ದೆಹಲಿ ಗಣರಾಜ್ಯೋತ್ಸವಕ್ಕೆ ರಾಜ್ಯದ ಸ್ತಬ್ಧಚಿತ್ರ ‘ನಾರಿ ಶಕ್ತಿ’ ಅನಾವರಣ.....

author img

By

Published : Jan 25, 2023, 10:27 PM IST

narishakti tablue

ಗಣರಾಜ್ಯೋತ್ಸವದ ಫಥ ಸಂಚಲನ ಅಂಗವಾಗಿ ನಾರಿ ಶಕ್ತಿ ಸ್ತಬ್ಧಚಿತ್ರ ಸಿದ್ಧ - ಕೇವಲ 10 ದಿನಗಳಲ್ಲಿ ಸಿದ್ದಗೊಂಡ ಸ್ತಬ್ಧಚಿತ್ರ - ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕರ್ನಾಟಕ.

ಬೆಂಗಳೂರು/ನವದೆಹಲಿ: ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿʼ ಸ್ತಬ್ಧಚಿತ್ರವು ಸಂಪೂರ್ಣವಾಗಿ ಸಿದ್ಧಗೊಂಡಿದೆ. ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ.

ವಾರ್ತಾ ಇಲಾಖೆಯು ದೆಹಲಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಪರವಾಗಿ ಸ್ತಬ್ಧಚಿತ್ರದೊಂದಿಗೆ ಪ್ರತಿ ಬಾರಿಯೂ ಪಾಲ್ಗೊಳ್ಳುತ್ತದೆ. ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ವಾರ್ತಾ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 14 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ಸಂತಸ ಹಂಚಿಕೊಂಡಿದ್ದಾರೆ.

2023ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು 1. ಕರ್ನಾಟಕದ ಮಹಿಳೆಯರ ಶೌರ್ಯ, 2. ರೇಷ್ಮೆ ಕರ್ನಾಟಕದ ಹೆಮ್ಮೆ 3. ಕರ್ನಾಟಕದ ಪುಷ್ಪೋದ್ಯಮ 4. ಕರ್ನಾಟಕ : ಸಿರಿಧಾನ್ಯದ ನಾಯಕ ಮತ್ತು 5.ʼನಾರಿ ಶಕ್ತಿʼ ಎಂಬ ಐದು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು. ಇದರಲ್ಲಿ ಸ್ತ್ರೀ ಸಬಲೀಕರಣವನ್ನು ಬಿಂಬಿಸುವ ʼನಾರಿ ಶಕ್ತಿʼ ವಿಷಯವನ್ನು ʼವಿಷಯ ಆಯ್ಕೆಯ ಪರಿಣತರ ತಂಡ ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದ ಮೂವರು ಮಹಿಳಾ ಸಾಧಕಿಯರ ಸಾಧನೆಯನ್ನು ಪ್ರದರ್ಶಿಸುತ್ತಿರುವುದಾಗಿ ಆಯುಕ್ತರು ತಿಳಿಸಿದ್ದಾರೆ.

ಆಜಾದಿ ಕಾ ಅಮೃತ ಮಹೋತ್ಸವʼದ ಅಂಗವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಸಾಧನೆಗಳನ್ನು 'ನಾರಿ ಶಕ್ತಿ' (ವುಮೆನ್ ಪವರ್) ಹೆಸರಿನಲ್ಲಿ ರಾಜ್ಯವು 2023ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಪ್ರಸ್ತುತ ಪಡಿಸಿದೆ. ವಿಷಯ ಆಯ್ಕೆಯ ಬಳಿಕ, ಸ್ತಬ್ಧಚಿತ್ರದ ಮಾದರಿ (ಕೀ ಮಾಡಲ್) ಮತ್ತು ಸಂಗೀತದ ಹಂತವನ್ನು ದಾಟಬೇಕಾಗಿತ್ತು. ಅಂತಾರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು.

ಯುವ ಸಂಗೀತ ನಿರ್ದೇಶಕ ಪ್ರವೀಣ್ ಡಿ. ರಾವ್ ಅವರ ಕನ್ನಡ ಸಂಗೀತವನ್ನು ಹಾಗೆಯೇ ಉಳಿಸಿಕೊಂಡಿತ್ತು. ಕಾರವಾರದ ಪುರುಷೋತ್ತಮ ಪಾಂಡುರಂಗ ನೇತೃತ್ವದ ಹಾಲಕ್ಕಿಯವರ ʼಸುಗ್ಗಿ ಕುಣಿತʼದ 20 ಮಂದಿಯ ಕಲಾವಿದರ ತಂಡಕ್ಕೆ ಅನುಮತಿಯೂ ಸಿಕ್ಕಿತ್ತು. ಹೀಗಾಗಿ, ರಾಜ್ಯವು ಸ್ತಬ್ಧಚಿತ್ರದ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದೆ ಎನ್ನುವಾಗಲೇ 2022ರ ಡಿಸೆಂಬರ್ 28ರಂದು ನಡೆದ ಕೊನೆಯ ಸುತ್ತಿನ ಸಭಾಸೂಚನಾ ಪತ್ರದಲ್ಲಿ ಕರ್ನಾಟಕ ಹೆಸರು ಸೇರ್ಪಡೆಗೊಂಡಿರಲಿಲ್ಲ ಎಂದು ಹೇಳಿದ್ದರು.

ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವಂತ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರವು ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ 2023ರ ಗಣರಾಜ್ಯೋತ್ಸದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿರಲಿಲ್ಲ ಎಂಬುದಾಗಿ ತಿಳಿದುಬಂದಿತ್ತು. ಇಲಾಖೆಯು 2022ರ ಡಿಸೆಂಬರ್ 30 ರಂದು ರಕ್ಷಣಾ ಸಚಿವಾಲಯಕ್ಕೆ ಪತ್ರ ಬರೆದು ಕರ್ನಾಟಕದ ನಿರಂತರ ಸಾಧನೆಯನ್ನು ಪರಿಗಣಿಸಿ ಈ ಬಾರಿಯೂ ಮತ್ತೊಮ್ಮೆ ಅವಕಾಶ ನೀಡುವಂತೆ ಕೋರಿತ್ತು. ಬಳಿಕ ಜನವರಿ 16ರಂದು ಅಧಿಕೃತವಾಗಿ ಕರ್ನಾಟಕದ ಹೆಸರು 2023ರ ಸ್ತಬ್ಧಚಿತ್ರದ ಪಟ್ಟಿಯಲ್ಲಿ ಸೇರ್ಪಡೆಗೊಂಡಿತ್ತು ಇದಾದ ಬಳಿಕ ಕೇವಲ 10 ದಿನಗಳಲ್ಲಿ ಸ್ತಬ್ಧಚಿತ್ರ ರೂಪುಗೊಂಡಿದೆ ಎಂದು ವಿವರಿಸಿದ್ದಾರೆ.

ಸ್ತಬ್ಥಚಿತ್ರದಲ್ಲಿ ಏನಿರಲಿದೆ: ಗಿಡ-ಮರ, ಬೆಟ್ಟ-ಗುಡ್ಡ, ಪಕ್ಷಿಗಳಿಂದ ಕಂಗೊಳಿಸುತ್ತಿರುವ ಸ್ತಬ್ಧಚಿತ್ರದ ಮುಂಭಾಗದಲ್ಲಿ ತೊಟ್ಟಿಲು ತೂಗುತ್ತ, ಕೈನಲ್ಲಿ ಮಗು ಆಡಿಸುತ್ತಿರುವ ಸೂಲಗಿತ್ತಿ ನರಸಮ್ಮರನ್ನು ತೋರಿಸಿದೆ. ಹಚ್ಚ ಹಸುರಿನಿಂದ ಕೂಡಿರುವ ಸ್ತಬ್ಧಚಿತ್ರದ ಮಧ್ಯಭಾಗದಲ್ಲಿ ಗಿಡ ಮರಗಳನ್ನು ಪೋಷಿಸುತ್ತಿರುವ ತುಳಸಿ ಗೌಡ ಹಾಲಕ್ಕಿ ರನ್ನು ತೋರಿಸಿದೆ. ಕಣ್ಣಿಗೆ ಮುದ ನೀಡುವ ಕಾಡಿನ ನಿಜಸ್ವರೂಪದಂತಿರುವ ಸ್ತಬ್ಧಚಿತ್ರದ ಕೊನೆಯ ಭಾಗದಲ್ಲಿ ರಾಜ್ಯ ಹೆದ್ದಾರಿಯ ಆಜುಬಾಜಿನಲ್ಲಿ 8000 ಮರಗಳನ್ನು ನೆಟ್ಟು ನೀರೆರೆದು ಬೆಳೆಸಿದ ಸಾಲುಮರದ ತಿಮ್ಮಕ್ಕ ರನ್ನು ತೋರಿಸಿದೆ. ಇದನ್ನು ಅವರು ಗಿಡಗಳಿಗೆ ನೀರೆರೆಯುತ್ತಿರುವಂತೆ ಬಿಂಬಿಸಿದೆ.

ಇದನ್ನೂ ಓದಿ: ಭಿಕ್ಷಾಟನೆಯಿಂದ ಶಿಕ್ಷಣದತ್ತ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮೊದಲ ಬಾರಿಗೆ 40 ಜನ ಸ್ಲಂ ಮಕ್ಕಳು ಭಾಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.