತ್ಸಲ ಆಯೋಗದ ವರದಿಯಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದರು.

karnataka-cabinet-accepts-the-bhaktavatsalam-committee-report
ಹಿಂದುಳಿದ ವರ್ಗಗಳಿಗೆ ಚುನಾವಣಾ ಪ್ರಾತಿನಿಧ್ಯ: ನ್ಯಾ.ಭಕ್ತವತ್ಸಲ ಆಯೋಗದ ವರದಿ ಜಾರಿಗೆ ಸಂಪುಟ ಸಭೆ ಸಮ್ಮತಿ

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ರಚಿಸಿರುವ ನ್ಯಾ.ಡಾ.ಕೆ.ಭಕ್ತವತ್ಸಲ ನೇತೃತ್ವದ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಶಿಫಾರಸ್ಸು ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ನೀಡಿರುವ ವರದಿಯನ್ನು ಯಥಾವತ್ತಾಗಿ ಒಪ್ಪಿಕೊಳ್ಳುವ ತೀರ್ಮಾನವನ್ನು ಮಾಡಲಾಗಿದೆ ಎಂದರು.

ಇದರ ಜೊತೆಗೆ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಒಪ್ಪಿಗೆ ನೀಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ ಈಗ ನ್ಯಾ. ಭಕ್ತವತ್ಸಲ ಆಯೋಗದ ವರದಿಯಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಮುಂದಿನ ಚುನಾವಣೆ ವೇಳೆಗೆ ಎಲ್ಲ ದತ್ತಾಂಶಗಳನ್ನು ಇಟ್ಟುಕೊಂಡು ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ತೀರ್ಮಾನಗಳನ್ನು ಸರ್ಕಾರ ಸುಪ್ರೀಂಕೋರ್ಟ್ ಸೂಚನೆಯಂತೆ ಅನುಷ್ಠಾನಗೊಳಿಸುತ್ತದೆ ಎಂದು ಹೇಳಿದರು.

ನೂತನ ಏರೋಸ್ಪೇಸ್ ನೀತಿ : ರಾಜ್ಯದಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಹೆಚ್ಚು ಒತ್ತು ನೀಡಿ ರಫ್ತಿಗೆ ಉತ್ತೇಜನ ನೀಡಲು ಮುಂದಿನ 5 ವರ್ಷಗಳಿಗೆ ಏರೋಸ್ಪೇಸ್ ನೀತಿಗೆ ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕವನ್ನು ಏರೋಸ್ಪೇಸ್ ಉದ್ಯಮದ ಹಬ್ ಮಾಡಲು ಈ ನೀತಿ ಸಹಕಾರಿಯಾಗಲಿದೆ.

ಈ ನೀತಿಯಡಿ ಏರೋಸ್ಪೇಸ್ ಉದ್ಯಮಕ್ಕೆ ಹೆಚ್ಚುವರಿಯಾಗಿ ಶೇ. 5ರಷ್ಟು ಸಬ್ಸಿಡಿ ನೀಡಲಾಗುತ್ತದೆ. 10 ಕಾಲೇಜುಗಳಲ್ಲಿ 200 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಈ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಸಹ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಕರ್ನಾಟಕ ರಾಜ್ಯ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ನಿಯಮಗಳು 2020-22ಕ್ಕೂ ತಿದ್ದುಪಡಿ ಮಾಡಲಾಗಿದೆ. ಇದರ ಪ್ರಕಾರ, ಇನ್ನು ಮುಂದೆ ಬಾಲಾಪರಾಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಮೊದಲು ವಿಚಾರಣೆಗೆ ಒಳಪಡಿಸಲಿದೆ ಎಂದು ಮಾಹಿತಿ ನೀಡಿದರು.

ನಂಜುಂಡಪ್ಪ ಯೋಜನೆ ಅನುಷ್ಠಾನ : ಡಾ.ಡಿ.ಎಂ.ನಂಜುಂಡಪ್ಪ ಸಮಿತಿ ವರದಿಯ ಶಿಫಾರಸಿನಂತೆ ಪ್ರಾದೇಶಿಕ ಅಸಮತೋಲನ ನಿವಾರಿಸಲು ಹೊಸ ಅಭಿವೃದ್ಧಿ ಆಕಾಂಕ್ಷಿತ ತಾಲೂಕುಗಳ ಯೋಜನೆಯನ್ನು ಅನುಷ್ಠಾನಗೊಳಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ. 102 ಅತಿ ಹಿಂದುಳಿದ ತಾಲೂಕು, 92 ಶೈಕ್ಷಣಿಕ ತಾಲೂಕು ಸೇರಿದಂತೆ 50 ಹೊಸ ತಾಲೂಕುಗಳು ಒಳಗೊಂಡಂತೆ ಮತ್ತಿತರ ಕಡೆ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಶಾಲಾ ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ

Last Updated : Aug 13, 2022, 4:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.